ಜೆಡಿಎಸ್ನಿಂದ ಸೂರಜ್ ರೇವಣ್ಣ ಉಚ್ಛಾಟನೆ: ಜಿ.ಟಿ. ದೇವೇಗೌಡರು ಹೇಳಿದ್ದೇನು?
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ವಿಚಾರವಾಗಿ ಪಕ್ಷದೊಳಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಏಕೆ ಮುಜುಗರ. ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೆ ಅದಕ್ಕೆ ಆರೂವರೆ ಕೋಟಿ ಜನರು ಕಾರಣವೇ? ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಆಗಿರಬಹುದು, ಯಾರೇ ತಪ್ಪು ಮಾಡಿದ್ದರೂ ತಪ್ಪೇ ಜೆಡಿಎಸ್ ಯಾವತ್ತೂ ತಪ್ಪು ಮಾಡಿದವರ ಪರ ನಿಲ್ಲಲ್ಲ ಎಂದರು.
ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಲೈಂಗಿಕ ದೌರ್ಜನ್ಯ ಸಂಬಂಧ ಯುವಕ ನೀಡಿದ ದೂರಿನ ಮೇರೆಗೆ ಪೊಲೀಸರು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಬಂಧಿಸಿ ತನಿಖೆ ನಡೆಸುತಿದ್ದು, ಇದರಲ್ಲಿ ಯಾವುದೇ ಷಡ್ಯಂತ್ರ ಇಲ್ಲ ಎಂದು ಹೇಳಿದರು.
ಸೂರಜ್ ವಿರುದ್ಧ ಯುವಕನೋರ್ವ ನೀಡಿದ ದೂರಿನ ಬಗ್ಗೆ ಪೊಲೀಸರು ನಿಸ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಇದರಿಂದ ಸತ್ಯಾಸತ್ಯತೆ ಹೊರಬರಲಿದೆ. ಯಾರೇ ತಪ್ಪು ಮಾಡಿದರೂ ತಪ್ಪೆ ಎಂದು ಹೇಳಿದರು.
ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಇವಾಗ ಬೆಲೆ ಏರಿಕೆ ಮಾಡಲಾಗಿದೆ ಎಂದರು.
ಚನ್ನಪಟ್ಟಣ ಉಪ ಚುನಾವಣೆ ವಿಷಯದಲ್ಲಿ ನನಗೆ ವಾಸ್ತವತೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರು ಕುಳಿತು ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದರು.
8 ದಿನ ಸಿಐಡಿ ಕಸ್ಟಡಿಗೆ
ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲಯದಿಂದ ಆದೇಶಿಸಿದೆ.
ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ಒಪ್ಪಿಸಲಾಗಿದ್ದು, ಎಲ್ಲಾ ಕೋನದಲ್ಲಿ ಕೂಡ ತನಿಖೆ ಮಾಡಲು ಮುಂದಾಗಿದೆ. ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ, ದೂರು ಕೊಟ್ಟಿದ್ದ ಸಂತ್ರಸ್ತ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ಸೂರಜ್ ರೇವಣ್ಣ ಆರೋಪಿಸಿದ್ದಾರೆ.












Click it and Unblock the Notifications