ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ; ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ
ಮೈಸೂರು, ಆಗಸ್ಟ್ 08: ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ, ಉಳುವವರಿಗೆ ಭೂಮಿ, ಉಳ್ಳವರಿಗಲ್ಲ ಎಂಬ ಘೋಷಣೆಯೊಂದಿಗೆ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನ ನ್ಯಾಯಾಲಯದ ಮುಂಭಾಗ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.
ನ್ಯಾಯಾಲಯದ ಮುಂಭಾಗ ಸೇರಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದು ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೃಷಿ ಭೂಮಿಯನ್ನು ಖಾಸಗೀಕರಣ ಮಾಡಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ಈ ಎರಡೂ ಕಾಯ್ದೆಗಳ ತಿದ್ದುಪಡಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಅಧಿವೇಶನ ಸಂದರ್ಭದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ನಮ್ಮ ಭೂಮಿ ನಮ್ಮ ಹಕ್ಕು, ಅನ್ಯರಿಗೆ ಮಾರಾಟಕ್ಕಿಲ್ಲ ಫಲಕ ಅಳವಡಿಕೆ ಅಭಿಯಾನಕ್ಕೆ ಕೂಡ ಇಂದು ಚಾಲನೆ ನೀಡಲಾಗುತ್ತಿದ್ದು ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ರೀತಿ ಒಂದು ಗ್ರಾಮದಿಂದ ಅಭಿಯಾನಕ್ಕೆ ಚಾಲನೆ ನೀಡಿ ಹಂತಹಂತವಾಗಿ ಎಲ್ಲ ಹಳ್ಳಿಗಳಲ್ಲೂ ನಾಮಫಲಕ ಅಳವಡಿಸಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಲಾಗುವುದು ಎಂದರು.

ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವರು ಪಾಲ್ಗೊಂಡಿದ್ದರು.












Click it and Unblock the Notifications