ಮೈಸೂರಲ್ಲಿ 'ಮನೆಮನೆಗೆ ಕಾಂಗ್ರೆಸ್' ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು, ಸೆಪ್ಟೆಂಬರ್ 23: ಮುಂಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಮುಂದಿನ 2018ರ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಿಳಿಸುವ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ನಡೆಸುತ್ತಿದೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಿನಕಲ್ ನ ನನ್ನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ , ಮುಂದೆಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಸಿದ್ದರಾಮಯ್ಯನವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕೆಂದು ಮನವಿ ಮಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಎಲ್ಲರಿಗೂ ಸಮಾನತೆಯ ಹಕ್ಕುಗಳನ್ನು ನೀಡಿದ್ದರೂ ಬಿಜೆಪಿಯವರು ಧರ್ಮಧರ್ಮಗಳ ನಡುವೆ ಜಾತಿಜಾತಿಗಳ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ದೂರಿದರು. ಕೃಷಿ ಆಧಾರಿತ ಕಸುಬುಗಳನ್ನು ನಾಶವಾಗಿದ್ದು, ಬಂಡವಾಳಶಾಹಿಗಳ ಹಿಡಿತ ಹೆಚ್ಚಾಗುತ್ತಿದೆ. ಇದನ್ನು ತಗ್ಗಿಸಬೇಕು. ಮೂಲಭೂತ ವಾದಿಗಳ ಕೈಗೆ ಆಡಳಿತ ನೀಡಿದರೆ, ಬಡವರು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ದೂರಿದರು.
ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಶಾದಿಭಾಗ್ಯ, ಹಾಲಿಗೆ ಸಬ್ಸಿಡಿ, ರೈತರಸಾಲ ಮನ್ನಾ, ಕೆರೆ ತುಂಬಿಸುವ ಯೋಜನೆ, ನಾಲೆಗಳ ಆಧುನೀಕರಣ, ರಸ್ತೆಗಳ ಅಭಿವೃದ್ಧಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ವಿಶೇಷ ಕಾನೂನು ಮಾಡಿ ಸಾವಿರಾರು ಕೋಟಿ ರೂ. ಗಳನ್ನು ಖರ್ಚು ಮಾಡುತ್ತಿದ್ದೇವೆ. ನುಡಿದಂತೆ ನಡೆದಿದ್ದೇವೆ, ಹೇಳಿದಂತೆ ಮಾಡಿದ್ದೇವೆ. ನಾವು ಮಾಡಿರುವ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಮನೆಮನೆಗೆ ತೆರಳಿ ಜನಸಾಮಾನ್ಯರಿಗೆ, ಯುವಕರಿಗೆ, ಯುವತಿಯರಿಗೆ, ರೈತರಿಗೆ ಜಾಗೃತಿ ಮೂಡಿಸುವ ಮುಖಾಂತರ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರಲ್ಲದೆ, ಸಾಧನೆಯ ಕರಪತ್ರಗಳನ್ನು ಮನೆಮನೆಗೆ ವಿತರಿಸಿದರು.
ಈ ಸಂದರ್ಭದಲ್ಲಿ ವರುಣಾ ಕ್ಷೇತ್ರ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ. ಸತ್ಯನಾರಾಯಣ, ಜಿ.ಪಂ. ಮಾಜಿ ಅಧ್ಯಕ್ಷರಾದ ಕೆ.ಎಂ. ಮರೀಗೌಡ, ಕೂರ್ಗಳ್ಳಿ ಮಹದೇವ್, ಕೆಪಿಸಿಸಿ ಕಾರ್ಯದರ್ಶಿ ಮಳವಳ್ಳಿ, ಶಿವಣ್ಣ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಸಿ.ಎನ್. ಮಂಜೇಗೌಡ ಮೊದಲಾದ ಮುಖಂಡರು ಇದ್ದರು.












Click it and Unblock the Notifications