'ಕುಮಾರ ಪರ್ವ 2018’ ಯಾತ್ರೆಗೆ ಮೈಸೂರಿನಲ್ಲಿ ನ.7ರಂದು ಚಾಲನೆ
ಬೆಂಗಳೂರು, ನವೆಂಬರ್ 06 : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನ.7ರಿಂದ ರಾಜ್ಯ ಪ್ರವಾಸ, ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. 'ಕುಮಾರ ಪರ್ವ 2018' ಎಂಬ ಹೆಸರಿನಲ್ಲಿ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭಲಿದ್ದು, ಮೈಸೂರಿನಲ್ಲಿ ರಾಜ್ಯ ಪ್ರವಾಸಕ್ಕೆ ಚಾಲನೆ ಸಿಗಲಿದೆ.
ಮಂಗಳವಾರ ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಲಿಂಗದೇವರಕೊಪ್ಪ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ 'ಕುಮಾರ ಪರ್ವ 2018' ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲು ಸಿದ್ಧವಾಗಿದೆ. ಸಿದ್ದರಾಮಯ್ಯ ಅವರ ತವರು ಕ್ಷೇತ್ರ ಚಾಮುಂಡೇಶ್ವರಿಯಿಂದ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭಿಸುತ್ತಿರುವುದು ವಿಶೇಷ. 'ಕರ್ನಾಟಕ ವಿಕಾಸ ವಾಹಿನಿ' ವಿಶೇಷ ಬಸ್ಸಿನಲ್ಲಿ ಕುಮಾರಸ್ವಾಮಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಮೈಸೂರಿನಿಂದ ಹೊರಡುವ ಪ್ರವಾಸ ಮೊದಲ ಹಂತದಲ್ಲಿ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ. ಚಿಕ್ಕಮಗಳೂರಿನಲ್ಲಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಯಾತ್ರೆ ತಲುಪಲಿದ್ದು, ಸಮಾವೇಶ, ಪಾದಯಾತ್ರೆಗಳನ್ನೂ ಆಯೋಜನೆ ಮಾಡಲಾಗಿದೆ.












Click it and Unblock the Notifications