ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎನ್ನುವ ಗಾಬರಿ ನನಗೆ ಇಲ್ಲ: ಕುಮಾರಸ್ವಾಮಿ
ಮೈಸೂರು, ನವೆಂಬರ್ 18: ಪಂಚರತ್ನ ಯಾತ್ರೆಗೂ ಮುನ್ನ ಚಾಮುಂಡೇಶ್ವರಿಗೆ ಎಚ್.ಡಿ. ಕುಮಾರಸ್ವಾಮಿ ಪ್ರಾರ್ಥನೆ ಸಲ್ಲಿಸಿದರು. ಪಕ್ಷದ ಮುಖಂಡರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಿದರು. ಪಂಚರತ್ನ ಯಾತ್ರೆ ಯಶಸ್ವಿಯಾಗಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆಗೆ ಮಳೆಯ ಸಮಸ್ಯೆಯಿಂದ ಮುಂದೂಡಲಾಗಿತ್ತು. ಮುಂದೆ ಯಾವುದೇ ಸಮಸ್ಯೆಯಾಗದಿರಲಿ ಎಂದು ನಂಜುಡೇಶ್ವರ ಹಾಗೂ ಚಾಮುಂಡಿ ತಾಯಿಯ ಆಶೀರ್ವಾದ ಪಡೆದಿದ್ದೇನೆ. ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಯಾತ್ರೆ ಆರಂಭವಾಗಿದೆ. ನಾಡಿನ ಜನತೆಗೆ ತಿಳುವಳಿಕೆ ಮೂಡಿಸಲು ಯಾತ್ರೆ ಆರಂಭಿಸಿದ್ದೇವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೇಲೆ ನಿರ್ಲಕ್ಷ್ಯ ತೋರಿದೆ. ನೀರಾವರಿ ವಿಚಾರವಾಗಿ ತೊಂದರೆಯಾಗಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಮೂರುವರೆ ವರ್ಷದ ಹಿಂದೆಯೇ ಡಿಪಿಆರ್ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ತುಂಗಭದ್ರ, ಕೃಷ್ಣ ನೀರಾವರಿ ಯೋಜನೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುತ್ತೇವೆ ಎಂದು ಹೇಳುತ್ತೇಲೇ ಬಂದಿದೆ. ಆದರೆ ತೀರ್ಮಾನ ಕೈಗೊಂಡಿಲ್ಲ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸಕಾರತ್ಮಕವಾಗಿ ಸ್ಪಂದಿಸುವುದಿಲ್ಲ. 70 ವರ್ಷಗಳಿಂದ ನಮ್ಮ ರಾಜ್ಯವನ್ನು ಎಲ್ಲಾ ಕೇಂದ್ರಸರ್ಕಾರಗಳು ಕಡೆಗಣಿಸಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಮಾತು ಮುಂದುವರಿಸಿದ ಅವರು, 123 ಗುರಿಇಟ್ಟು ನಾವು ಹೊರಟಿದ್ದೇವೆ. ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಇದ್ದಾರೆ. ಕೆಲವರು ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ಹೇಳಿದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಸಂಗ್ರಹ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಇದರಲ್ಲಿ ಕೆಲವು ತಪ್ಪುಗಳು ಆಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿ ಸರ್ಕಾರಿ ನೌಕರರು ಎಂದು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ. ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರು ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ 20 ವರ್ಷ ನಾವೇ ಅಧಿಕಾರ ನಡೆಸುತ್ತೇವೆ ಎಂದಿದ್ದರು, ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.












Click it and Unblock the Notifications