ಜೆಡಿಎಸ್ನಿಂದ ಎಚ್ಡಿಕೆಯೇ ಸಿಎಂ ಅಭ್ಯರ್ಥಿ!
ಮೈಸೂರು, ಜೂನ್ 25: ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಮುಂದಿನ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ತಯಾರಿಯನ್ನು ಈಗಿನಿಂದಲೇ ಆರಂಭಿಸಿವೆ.
Recommended Video
ಚುನಾವಣೆಗೆ ಹೋಗುವ ಮುನ್ನ ಯಾರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು ಎಂಬ ವಿಚಾರದಲ್ಲಿಯೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಮೈಮೇಲೆ ಕೆಸರು ಎರಚಿಕೊಂಡಿದ್ದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್ನಲ್ಲಂತೂ ಈ ವಿಚಾರ ಒಂದು ರೀತಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದರೆ. ಬಿಜೆಪಿಯಲ್ಲಿ ಒಂದು ಹಂತದ ಜಟಾಪಟಿಯನ್ನು ನಾಯಕರು ಮುಗಿಸಿದ್ದು, ಹೈಕಮಾಂಡ್ ಹಾಕಿದ ಮೂಗುದಾರದಿಂದ ಸದ್ಯಕ್ಕೆ ಸುಮ್ಮನಾಗಿದ್ದಾರೆ. ಶಾಸಕ ಜಮೀರ್ ಅಹ್ಮದ್ ಸೇರಿದಂತೆ ಸಿದ್ದರಾಮಯ್ಯ ಆಪ್ತ ವಲಯದ ಮಾಜಿ ಶಾಸಕರು, ಮಾಜಿ ಸಚಿವರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಇರಿಸು ಮುರಿಸು ತರುತ್ತಿದ್ದು, ಹೈಕಮಾಂಡ್ಗೂ ಈ ಬಗ್ಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆ ಒಳಜಗಳಕ್ಕೆ ಕಾರಣವಾಗಿದೆ. ಆದರೆ ಈ ಪರಿಸ್ಥಿತಿ ಜೆಡಿಎಸ್ನಲ್ಲಿ ಇದ್ದಂತೆ ಕಾಣುತ್ತಿಲ್ಲ.

ಸಿಎಂ ಅಭ್ಯರ್ಥಿ ವಿಚಾರ ಮಾತಾಡಬೇಡಿ
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ವಯಸ್ಸಾಗಿದೆ ಎಂಬ ಕ್ಯಾತೆ ತೆಗೆದು ಕಿತ್ತಾಡಿದ ಬಿಜೆಪಿ ನಾಯಕರು, ಮುಂದಿನ ವಿಧಾನಸಭೆ ಚುನಾವಣೆ ಹೊತ್ತಿಗೆ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೋ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಹಿಂಬಾಲಕರು ತಮ್ಮ ನಾಯಕನ ಮೇಲಿನ ಪ್ರೀತಿಗಾಗಿ ಕಾರ್ಯಕರ್ತರೇ ಸಿಎಂ ಅಭ್ಯರ್ಥಿ ಎಂದು ಘೋಷಣೆ ಕೂಗುವ ಮೂಲಕ ನಾಯಕರ ನಡುವೆ ವೈಮಸ್ಸು, ವಿವಾದಗಳಿಗೆ ಕಾರಣವಾಗುವುದರೊಂದಿಗೆ ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯಗಳಿಗೆ ಕಾರಣವಾಗುತ್ತಿದೆ. ಇದೀಗ ಪಕ್ಷದ ಮೇಲ್ದರ್ಜೆ ನಾಯಕರು ಸಿಎಂ ಅಭ್ಯರ್ಥಿ ವಿಚಾರದ ಬಗ್ಗೆ ಮಾತನಾಡದಂತೆ ಹಿಂಬಾಲಕರು ಸೇರಿದಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಆ ಮೂಲಕ ಸದ್ಯಕ್ಕೆ ಸಿಎಂ ಅಭ್ಯರ್ಥಿ ವಿಚಾರದಲ್ಲಿನ ಗೊಂದಲಗಳಿಗೆ ತೆರೆ ಬಿದ್ದಂತೆ ಗೋಚರಿಸುತ್ತಿದೆ.
ಜೆಡಿಎಸ್ನಲ್ಲಿ ಯಾವುದೇ ಗೊಂದಲವಿಲ್ಲ
ರಾಷ್ಟ್ರೀಯ ಪಕ್ಷಗಳೆರಡರ ಕತೆ ಆ ರೀತಿಯಾದರೆ, ಜೆಡಿಎಸ್ನಲ್ಲಿ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಅವತ್ತಿನಿಂದ ಇವತ್ತಿನವರೆಗೆ ಎಚ್.ಡಿ. ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆದವರು. ಹೀಗಾಗಿ ಮುಂದೆಯೂ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವುದರಲ್ಲಿ ಎರಡು ಮಾತಿಲ್ಲ.
ಈ ಬಗ್ಗೆ ಜೆಡಿಎಸ್ ಪಕ್ಷದಲ್ಲಿ ಯಾವುದೇ ಗೊಂದಲವಿದ್ದಂತೆ ಕಾಣುತ್ತಿಲ್ಲ. ನಾಯಕರು ಮತ್ತು ಕಾರ್ಯಕರ್ತರ ಸಹಮತದ ನಾಯಕರಾಗಿರುವ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ನಾಯಕನಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಎದ್ದಿರುವ ಗೊಂದಲ ಜೀವಂತವಾಗಿರುವಾಗಲೇ ಎಚ್.ಡಿ. ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಹೇಳುವ ಮೂಲಕ ಮಾಜಿ ಸಚಿವ ಎಚ್.ಡಿ. ರೇವಣ್ಣ ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂಬುದನ್ನು ದೃಢಪಡಿಸಿದ್ದಾರೆ.

ಅಧಿಕಾರ ನೀಡಿದರೆ ಆಡಳಿತ ನಡೆಸುತ್ತೇವೆ
ಈ ಕುರಿತಂತೆ ಮಾತನಾಡಿರುವ ರೇವಣ್ಣ, "ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರವಾದ ಉತ್ತಮ ಆಡಳಿತ ನೀಡಿದ್ದಾರೆ. ರಾಜ್ಯದ ಜನ ಮತ್ತೊಮ್ಮೆ ಅವಕಾಶ ನೀಡಿದರೆ, ರೈತರು, ಬಡವರು, ಜನ ಸಾಮಾನ್ಯರ ಪರವಾಗಿ ಉತ್ತಮ ಆಡಳಿತ ನೀಡಲಿದ್ದೇವೆ. ಇಲ್ಲದಿದ್ದರೆ ವಿರೋಧ ಪಕ್ಷದಲ್ಲಿ ಆರಾಮವಾಗಿ ಇರುತ್ತೇವೆ,'' ಎಂದು ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಜತೆ ಅಧಿಕಾರ ನಡೆಸಿ ಅನುಭವವಿದೆ. ಈ ಎರಡು ಪಕ್ಷಗಳ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಾರೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸಜ್ಜಾಗುತ್ತಿದ್ದಾರೆ. ಆದರೆ ಜೆಡಿಎಸ್ ಪಕ್ಷದಲ್ಲಿ ನಾಯಕರ ಮತ್ತು ಮುಂದಾಳತ್ವದ ಕೊರತೆ ಎದ್ದು ಕಾಣುತ್ತಿದ್ದು, ಈಗಲೂ ಇಳಿವಯಸ್ಸಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರೇ ಪ್ರವಾಸ ಮಾಡಿ ಸಂಘಟನೆ ಮಾಡಬೇಕಾದ ಪರಿಸ್ಥಿತಿಯಿದೆ.
ಜೆಡಿಎಸ್ ತಂತ್ರಗಾರಿಕೆ ಏನಿರಬಹುದು?
ಇದೀಗ ಜೆಡಿಎಸ್ನಿಂದ ಆಯ್ಕೆಯಾಗಿ ಬಂದಿರುವ ಶಾಸಕರ ಪೈಕಿ ಬಹುತೇಕರು ಮುಂದಿನ ವಿಧಾನಸಭಾ ಚುನಾವಣಾ ವೇಳೆಗೆ ಪಕ್ಷದಲ್ಲಿಯೇ ಉಳಿಯುತ್ತಾರೆಂಬ ನಂಬಿಕೆಯೂ ಇಲ್ಲದಾಗಿದೆ. ಹೀಗಾಗಿ ಎಲ್ಲ ಶಾಸಕರನ್ನು ಒಟ್ಟಾಗಿ ಕರೆದುಕೊಂಡು ಚುನಾವಣೆ ಹೋಗುವುದು ಈ ಬಾರಿ ಅಷ್ಟೊಂದು ಸುಲಭವಾಗಿ ಉಳಿದಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದತ್ತ ಅನುಕಂಪವಿತ್ತು. ಆದರೆ ಅದು ಇಲ್ಲಿ ತನಕ ಉಳಿದಿಲ್ಲ. ಆದರೆ ಮುಂದಿನ ಚುನಾವಣೆ ಹೊತ್ತಿಗೆ ಸಿಎಂ ಅಭ್ಯರ್ಥಿಯಾಗಿ ಎಚ್ಡಿಕೆ ಯಾವ ರೀತಿಯ ತಂತ್ರಗಾರಿಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications