ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಮೈಸೂರು ಪ್ರವಾಸದ ಡಿಟೈಲ್ಸ್ ಇಲ್ಲಿದೆ
ಮೈಸೂರು, ಜೂನ್ 19: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಯೋಗ ದಿನಾಚಾರಣೆಯಲ್ಲಿ ಭಾಗವಹಿಸಲು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಜೂ. 20 ರಂದು ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ದೇಶದ ಪ್ರಥಮ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ' ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್' ಗೆ ಪ್ರಧಾನಿ ಮೋದಿ ಚಾಲನೆ ಕೊಡಲಿದ್ದಾರೆ. ಅ ಬಳಿಕ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಆಯೋಜಿಸಿರುವ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಇದರ ಜತೆಗೆ ಅದೇ ದಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಿದ್ದು, ಕೊಮ್ಮಘಟ್ಟದಲ್ಲಿ ಸಬ್ ಅರ್ಬನ್ ರೈಲ್ವೇ ಯೋಜನೆಗೆ ಭೂಮಿ ಪೂಜೆ ನೆರವೇರಿಸಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಜೂ.20ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಬೇಸ್ ಹೆಲಿಪ್ಯಾಡ್ನಿಂದ ಹೊರಟು 5.55ಕ್ಕೆ ಮೈಸೂರು ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ರಸ್ತೆ ಮೂಲಕ ಸಾಗಿ ಸಂಜೆ 6 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಪುರಸ್ಕೃತ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂಜೆ 7.10ಕ್ಕೆ ಮಹಾರಾಜ ಕಾಲೇಜು ಮೈದಾನದಿಂದ ರಸ್ತೆಯ ಮೂಲಕ ಹೊರಟು 7.20ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಮಠದ ಮೈಸೂರು ಶಾಖೆಗೆ ಭೇಟಿ ನೀಡಿ ವೇದ ಪಾಠಶಾಲಾ ಕಟ್ಟಡವನ್ನು ಉದ್ಘಾಟಿಸುವರು. 8.15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವರು. 8.55ಕ್ಕೆ ಚಾಮುಂಡಿ ಬೆಟ್ಟದಿಂದ ಹೊರಟು 8.10 ಕ್ಕೆ ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ತಂಗಲಿದ್ದಾರೆ.
ಜೂ. 21 ರಂದು ಬೆ. 6.20 ಕ್ಕೆ ರ್ಯಾಡಿಸನ್ ಬ್ಲೂ ಹೋಟೆಲ್ನಿಂದ ಹೊರಟು 6.30ರಿಂದ 7.45 ಗಂಟೆ ವರೆಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆ. 7.45 ರಿಂದ 8 ಗಂಟೆ ವರೆಗಿನ ಸಮಯವನ್ನು ಕಾಯ್ದಿರಿಸಲಾಗಿದೆ. ಬೆ. 8 ರಿಂದ 8.20 ರವರೆಗೆ ವಸ್ತು ಪ್ರದರ್ಶನಲ್ಲಿ ಆಯೋಜಿಸಿರುವ ಯೋಗ ವಿಶೇಷ ವಸ್ತುಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆ.9.25 ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಕೇರಳದ ತಿರುವನಂತಪುರಂಗೆ ಪ್ರಯಾಣ ಬೆಳೆಸಲಿದ್ದಾರೆ.

ರಸ್ತೆ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧ:
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಗರಕ್ಕೆ ಆಗಮಿಸಲಿರುವುದು ಅವರು ಸಂಚರಿಸುವ ಮಾರ್ಗದಲ್ಲಿ ಗಣ್ಯರ ಸುಗಮ ಸಂಚಾರ ಮತ್ತು ಸುರಕ್ಷತೆ ದೃಷ್ಟಿಯಿಂದ ವಾಹನ ನಿಲುಗಡೆ ನಿಷೇಧಿಸಲಾಗಿದೆ. ನಗರದ ಕೃಷ್ಣರಾಜ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಲಕ್ಷ್ಮಿಪುರಂ ಮತ್ತು ಕೃಷ್ಣರಾಜ ಕಾನೂನು-ಸುವ್ಯವಸ್ಥೆ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಒಳಪಡುವ ಎಂ.ಎನ್.ಜೋಯಿಸ್ ವೃತ್ತದಿಂದ ರಾಮಸ್ವಾಮಿ ವೃತ್ತ, ತಾತಯ್ಯ ವೃತ್ತ, ಬಸವೇಶ್ವರ ವೃತ್ತ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ನಂಜನಗೂಡು ರಸ್ತೆ ಹಾಗೂ ರಾಜಹಂಸ ವೃತ್ತದವರೆಗಿನ ರಸ್ತೆಯ ಎರಡು ಬದಿಗಳಲ್ಲಿ ತಾತ್ಕಾಲಿಕವಾಗಿ ಜೂನ್ 20 ಮತ್ತು 21ರಂದು ವಾಹನ ನಿಲುಗಡೆಯನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.












Click it and Unblock the Notifications