ಈ 3 ಕ್ಷೇತ್ರಗಳಲ್ಲಿ ಯಾವುದಾದರೂ ಒಂದರಿಂದ ಸ್ಪರ್ಧಿಸುವೆ: ಸಿದ್ದರಾಮಯ್ಯ ಘೋಷಣೆ
ಮೈಸೂರು, ನವೆಂಬರ್ 18: 2023ರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಎರಡು ಕ್ಷೇತ್ರದಿಂದಲ್ಲ, ಒಂದೇ ಕ್ಷೇತ್ರದಿಂದ ಕಣಕ್ಕಿಳಿಯುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಕೋಲಾರ, ಬಾದಾಮಿ ಹಾಗೂ ವರುಣಾ ಕ್ಷೇತ್ರವನ್ನು ಅಂತಿಮವಾಗಿ ಆಯ್ಕೆ ಮಾಡಿದ್ದೇನೆ. ಚುನಾವಣೆ ದಿನಾಂಕ ಪ್ರಕಟವಾದ ಮೇಲೆ ಹೈಕಮಾಂಡ್ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ಸೋಲಿನ ಭಯದಿಂದ ಸರ್ವೆ ಮೊರೆ ಹೋಗಿದ್ದಾರೆಂಬುದು ಪ್ರತಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರತಿಪಕ್ಷಗಳ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳಲ್ಲ. ಸೋಲಿನ ಭಯಕ್ಕೆ ಸಮೀಕ್ಷೆ ನಡೆಸಿದ್ದಾರೆ ಎನ್ನುವುದು ಮೂರ್ಖತನದ ಹೇಳಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ಲವೇ? ಆಗ ಬಿಜೆಪಿಯವರು ಸರ್ವೆ ಮಾಡಿಸಿರಲಿಲ್ಲವೇ? ಸರ್ವೆ ಮಾಡಿಸಿದರೆ ತಪ್ಪೇನು? ವೈಯಕ್ತಿಕವಾಗಿ ನಾನು ಸರ್ವೆ ಮಾಡಿಸಿಲ್ಲ. ಪಕ್ಷ ಸರ್ವೆ ಮಾಡಿಸಿದೆ" ಎಂದು ಸಮರ್ಥಿಸಿಕೊಂಡರು.

ಜೆಡಿಎಸ್ ಪಂಚರತ್ನ ಯಾತ್ರೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಯಾವ ಯಾತ್ರೆಯನ್ನಾದರೂ ಮಾಡಿಕೊಳ್ಳಲಿ, ಪಂಚರತ್ನ, ಅಷ್ಟರತ್ನ, ದಶರತ್ನ ಯಾತ್ರೆ ಬೇಕಾದರೂ ಮಾಡಲಿ. ನಾನು ಯಾರಿಗೂ, ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿರುವ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ನುಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತಿರುವಾಗಿಯೇ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಇರುತ್ತಾರೆಂಬ ಕಾರಣಕ್ಕಾಗಿ ಅವರ ಮಾಹಿತಿಯನ್ನೇ ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಡಲಾಗಿದೆ. ಶನಿವಾರ ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಧರಣಿ ಮಾಡುತ್ತೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ದೂರು ನೀಡಲಾಗಿದೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮೊದಲಾದವರು ಇದ್ದರು.











Click it and Unblock the Notifications