ಸಿಎಂ ಆಗುತ್ತಿರುವುದು ಸಂಪೂರ್ಣ ತೃಪ್ತಿ ತಂದಿಲ್ಲ: ಕುಮಾರಸ್ವಾಮಿ
Recommended Video

ಮೈಸೂರು, ಮೇ 23 : ಇಂದಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ ಎಂದು ನಿಯೋಜಿತ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಚಾಮುಂಡೇಶ್ಚರಿಗೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸೆಯಾಗಿತ್ತು ಎಂದು ತಿಳಿಸಿದರು.
ಇಂದು ಪರಮೇಶ್ವರ್ ನನ್ನೊಂದಿಗೆ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಸಚಿವ ಸಂಪುಟದ ಸದಸ್ಯರ ಪ್ರಮಾಣಚನ ನಂತರ ಗೊತ್ತಾಗಲಿದೆ. ಸಾಲ ಮನ್ನಾ ವಿಚಾರದಲ್ಲಿ ಯೂ ಟರ್ನ್, ರೈಟ್ ಟರ್ನ್ ಯಾವುದೂ ಇಲ್ಲ. ಸಮಯ ಬೇಕು ಅಷ್ಟೆ ಎಂದು ತನ್ನ ವಿರೋಧಿಗಳಿಗೆ ಟಾಂಗ್ ನೀಡಿದರು.

ಸಮ್ಮಿಶ್ರ ಸರ್ಕಾರವಾದ ಕಾರಣ ಕಾಂಗ್ರೆಸ್ ಪಕ್ಷವನ್ನು ವಿಶ್ವಾಸಕ್ಕೆ ಪಡೆದು ಆಡಳಿತ ಮಾಡಬೇಕಾಗಿದೆ. ರೈತರ ಸಾಲ ಮನ್ನಾ ಬಗ್ಗೆ ಗಂಭೀರ ಚಿಂತನೆ ಆರಂಭವಾಗಿದೆ. ರೈತರು ಹಾಗೂ ರೈತ ಮುಖಂಡರು ತಾಳ್ಮೆ ವಹಿಸಬೇಕು ಎಂದು ಭರವಸೆ ಕೊಟ್ಟರು.
ನಾನು ನೀಡಿದ ವಾಗ್ದಾನಗಳನ್ನು ಈಡೇರಿಸದೆ ಇರುವುದಿಲ್ಲ. ಕುಮಾರಸ್ವಾಮಿ ಜನರ ಮಧ್ಯೆ ಬೆಳೆದವನು. ಅವರಿಗೋಸ್ಕರನೇ ಅಧಿಕಾರಕ್ಕೆ ಬಂದಿರೋದು ಎಂಬ ನಂಬಿಕೆ ಇರಲಿ. ರೈತರ ಪರಿಸ್ಥಿತಿ ಕೇವಲ ಸಾಲ ಮನ್ನಾಕ್ಕೆ ಸೀಮಿತಗೊಳಿಸುವುದಿಲ್ಲ.
ಇಸ್ರೇಲ್ ಮಾದರಿಯ ಕೃಷಿ ನೀತಿ ಸೇರಿದಂತೆ ಹಲವಾರು ಸುಧಾರಿತ ಕೃಷಿ ತರುವ ಆಲೋಚನೆ ಇದೆ. ನನ್ನ ಕಾರ್ಯ ವೈಖರಿ ಎಂದಿನಂತೆಯೇ ಇರುತ್ತದೆ. ಸಮ್ಮಿಶ್ರ ಸರ್ಕಾರದಲ್ಲಿ ಇತಿಮಿತಿಗಳ ನಡುವೆ ಉತ್ತಮ ಆಡಳಿತ ನೀಡುವೆ.
ಜನಸಾಮಾನ್ಯರಿಗೆ ಸಿಎಂ ಮನೆ ಬಾಗಿಲು ಸದಾ ತೆರದಿರುತ್ತದೆ. ಜನಸಾಮಾನ್ಯರಿಗೆ ನೇರವಾಗಿ ಸ್ಪಂದಿಸುವುದೇ ನನ್ನ ಉದ್ದೇಶ. ರೈತ ಮುಖಂಡರು ಜಾತಿ ನೆಲೆಯಲ್ಲಿ ಆಲೋಚನೆ ಮಾಡಬಾರದು ಬಿಜೆಪಿಯವರು ಕರಾಳ ದಿನಾಚರಣೆ ಮಾಡಲಿ, ಅಭ್ಯಂತರವಿಲ್ಲ.
ವಿಶ್ವಾಸಮತ ಮುಗಿದ ಮೇಲೆ ರಾಜಕಾರಣ ಬದಿಗಿಟ್ಟು ರಾಜ್ಯ ಕಟ್ಟುವ ಕೆಲಸದಲ್ಲಿ ಅವರು ಭಾಗಿಯಾಗಲಿ ಎಂದು ತಿಳಿಸಿದರು.












Click it and Unblock the Notifications