ಸಚಿವ ಸ್ಥಾನ ಸಿಗದಿದ್ದರೂ ಬಿಜೆಪಿಗೆ ಬೆಂಬಲ; ಉಚ್ಚಾಟಿತ ಶಾಸಕ
ಮೈಸೂರು, ಜನವರಿ 11: ನನಗೆ ಸಚಿವ ಸ್ಥಾನ ನೀಡದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಯಲ್ಲಿ ಇರುತ್ತೇನೆ. ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಹೇಳಿದರು.
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ? ಸಚಿವ ಸ್ಥಾನ ಕೊಟ್ಟರೆ ಅಭಿವೃದ್ಧಿ ಕೆಲಸ ಮಾಡುವೆ. ಆದರೆ, ಕೊಡುವುದು, ಬಿಡೋದು ಅವರಿಗೆ ಬಿಟ್ಟಿದ್ದು ಎಂದು ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.
ಬಿಜೆಪಿ ಸೇರಲು ಸಿದ್ದ, ಕೊಳ್ಳೇಗಾಲ ಶಾಸಕ ಎನ್.ಮಹೇಶ್: ಬಟ್ ಕಂಡೀಷನ್ ಅಪ್ಲೈ
ನನಗೆ ಸಚಿವ ಸ್ಥಾನ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೆ, ನಾನು ಯಡಿಯೂರಪ್ಪ ಜೊತೆ ಇರುವ ನಿರ್ಧಾರ ಮಾಡಿದ್ದೇನೆ. ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.