Siddaramaiah: ಈ ರಾಜಕೀಯ ತೊಂದರೆಗಳ ವಿರುದ್ಧ ಕಾನೂನಾತ್ಮಕವಾಗಿ ಗೆಲ್ಲುತ್ತೇನೆ: ಸಿದ್ದರಾಮಯ್ಯ
ಮೈಸೂರು, ಸೆಪ್ಟಂಬರ್ 29: ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದೆಲೆ, ಈರನಗೆರೆ ಬದನೆಕಾಯಿ ಮೈಸೂರಿನ ಹೆಮ್ಮೆಯ ಸಾಂಪ್ರದಾಯಿಕ ಬೆಳೆಗಳಾಗಿವೆ. ಈ ಬೆಳೆಗಳ ರಕ್ಷಣೆ, ವಿಸ್ತರಣೆಗೆ ಸರ್ಕಾರದಿಂದ ವಿಶೇಷ ಕಾರ್ಯಕ್ರಮ ಘೋಷಣೆ ಮಾಡುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುವ ಬಗ್ಗೆ ಮಾತನಾಡಿದರು.
ಹೌದು, ಭಾನುವಾರ ಮೈಸೂರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಶೋಕಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ 245 ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡುವುದು ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಶೋಕಪುರಂನ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕಾರ್ಯಕ್ರಮಗಳ ಪಟ್ಟಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಸೂಚಿಸಲಾಗಿದೆ. ಅಗತ್ಯ ಅನುದಾನ ಕೊಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ನಾವೆಲ್ಲಾ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಾದಿಗಳು. ಅವಕಾಶಗಳಿಂದ ವಂಚಿತರಾದ ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂಬುದು ನಮ್ಮ ಸಂವಿಧಾನದ ಆಶಯವಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ 10 ಸಂಪುಟಗಳ ಭಾಷಣವನ್ನು ನಾನು ಕನ್ನಡಕ್ಕೆ ಅನುವಾದಿಸಿದ್ದೇನೆ. ಈ ಎಲ್ಲವನ್ನೂ ಓದಬೇಕು ಎಂದು ಹೇಳಿದರು.

ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ, ಹೆದರಲ್ಲ: ಸಿದ್ದರಾಮಯ್ಯ
ಇಂದಿನ ಮುಡಾ ಹಗರಣ, ಭ್ರಷ್ಟಾಚಾರ ಆರೋಪಗಳ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೇನೆ. ಭ್ರಷ್ಟಾಚಾರ ಮಾಡಿಲ್ಲ ಎಂದ ಅವರು, ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ. ಈಗಾಗಲೇ ಬಹಳ ಜನ ಬಂದು ನನಗೆ, "ಧೈರ್ಯವಾಗಿರಿ, ರಾಜೀನಾಮೆ ಕೊಡಬೇಡಿ" ಎಂದು ಹೇಳಿದ್ದಾರೆ. ನಾನು ಷಡ್ಯಂತ್ರಗಳಿಗೆ ಹೆದರುವವನೇ ಅಲ್ಲ. ರಾಜಕೀಯವಾಗಿ ನನಗೆ ಒಂದರೆಡು ತಿಂಗಳ ತೊಂದರೆ ಕೊಡಬಹುದು. ಆದರೆ ಕಾನೂನಾತ್ಮಕವಾಗಿ ನಾನು ಗೆದ್ದೇ ಗೆಲ್ತೇನೆ. ರಾಜಕೀಯವಾಗಿ ಇದನ್ನೆಲ್ಲಾ ಎದುರಿಸಿ ನಿಲ್ಲೋದು ನನಗೆ ಗೊತ್ತಿದೆ ಎಂದು ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದರು.
ಜಾತಿ ಗಣತಿ ಜಾರಿಗೆ ಶೀಘ್ರ ಕ್ರಮ: ಸಿಎಂ
ಮೈಸೂರಿನಲ್ಲಿ ನಡೆಎದ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳ ನಂತರವೂ ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದೆ. ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ, ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಜಾತಿ ಜನಗಣತಿ ನಮ್ಮ ಪಕ್ಷದ ಸಿದ್ದಾಂತವೂ ಆಗಿದೆ. ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ 1930ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.












Click it and Unblock the Notifications