ಕಬಿನಿ ಹಿನ್ನೀರು ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ: ನೋಟಿಸ್ ಜಾರಿ
ಮೈಸೂರು, ಜುಲೈ 14: ಸೂಕ್ಷ್ಮ ಪರಿಸರ ವಲಯದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರೆಸಾರ್ಟ್ ನಿರ್ಮಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅರಣ್ಯ ಇಲಾಖೆ ನೋಟೀಸ್ ನೀಡುವ ಮೂಲಕ ಬಿಸಿ ಮುಟ್ಟಿಸಿದೆ.
ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಎನ್.ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಾಪುರ ಗ್ರಾಮವು ಕಬಿನಿ ಹಿನ್ನೀರಿನ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಈ ಪ್ರದೇಶದಲ್ಲಿ ಗಣಿ ಉದ್ಯಮಿಯೊಬ್ಬರು ಬೇನಾಮಿ ಹೆಸರಿನಲ್ಲಿ ರೆಸಾರ್ಟ್ ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಮೈಸೂರು: ಕೊರೊನಾ ವೈರಸ್ ಜೊತೆಗೆ ಕಂಟೈನ್ಮೆಂಟ್ ವಲಯಗಳು ಏರಿಕೆ
ಈ ರೆಸಾರ್ಟ್ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನ ಪ್ರದೇಶದಲ್ಲಿದ್ದು, ಇದರ ನಿರ್ಮಾಣದಲ್ಲಿ ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪರಿಸರವಾದಿಗಳು ರೆಸಾರ್ಟ್ ನಿರ್ಮಾಣಕ್ಕೆ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದರು.
ಎಚ್.ಡಿ.ಕೋಟೆ ತಾಲ್ಲೂಕಿನ ಕಾರಾಪುರ ಗ್ರಾಮದ ಸರ್ವೇ ನಂಬರ್ 142 ರಲ್ಲಿ ವಾಸದ ಮನೆ ಹೊರತುಪಡಿಸಿ ಹೆಚ್ಚಿನ ವಿಸ್ತೀರ್ಣದಲ್ಲಿ ನರಸಿಂಹಮೂರ್ತಿ ಎಂಬುವವರು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದ್ದು, ಇದರ ಬಗ್ಗೆ ಸ್ಥಳೀಯರಿಂದ ಸಾಕಷ್ಟು ದೂರಗಳು ಬಂದಿದ್ದವು.
ತಿ.ನರಸೀಪುರದಲ್ಲಿ ನಿತ್ಯ ಅರ್ಧ ದಿನ ಸ್ವಯಂಪ್ರೇರಿತ ಲಾಕ್ ಡೌನ್
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಂತರಸಂತೆ ವಲಯ ಅರಣ್ಯಾಧಿಕಾರಿ ಅವರು ನರಸಿಂಹಮೂರ್ತಿ ಅವರಿಗೆ ನೋಟೀಸ್ ಜಾರಿಗೊಳಿಸಿದ್ದು, ಮೂರು ದಿನಗಳೊಳಗೆ ಸೂಕ್ತ ಉತ್ತರ ನೀಡಬೇಕೆಂದೂ ಇಲ್ಲದಿದ್ದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿಯೂ ನೋಟೀಸ್ ನಲ್ಲಿ ತಿಳಿಸಲಾಗಿದೆ.