ಹೆಚ್ಚುತ್ತಿರುವ ಕೊರೊನಾ ಸೋಂಕು: ಗಡಿಯಲ್ಲಿ ಬಿಗಿ ತಪಾಸಣೆ
ಮೈಸೂರು, ಫೆಬ್ರವರಿ 20: ಕೇರಳದಲ್ಲಿ ಮತ್ತೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯು ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹೆಚ್ಚಿನ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಕೇರಳದಿಂದ ಬರುವ ಎಲ್ಲ ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದೆ. ಅಧಿಕಾರಿಗಳು ಕೋವಿಡ್ ಪರೀಕ್ಷೆ ವರದಿ ಪರಿಶೀಲಿಸುತ್ತಿದ್ದಾರೆ.
"ಎಲ್ಲ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಬೇಕು''
ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸೇಷನ್ ಮಾಡಲಾಗುತ್ತಿದ್ದು, ಕೋವಿಡ್ ಟೆಸ್ಟ್ ಮಾಡಿಸಿರುವ ಬಗ್ಗೆಯೂ ತಪಾಸಣೆ ಮಾಡಲಾಗುತ್ತಿದೆ. ಬಸ್ ಹಾಗೂ ವಿಮಾನದ ಮೂಲಕ ಮೈಸೂರಿಗೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಕೇರಳದಿಂದ ಪ್ರತಿದಿನ ಒಂದು ವಿಮಾನ ಮೈಸೂರಿಗೆ ಹಾರಾಟ ನಡೆಸುತ್ತಿದ್ದು, ದಿನಕ್ಕೆ ಸರಾಸರಿ 55 ಪ್ರಯಾಣಿಕರು ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ಬಾವಲಿ ಚೆಕ್ಪೋಸ್ಟ್ಗೆ ಭೇಟಿ ನೀಡಿದ್ದ ಟಿಎಚ್ಒ ಡಾ.ರವಿಕುಮಾರ್ ಮಾತನಾಡಿ ಚೆಕ್ ಪೋಸ್ಟ್ ಬಳಿ ಕೇರಳದಿಂದ ಬರುವ ಎಲ್ಲ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ. ಅಲ್ಲದೇ ಗಡಿ ಪ್ರವೇಶಿಸಿದವರ ಮಾಹಿತಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸುತ್ತಿದ್ದಾರೆ ಎಂದರು.
ಕೋವಿಡ್ ರಿಪೋರ್ಟ್ ತೋರಿಸಿದರಷ್ಟೇ ರಾಜ್ಯದೊಳಗೆ ಪ್ರವೇಶ ನೀಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.