Rajeev Taranath: ಖ್ಯಾತ ಸರೋದ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ
ಮೈಸೂರು, ಜೂನ್, 11: ಅಂತಾರಾಷ್ಟ್ರೀಯ ಖ್ಯಾತ ಸರೋದ್ ವಾದಕರಾದ ಪಂ.ರಾಜೀವ ತಾರಾನಾಥರು ಮಂಗಳವಾರ (ಜೂನ್ 11) ಸಂಜೆ 6.30ಕ್ಕೆ ಮೈಸೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ಜೂನ್ 12ರಂದು ಬುಧವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕುವೆಂಪುನಗರದ ಜ್ಞಾನ ಗಂಗಾ ಶಾಲೆ ಹತ್ತಿರದ ಅವರ ಮನೆಯ ಎದುರು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೆಲ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಕಳೆದ 15 ದಿನದ ಹಿಂದೆ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿತ್ತು.
1932ರ ಅಕ್ಟೋಬರ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೀವ್ ತಾರಾನಾಥ್ ಅವರು ಹಿಂದೂಸ್ತಾನಿ ಗಾಯನ ಸಂಗೀತವನ್ನು ಆರಂಭದಲ್ಲಿ ಅಭ್ಯಾಸ ಮಾಡಿದರು. ತಮ್ಮ ಒಂಭತ್ತನೇ ವಯಸ್ಸಿನಲ್ಲಿ ಪ್ರಥಮ ಸಂಗೀತ ಕಚೇರಿಯನ್ನು ನಡೆಸಿಕೊಟ್ಟಿದ್ದರು. ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ (ಆನರ್ಸ್) ಹಾಗೂ ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಡಿದ್ದರು. ಇಂಗ್ಲಿಷ್ ಸಾಹಿತ್ಯದಲ್ಲಿ ಪಿಎಚ್ಡಿ ಮಾಡಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು.
1995ರಿಂದ 2005ರವರೆಗೆ ಕ್ಯಾಲಿಫೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದರು. ನಂತರ ಸಂಗೀತದ ಮೇಲಿದ್ದ ಪ್ರೀತಿಯಿಂದ ಬೋಧನಾ ವೃತ್ತಿ ಬಿಟ್ಟು ಗುರುಗಳಾದ ಉಸ್ತಾದ್ ಆಲಿ ಆಕ್ಬರ್ ಖಾನ್ ಅವರಲ್ಲಿ ಕೋಲ್ಕತ್ತಾದಲ್ಲಿ ತರಬೇತಿ ಪಡೆದರು. ನಂತರ ನೂರಾರು ಸರೋದ್ ಕಾರ್ಯಕ್ರಮಗಳನ್ನು ಮಾಡಿದ್ದರು. ಪ್ರಸ್ತುತ ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದರು.
ಯಾವೆಲ್ಲಾ ಪ್ರಶಸ್ತಿಗಳು ದೊರಕಿವೆ?: ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ನಾಡೋಜ, ಪದ್ಮಶ್ರೀ, ರಾಜ್ಯ ಸಂಗೀತ ವಿದ್ವಾನ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿ ಇವರ ಮುಡಿಗೇರಿದೆ. ಕನ್ನಡದ ಹಲವು ಸಿನಿಮಾಗಳಿಗೂ ಇವರು ಸಂಗೀತ ನಿರ್ದೇಶನ ಮಾಡಿದ್ದರು.
ಇನ್ನು ರಾಜೀವ್ ತಾರಾನಾಥ್ ಅವರ ಸಾವಿಗೆ ಈಗಾಗಲೇ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಇದೀಗ "ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ," ಎಂದು ಸಿಎಂ ಸಿದ್ದರಾಮಯ್ಯ ಅವರು ಕೂಡ ಸಂತಾಪ ಸೂಚಿಸಿದ್ದಾರೆ.












Click it and Unblock the Notifications