ವಿಶ್ವಯೋಗ ದಿನ; ಮೈಸೂರು ಅರಮನೆ ಪ್ರವೇಶಿಸಲು ಕೋವಿಡ್ ಲಸಿಕೆ ಕಡ್ಡಾಯ
ಮೈಸೂರು, ಜೂನ್ 14; "ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ವಿಶ್ವ ಯೋಗ ದಿನ 2022 ಕಾರ್ಯಕ್ರಮ ಮೈಸೂರಿನ ಅರಮನೆ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 15 ಸಾವಿರ ಜನ ಪಾಲ್ಗೊಳ್ಳಲಿದ್ದು 12 ಸಾವಿರ ಜನರ ನೋಂದಣಿಯಾಗಿದೆ" ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.
ಯೋಗ ದಿನಾಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದರು. ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಂಸದ ಪ್ರತಾಪ್ ಸಿಂಹ ಮುಂತಾದವರು ಪಾಲ್ಗೊಂಡಿದ್ದರು.
ಯೋಗ ದಿನ: ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ
"10 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ 17 ಬ್ಲಾಕ್ ಮಾಡಲಾಗಿದೆ. ಎರಡು ಬ್ಲಾಕ್ಗಳನ್ನು ಕಾಯ್ದಿರಿಸಲಾಗಿದೆ. ಯೋಗ ಕಾರ್ಯಕ್ರಮದ ಕುರಿತಂತೆ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಅಧಿಕಾರಿಗಳು ಎರಡು, ಮೂರು ಬಾರಿ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು, ಸಚಿವ ಡಾ. ಸುಧಾಕರ್ ಅಧ್ಯಕ್ಷತೆಯಲ್ಲಿ ವರ್ಚುವಲ್ ಸಭೆ ಕೂಡ ನಡೆದಿದೆ" ಎಂದರು.
ಮೈಸೂರಿನಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಯೋಗ ದಿನಾಚರಣೆಯಲ್ಲಿ 15000 ಜನ ಭಾಗಿ
"ಕೇಂದ್ರ ಸರ್ಕಾರವೇ ಕಾರ್ಯಕ್ರಮವನ್ನು ಆಯೋಜಿಸಲಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ದಿನಗೂಲಿ ನೌಕರರು, ವಿಶೇಷ ಚೇತನರು ಸೇರಿದಂತೆ ಎಲ್ಲ ವರ್ಗದವರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಮ್ಯಾಟ್, ಮೊಬೈಲ್ ಪೌಚ್, ಶೂ ಬ್ಯಾಗ್ ವಿತರಣೆ ಮಾಡಲಾಗುತ್ತದೆ" ಎಂದು ಸಚಿವರು ತಿಳಿಸಿದರು.
ಮೋದಿ ಪಾಲ್ಗೊಳ್ಳುವ ಯೋಗ ಕಾರ್ಯಕ್ರಮಕ್ಕೆ ಎಷ್ಟು ಮಂದಿಗೆ ಅವಕಾಶ?
"ಕೋವಿಡ್ ಹಿನ್ನೆಲೆಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಎರಡು ಡೋಸ್ ಲಸಿಕೆ ತೆಗೆದುಕೊಂಡಿರಬೇಕು ಅಥವಾ 72 ಗಂಟೆ ಮುಂಚಿನ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಕೇಂದ್ರ ಸರ್ಕಾರದ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲನೆ ಮಾಡಲಿದೆ" ಎಂದು ಸಚಿವರು ಮಾಹಿತಿ ನೀಡಿದರು.
"ಯೋಗದಲ್ಲಿ ಪಾಲ್ಗೊಳ್ಳುವವರಿಗೆ ರಾಜ್ಯ ಸರ್ಕಾರದ ವತಿಯಿಂದ ತಿಂಡಿ ವ್ಯವಸ್ಥೆ ಮಾಡಲಾಗುತ್ತದೆ. ಬೆಳಗ್ಗೆ 5.30 ಗಂಟೆಗೆ ಎಲ್ಲಾ ಗೇಟುಗಳು ಬಂದ್ ಆಗಲಿದೆ. ಜೂನ್ 19ರಂದು ಅಂತಿಮ ಹಂತದ ತಾಲೀಮು ನಡೆಸಲಾಗುತ್ತದೆ. ಭದ್ರತೆ ಸಂಬಂಧ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ" ಎಂದು ಎಸ್. ಟಿ. ಸೋಮಶೇಖರ್ ವಿವರಿಸಿದರು.
ಕಾರ್ಯಕ್ರಮದ ಸಿದ್ಧತೆ; ಆರೋಗ್ಯ ಸಚಿವರಾದ ಡಾ. ಸುಧಾಕರ್ ಮಾತನಾಡಿ, "ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವುದು ಹೆಮ್ಮೆಯ ವಿಷಯ" ಎಂದರು.
"ಕಾರ್ಯಕ್ರಮದ ಸಿದ್ಧತೆಗಳ ಪರಾಮರ್ಶೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಡಲಿದ್ದಾರೆ. ಯೋಗ ಕಾರ್ಯಕ್ರಮಕ್ಕೂ ಮುನ್ನ ಮತ್ತು ನಂತರ ಸ್ವಚ್ಚತೆ ಕಾಪಾಡುವಂತೆ ಸೂಚಿಸಲಾಗಿದೆ" ಎಂದು ಡಾ. ಸುಧಾಕರ್ ಹೇಳಿದರು.
"ಯೋಗ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಸಹಕಾರಿ. ಮಾನವತ್ವ ಉಳಿವಿಗಾಗಿ ಯೋಗ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದರ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಿದೆ" ಎಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ರಾಮದಾಸ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್ಪಿ ಚೇತನ್, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರಧಾನಿ ಆಗಮನ; ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ಸಂಜೆ ಮೈಸೂರಿಗೆ ಆಗಮಿಸಲಿದ್ದಾರೆ. ಜೂನ್ 21ರಂದು ಬೆಳಗ್ಗೆ 6.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ. ಬೆಳಗ್ಗೆ 7ರಿಂದ 45ನಿಮಿಷಗಳ ಕಾಲ ಯೋಗ ಪ್ರದರ್ಶನ ನಡೆಯಲಿದೆ.
ಈ ವೇಳೆ ಪ್ರಧಾನಿಯೂ ಯೋಗಾಸನ ಮಾಡಲಿದ್ದಾರೆ. ಇವರೊಂದಿಗೆ ವೇದಿಕೆ ಮೇಲೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.
Recommended Video
ಬೆಳಗ್ಗೆ 6.40ರಿಂದ 7ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೈಸೂರಿನ ಅರಮನೆ ಎದುರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಲಿರುವ ಕಾರ್ಯಕ್ರಮದ ನೇರ ಪ್ರಸಾರ ದೇಶಾದ್ಯಂತ ಮಾಡಲಾಗುತ್ತದೆ.