ಬಿಬಿಎಂಪಿ ಚುನಾವಣೆ ಮುಂದೂಡಲು ಯತ್ನಿಸಿದ್ದು ನಿಜ: ಯಡಿಯೂರಪ್ಪ
ಮೈಸೂರು, ಅಕ್ಟೋಬರ್ 1: ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ನಾವು ಯತ್ನಿಸಿದ್ದು ನಿಜ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು ನಾನು ಹಾಗೂ ಕಟೀಲು ಸೇರಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಪ್ರಯತ್ನ ಮಾಡಿದ್ದು ಸತ್ಯ ಎಂದಿದ್ದಾರೆ.
ಆದರೂ ಬಿಬಿಎಂಪಿ ಚುನಾವಣೆ ನಡೆದದ್ದು ಒಳ್ಳೆಯದೇ ಆಯಿತು, ಕಟೀಲ್ ಅವರು ಅಧ್ಯಕ್ಷರಾದ ಅವಧಿಯಲ್ಲಿ ಮೊದಲ ಗೆಲುವು ಇದಾಗಿದೆ. ನಮಗೆ ಸಂತೋಷವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಗೆಲುವು ಕಾರ್ಯಕರ್ತರು, ಬಿಜೆಪಿ ನಾಯಕರಿಗೆ ಗೌರವ ತಂದುಕೊಟ್ಟಿದೆ ಎಂದರು.

ಬಿಬಿಎಂಪಿ ಮೇಯರ್ ಆಗಿ ಶಾಂತಿನಗರ ಕ್ಷೇತ್ರದ ಜೋಗುಪಾಳ್ಯ ವಾರ್ಡ್ನ ಗೌತಮ್ ಕುಮಾರ್ ಜೈನ್ ಎಂಬುವವರು ನೇಮಕವಾಗಿದ್ದಾರೆ.
ಚುನಾವಣೆಯಲ್ಲಿ ಒಟ್ಟು 129 ಮತಗಳನ್ನು ಪಡೆಯುವ ಮೂಲಕ ಜೋಗುಪಾಳ್ಯ ವಾರ್ಡಿನ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಮೇಯರ್ ಆಗಿ ಆಯ್ಕೆ ಆಗಿದ್ದರೆ, ಬೊಮ್ಮನಹಳ್ಳಿ ವಾರ್ಡ್ನ ರಾಮ್ ಮೋಹನ್ ರಾಜು ಉಪ ಮೇಯರ್ ಆಗಿ ಆಯ್ಕೆ ಆಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೂ ಕೊನೆ ಕ್ಷಣದಲ್ಲಿ ಪಕ್ಷೇತರ ಪಾಲಿಕೆ ಸದಸ್ಯರ ಜೊತೆಗಿನ ಮಾತುಕತೆ ಯಶಸ್ವಿಯಾಗದ ಪರಿಣಾಮ ಮೇಯರ್ ಹುದ್ದೆ ಕೈ ತಪ್ಪಿತ್ತು. ಆದರೆ ಈ ಬಾರಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ ಪರಿಣಾಮ ಬಿಜೆಪಿ ಬಿಬಿಎಂಪಿ ಅಧಿಕಾರವನ್ನು ಹಿಡಿದಿದೆ.
ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ 257 ಮಂದಿ ಮತ ಚಲಾಯಿಸುವ ಹಕ್ಕು ಹೊಂದಿದ್ದರೂ 249 ಮಂದಿ ಹಾಜರಾಗಿದ್ದರು. 8 ಮಂದಿ ಗೈರಾಗಿರುವ ಕಾರಣ ಬಹುಮತಕ್ಕೆ 125 ಸದಸ್ಯರ ಬೆಂಬಲ ಬೇಕಿತ್ತು. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಪದ್ಮನಾಭ ರೆಡ್ಡಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರು.












Click it and Unblock the Notifications