ಜುಲೈ 31ರಂದು ಮೈಸೂರಿನಲ್ಲಿ ಜೆಡಿಎಸ್ ಅದ್ಧೂರಿ ಸಮಾವೇಶ
ಮೈಸೂರು, ಜುಲೈ 5: ಮಾಜಿ ಸಚಿವ ಎಚ್ ವಿಶ್ವನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಪಕ್ಷ ಸಂಘಟನೆ ದೃಷ್ಟಿಯಲ್ಲಿಟ್ಟುಕೊಂಡು ಜುಲೈ 31ರಂದು ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಜೆಡಿಎಸ್ ಸಮಾವೇಶ ನಡೆಸಲು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರನ್ನು ಕಾಡುತ್ತಿರುವ ಕೆಟ್ಟ ಕುತೂಹಲǃ
ಮೈಸೂರಿನ ಶಾಸಕ ಜಿ.ಟಿ. ದೇವೇಗೌಡ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಈ ಸಭೆಯಲ್ಲಿ ಶಾಸಕರಾದ ಸಾ.ರಾ. ಮಹೇಶ್, ಚಿಕ್ಕಮಾದು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸೇರಿ ಹಲವರು ಭಾಗಿಯಾಗಿದ್ದರು.
ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಮಾವೇಶ ಮಾಡುವ ಮೂಲಕ ಜೆಡಿಎಸ್ ನ ಶಕ್ತಿ ಪ್ರದರ್ಶನಕ್ಕೆ ಎಚ್ ಡಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಜುಲೈ 31ರ ಸಮಾವೇಶದಲ್ಲಿ ಮೂರು ಜಿಲ್ಲೆಗಳಿಂದ ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜತೆಗೆ ಈಚೆಗೆ ಜೆಡಿಎಸ್ ಸೇರಿದ ಮಾಜಿ ಸಚಿವ ಎಚ್. ವಿಶ್ವನಾಥ್ ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜೆಡಿಎಸ್ ಒಳಗಿನ ಭಿನ್ನಮತ, ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗ ಈ ಸಮಾವೇಶಗಳು ಮಹತ್ವ ಪಡೆದುಕೊಂಡಿವೆ.