ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದರೇ ವಿಶ್ವನಾಥ್?
Recommended Video
ಮೈಸೂರು, ಜೂನ್ 3: ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷ ಶಾಸಕ ವಿಶ್ವನಾಥ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಪಕ್ಷದಲ್ಲಿ ತಮಗೆ ಯಾವುದೇ ಕಿಮ್ಮತ್ತಿಲ್ಲ ಎಂದು ಹೇಳುವ ಮೂಲಕ ಕಳೆದೆರಡು ದಿನಗಳ ಕೆಳಗಷ್ಟೇ ಆಕ್ರೋಶವನ್ನು ಹೊರಹಾಕಿದ್ದರು. ಈ ಮೊದಲು ಅನಾರೋಗ್ಯ ಕಾರಣಕ್ಕಾಗಿ ವಿಶ್ವನಾಥ್ ಎರಡು ಬಾರಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ನಂತರ ಲೋಕಸಭೆ ಚುನಾವಣೆಯ ಪರಾಭವದ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಮುಂದಾಗಿದ್ದರು. ಆದರೆ ಅದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಅವಕಾಶ ಕೊಟ್ಟಿರಲಿಲ್ಲ. ಇದೀಗ ವಿಶ್ವನಾಥ್ ಅವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸಲು ಸಾಧ್ಯವಿಲ್ಲ. ಹೀಗಾಗಿ ಈ ಹುದ್ದೆಯಲ್ಲಿ ಮುಂದುವರಿಯುವುದರಲ್ಲಿ ಅರ್ಥವಿಲ್ಲವೆಂದು ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನುವ ಗುಮಾನಿ ಹೆಚ್ಚಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳು ತೀವ್ರ ವಿರೋಧಕ್ಕೆ ಕಾರಣವಾಗಿದ್ದವು. ಆ ಸಂದರ್ಭದಲ್ಲಿ ಜೆಡಿಎಸ್ ನಾಯಕರು ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ ಎಂಬ ಅಸಮಾಧಾನವೂ ವಿಶ್ವನಾಥ್ ಅವರನ್ನು ಕಾಡುತ್ತಿತ್ತು. ಸಮ್ಮಿಶ್ರ ಸರ್ಕಾರದ ಸುಗಮ ಆಡಳಿತಕ್ಕೆ ರಚಿಸಲಾಗಿರುವ ಸಮನ್ವಯ ಸಮಿತಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ರಾಜ್ಯಾಧ್ಯಕ್ಷರಿಗೆ ಸದಸ್ಯತ್ವ ನೀಡಬೇಕು ಎಂದು ವಿಶ್ವನಾಥ್ ಪ್ರತಿಪಾದಿಸಿದ್ದರು. ಅದಕ್ಕೂ ಯಾವುದೇ ಸ್ಪಂದನೆ ಸಿಗಲಿಲ್ಲ.

ಈ ಕಾರಣಕ್ಕಾಗಿಯೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ವತಿಯಿಂದ ನೀಡಿದ್ದ ಕಾರು ಮತ್ತಿತರ ಸೌಲಭ್ಯಗಳನ್ನು ವಿಶ್ವನಾಥ್ ಅವರು ವಾಪಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಮಾತನಾಡಿದ ವಿಶ್ವನಾಥ್, ನಾನು ಇನ್ನೂ ರಾಜೀನಾಮೆ ನೀಡಿಲ್ಲ. ನೀಡುವ ಯೋಚನೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಕುರಿತು ತಿಳಿಸುತ್ತೇನೆ ಎಂದಿದ್ದಾರೆ.












Click it and Unblock the Notifications