ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ಬೇಡಿಕೆ ಇಟ್ಟ ಸಿದ್ದರಾಮಯ್ಯ ಆಪ್ತ!
ಮೈಸೂರು, ಸೆಪ್ಟೆಂಬರ್ 01; ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಜಿ. ಟಿ. ದೇವೇಗೌಡರಿಗೆ ಟಿಕೆಟ್ ನೀಡುವ ಬದಲು ನನಗೆ ಕೊಡಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತರು ಬೇಡಿಕೆ ಇಟ್ಟಿದ್ದಾರೆ.
ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಜಿಟಿಡಿ ಪುತ್ರ ಹರೀಶ್ ಗೌಡ ಸಹ ಚಾಮರಾಜ ಅಥವ ಕೆ. ಆರ್. ನಗರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಜೆಡಿಎಸ್ ತೊರೆದು, ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಜಿ.ಟಿ. ದೇವೇಗೌಡ
ಮಾಧ್ಯಮಗಳ ಜೊತೆ ಮಾತನಾಡಿದ ಜಿ. ಟಿ. ದೇವೇಗೌಡರು, "ನಾನು ಕಾಂಗ್ರೆಸ್ಗೆ ಬಂದರೆ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನಾನು ಕ್ಷೇತ್ರದಲ್ಲಿ ಹಾಲಿ ಶಾಸಕ, ನನ್ನ ಪುತ್ರನಿಗೂ ಟಿಕೆಟ್ ಕೇಳಿದ್ದೇನೆ" ಎಂದು ಹೇಳಿದ್ದಾರೆ.
ಜಿಡಿಟಿ ಕಾಂಗ್ರೆಸ್ಗೆ; ಸಿದ್ದರಾಮಯ್ಯ ಮಹತ್ವದ ಟ್ವೀಟ್!
ಆದರೆ ಈಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತರಾದ ಕೆ. ಮರೀಗೌಡ ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯಗೆ ಟಿಕೆಟ್ ಕೊಡುವುದಿಲ್ಲ ಎಂದರೆ ನನಗೆ ಟಿಕೆಟ್ ಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಪ್ರಸ್ತುತ ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.
ಜೆಡಿಎಸ್ನಲ್ಲಿದ್ದರೂ ಇಲ್ಲದಂತಿರುವ ಜಿಟಿಡಿ ಮುಂದಿನ ನಡೆ?
ಮಾಧ್ಯಮಗಳ ಜೊತೆ ಮಾತನಾಡಿದ ಕೆ. ಮರೀಗೌಡ, "ನಾನು ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಒಂದು ವೇಳೆ ಸಿದ್ದರಾಮಯ್ಯಗೆ ಟಿಕೆಟ್ ಕೊಡಲಿಲ್ಲ ಎಂದರೆ ನನ್ನ ಹಿರಿತನ ಪರಿಗಣಿಸಿ ನನಗೆ ಟಿಕೆಟ್ ನೀಡಬೇಕು" ಎಂದು ಹೇಳಿದರು.
ಸಿದ್ದರಾಮಯ್ಯ ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರುವ ಕುರಿತು ಟ್ವೀಟ್ ಮಾಡಿದ್ದಾರೆ. "ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ" ಎಂದು ಹೇಳಿದ್ದಾರೆ.
ಕಳೆದ ಮಂಗಳವಾರ ಜಿ. ಟಿ. ದೇವೇಗೌಡರು ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆ ಈ ಕುರಿತು ಚರ್ಚೆ ನಡೆಸಿದ್ದೇನೆ ಎಂದು ಜಿ. ಟಿ. ದೇವೇಗೌಡರು ಹೇಳಿದ್ದಾರೆ. ಜಿ. ಟಿ. ದೇವೇಗೌಡ ಪುತ್ರನ ಜಿ. ಟಿ. ಹರೀಶ್ ಜೊತೆ ಕಾಂಗ್ರೆಸ್ ಸೇರಲಿದ್ದಾರೆ. ಇಬ್ಬರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗಲಿದೆಯೇ? ಎಂದು ಕಾದು ನೋಡಬೇಕು.
ಜಿ. ಟಿ. ಹರೀಶ್ ಗೌಡ ಕೆ. ಆರ್. ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಜಿ. ಟಿ. ದೇವೇಗೌಡರ ಪುತ್ರನಿಗೆ ಬಿಟ್ಟುಕೊಡಲು ಸ್ಥಳೀಯ ಮುಖಂಡ ರವಿಶಂಕರ್ ವಿರೋಧ ವ್ಯಕ್ತಪಡಿಸಿದ್ದಾರೆ. "ಯಾರಿಗೂ ಕ್ಷೇತ್ರವನ್ನು ಬಿಟ್ಟುಕೊಡಲ್ಲ. ನಾನೇ 2023ಕ್ಕೆ ಕೆ. ಆರ್. ನಗರ ಶಾಸಕ" ಎಂದು ತಿಳಿಸಿದ್ದಾರೆ.
ಚಾಮರಾಜ ಕ್ಷೇತ್ರದಲ್ಲಿಯೂ ಸಹ ಜಿ. ಟಿ. ಹರೀಶ್ ಗೌಡ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡ ಕೆ. ಹರೀಶ್ ಗೌಡ ಈ ಕುರಿತು ಮಾತನಾಡಿದ್ದು, "ಚಾಮರಾಜದಲ್ಲಿ ನನಗೆ ಟಿಕೆಟ್. ರಾಜಕೀಯದಲ್ಲಿ ತುಂಬಾ ನೋವು ತಿಂದಿದ್ದೀನಿ" ಎಂದು ಹೇಳಿದ್ದಾರೆ.
ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರುವ ವಿಚಾರ ಮೈಸೂರು ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ, ಜಿ. ಟಿ. ಹರೀಶ್ ಗೌಡಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ಸಿಗಲಿದೆ? ಎಂಬುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.