ಕನ್ನಡ ಸಂಸ್ಕೃತಿ ಇಲಾಖೆ ಎಡವಟ್ಟು: ರಾಜ್ಯೋತ್ಸವ ಪ್ರಶಸ್ತಿಗೇ ಮುಜುಗರ!
ಮೈಸೂರು, ಅಕ್ಟೋಬರ್ 31: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಡವಟ್ಟಾಗಿದ್ದು, ಈ ಹಿಂದೆ ರಾಜ್ಯೋತ್ಸವ ಪ್ರಶಸ್ತಿ ಪಡೆದವರನ್ನೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮರು ಆಯ್ಕೆ ಮಾಡಿದೆ!
ಮೈಸೂರಿನ ಜಾನಪದ ತಜ್ಞ ಪಿ.ಕೆ.ರಾಜಶೇಖರ್ ಎರಡನೇ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2005ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ರಾಜಶೇಖರ್ ಪುನಃ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾನಪದ ಕ್ಷೇತ್ರದಿಂದ ಪಿ.ಕೆ.ರಾಜಶೇಖರ್ ಅವರನ್ನು ಆಯ್ಕೆ ಮಾಡಿದ್ದು, ಎರಡೆರಡು ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದಕ್ಕೆ ಬಹುತೇಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಾರ್ವಜನಿಕ ವಲಯದಲ್ಲಿ ಆಕ್ಷೇಪ ಉಂಟಾಗಿದ್ದಕ್ಕೆ ಪಿ.ಕೆ.ರಾಜಶೇಖರ್ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.
ಎರಡು ಬಾರಿ ಪ್ರಶಸ್ತಿ ಪಡೆಯುತ್ತಾರೆ ಎಂಬ ಆರೋಪ ಹೊತ್ತಿಕೊಳ್ಳಲು ಇಷ್ಟವಿಲ್ಲ. ಹೀಗಾಗಿ ನಾನು ಪ್ರಶಸ್ತಿ ಸ್ವೀಕರಿಸುವುದಿಲ್ಲ. ಪ್ರಶಸ್ತಿ ಪಟ್ಟಿಯಿಂದ ನನ್ನ ಹೆಸರು ಕೈ ಬಿಡುವಂತೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಪಿ.ಕೆ.ರಾಜಶೇಖರ್ ದೂರವಾಣಿ ಮೂಲಕ ಹೇಳಿಕೆ ನೀಡಿದ್ದಾರೆ.












Click it and Unblock the Notifications