ಕಾ.ಪು.ಸಿದ್ದಲಿಂಗಸ್ವಾಮಿ ಕೈತಪ್ಪಲಿದೆ ವರುಣಾ ಕ್ಷೇತ್ರದ ಟಿಕೆಟ್?
Recommended Video

ಮೈಸೂರು, ನವೆಂಬರ್ 07 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದೆ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಈ ಬಾರಿ ಕಾ.ಪು.ಸಿದ್ದಲಿಂಗಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾ.ಪು.ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು.
ಮಾಜಿ ಮುಖ್ಯಮಂತ್ರಿ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಕಾ.ಪು.ಸಿದ್ದಲಿಂಗ ಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಈ ಬಾರಿ ಯಡಿಯೂರಪ್ಪ ತಂಗಿಯ ಮಗ ಅಶೋಕ್ ಅಥವ ರಮೇಶ್ ಸ್ಪರ್ಧಿಸುವ ಸಾಧ್ಯತೆ ಇದೆ.
ಯಡಿಯೂರಪ್ಪ ಅವರು ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾದ ಕಾ.ಪು.ಸಿದ್ದಲಿಂಗ ಸ್ವಾಮಿ ಚುನಾವಣೆಗೆ ಸ್ಪರ್ಧಿಸಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು, 54,744 ಮತಗಳನ್ನು ಪಡೆದಿದ್ದರು. ಈಗ ಯಡಿಯೂರಪ್ಪ ಬಿಜೆಪಿಗೆ ಮರಳಿದ್ದು, ಪಕ್ಷದ ರಾಜ್ಯಾಧ್ಯಕ್ಷರು. 2018ರ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ.
ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಲು ಯಡಿಯೂರಪ್ಪ ತಂತ್ರ ರೂಪಿಸುತ್ತಿದ್ದಾರೆ. ಕಾ.ಪು.ಸಿದ್ದಲಿಂಗಸ್ವಾಮಿ ಅವರು ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಅವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ......

ಯತೀಂದ್ರ ಸ್ಪರ್ಧೆ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಈ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈಗಾಗಲೇ ವರುಣಾ ಕ್ಷೇತ್ರದಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಹ 'ಚಾಮುಂಡೇಶ್ವರಿ ಕ್ಷೇತ್ರದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಘೋಷಣೆ ಮಾಡಿದ್ದಾರೆ.

2013ರ ಫಲಿತಾಂಶ
2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಕಾ.ಪು.ಸಿದ್ದಲಿಂಗಸ್ವಾಮಿ ಸೋತಿದ್ದರು. ಸಿದ್ದರಾಮಯ್ಯ 84,385 ಮತಗಳನ್ನು ಪಡೆದಿದ್ದರು. ಸಿದ್ದಲಿಂಗಸ್ವಾಮಿ 54,744 ಮತಗಳನ್ನು ಪಡೆದಿದ್ದರು. ಕಾ.ಪು.ಸಿದ್ದಲಿಂಗ ಸ್ವಾಮಿ ಅವರು ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 'ಇದು ನನ್ನ ಪಾಲಿಗೆ ಕೊನೆಯ ಚುನಾವಣೆ. ನನಗೆ ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಘೋಷಿಸಿದ್ದಾರೆ.

ಶಂಕದ ಬಿದಿರಿ ಹೆಸರು ಕೇಳಿಬರುತ್ತಿದೆ
ವರುಣಾ ಕ್ಷೇತ್ರದಲ್ಲಿ ಲಿಂಗಾಯತರ ಮತಗಳು ಹೆಚ್ಚಿವೆ ಆದ್ದರಿಂದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಶಂಕರ ಬಿದರಿ ಅವರು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಕುತೂಹಲ ಮೂಡಿಸಿದ ಬಿಜೆಪಿ ನಡೆ?
ಕಾ.ಪು.ಸಿದ್ದಲಿಂಗಸ್ವಾಮಿ ಅವರಿಗೆ ಟಿಕೆಟ್ ನೀಡಿಲ್ಲ ಎಂದರೆ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಕಾಡುತ್ತದೆ. ಈ ಬಾರಿ ಯಡಿಯೂರಪ್ಪ ತಂಗಿಯ ಮಗ ಅಶೋಕ್ ಅಥವ ರಮೇಶ್ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಸುದ್ದಿ ಹಬ್ಬಿದೆ. ಸಿದ್ದರಾಮಯ್ಯ ಪುತ್ರನನ್ನು ಮಣಿಸಲು ಬಿಜೆಪಿ ಯಾರನ್ನು ಕಣಕ್ಕೆ ಇಳಿಸಲಿದೆ? ಎನ್ನುವುದು ಕುತೂಹಲ ಮೂಡಿಸಿದೆ.












Click it and Unblock the Notifications