ಕರ್ನಾಟಕ ಚುನಾವಣೆ: ಮೈಸೂರು ಜಿಲ್ಲೆಯ ಮತದಾರರ, ಮತಗಟ್ಟೆಗಳ ಸಂಪೂರ್ಣ ವಿವರ
ಮೈಸೂರು, ಮಾರ್ಚ್ 31: ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುತ್ತಿದ್ದಂತೆಯೇ ಮೈಸೂರು ಜಿಲ್ಲೆಯಲ್ಲಿಯೂ ನೀತಿ ಸಂಹಿತೆ ಜಾರಿಯಾಗಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ 11 ಕ್ಷೇತ್ರಗಳಲ್ಲಿ 26,2,551 ಮತದಾರರಿದ್ದಾರೆ ಎಂದು ಜಿಲ್ಲೆಯ ಮತದಾರರ ಬಗ್ಗೆ ಹಾಗೂ ಮತಗಟ್ಟೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ.

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರಕಾರದ ಹೊಸ ಕಾರ್ಯಕ್ರಮಗಳು, ಘೋಷಣೆಗಳು, ಭೂಮಿ ಪೂಜೆ ಸೇರಿದಂತೆ ಯಾವುದೇ ಸರಕಾರಿ ಕಾರ್ಯಕ್ರಮಗಳನ್ನು ನಡೆಸಬಾರದು. ಅಲ್ಲದೇ ವಿವಿಧ ನಿಗಮ, ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು ಬಳಸುವ ಸರಕಾರಿ ಕಾರುಗಳನ್ನು ಜಿಲ್ಲಾಡಳಿತದ ವಶಕ್ಕೆ ನೀಡಬೇಕು ಎಂದು ಹೇಳಿದರು.
ಮೈಸೂರು ಜಿಲ್ಲೆಯ ಮತದಾರರ ವಿವರ
ಮೈಸೂರು ಜಿಲ್ಲೆಯಲ್ಲಿ ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮುಂಡೇಶ್ವರಿ, ವರುಣಾ, ತಿ.ನರಸೀಪುರ, ಕೆ.ಆರ್.ನಗರ, ಎಚ್.ಡಿ.ಕೋಟೆ, ನಂಜನಗೂಡು, ಪಿರಿಯಾಪಟ್ಟಣ, ಹುಣಸೂರು ಸೇರಿದಂತೆ 11 ಕ್ಷೇತ್ರಗಳಿದ್ದು 6 ಲಕ್ಷ ಒಟ್ಟು ಮತದಾರರು ಇದ್ದಾರೆ. ಇದರಲ್ಲಿ 13,01,022 ಪುರುಷರು, 13,21,316 ಮಹಿಳೆಯರು, 213 ತೃತೀಯ ಲಿಂಗಿಗಳು, ಯುವ ಮತದಾರರು 47,812 ಮಂದಿ ಇದ್ದಾರೆ ಎಂದು ತಿಳಿಸಿದ್ದಾರೆ.
14 ಸಾವಿರ ಸಿಬ್ಬಂದಿ ನೇಮಕ
ಚುನಾವಣಾ ಕಾರ್ಯಕ್ಕೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ 13ರಿಂದ 14 ಸಾವಿರ ಸಿಬ್ಬಂದಿ ಅವಶ್ಯ. 12 ವಿಡಿಯೋ ತಂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳ ಕಣ್ಗಾವಲಿಗೆ ತಂಡ ರಚಿಸಲಾಗಿದೆ. ಉಚಿತ ಸಹಾಯವಾಣಿ 1950 ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸಲಿದೆ. ಚುನಾವಣಾ ಸಂಬಂಧಿತ ದೂರುಗಳ ಸಂಬಂಧಿ ಇ-ವಿಜಿಲ್ ತಂತ್ರಾಂಶ ರೂಪಿಸಲಾಗಿದೆ ಎಂದರು.

ಪಿಂಕ್ ಮತಗಟ್ಟೆ ಸ್ಥಾಪನೆ
ಪ್ರತಿ ಕ್ಷೇತ್ರ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯೇ ಇರುವ ಐದು ಪಿಂಕ್ ಮತಗಟ್ಟೆ ಸ್ಥಾಪಿಸಲಾಗುತ್ತದೆ. ಅಲ್ಲದೇ ವಿಶೇಷವಾಗಿ ಆಯ್ದ ಮತಗಟ್ಟೆಗಳಲ್ಲಿ ಹೊಸ ಯುವ ಸಿಬ್ಬಂದಿ ಇರುವ ಯುವ ಮತಗಟ್ಟೆ ಸ್ಥಾಪಿಸಲಾಗುತ್ತದೆ. ಇದರೊಂದಿಗೆ ಹಾಡಿಗಳಲ್ಲಿ ಸಾಂಪ್ರದಾಯಿಕ ಮತಗಟ್ಟೆ ರಚಿಸಲು ನಿರ್ಧರಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿಯೂ ಕುಡಿಯುವ ನೀರು, ಶೌಚಗೃಹ, ವಿಶೇಷಚೇತನರಿಗೆ ರ್ಯಾಪ್ ಸೇರಿದಂತೆ ಇನ್ನಿತರೆ ಸೌಲಭ್ಯ ನೀಡಲು ಕ್ರಮಕೈಗೊಳ್ಳಲಾಗುವುದು ಎಂದರು.
ಮನೆಯಿಂದಲೇ ಮತದಾನ
ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟವರು 84,917 ಮತದಾರರಿದ್ದಾರೆ. ಮತಗಟ್ಟೆಗೆ ಬರಲಾಗದವರು, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾನದ 3 ದಿನಕ್ಕೂ ಮೊದಲು ಚುನಾವಣಾ ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ ಎಂದರು.
ರಾಜಕೀಯ ಮುಖಂಡರ ಸಭೆ
ಚುನಾವಣಾ ನೀತಿ ಸಂಹಿತೆ ಸಂಬಂಧ ರಾಜಕೀಯ ಮುಖಂಡರ ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಿ ವಿವಿ ಪ್ಯಾಟ್, ಮತ ಯಂತ್ರಗಳ ಪ್ರಾತ್ಯಕ್ಷಿಕೆ ನೀಡುತ್ತೇವೆ. ಪ್ರಚಾರಕ್ಕೆ ಅನುಮತಿ ಪಡೆಯುವುದು ಕಡ್ಡಾಯ. ನಿಯಮಕ್ಕೆ ವಿರುದ್ಧವಾಗಿ ನಡೆದರೆ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ
ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲ್ಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ. ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ.











Click it and Unblock the Notifications