Karnataka bandh: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಕೈಜೋಡಿಸಿದ ತಮಿಳು ಸಂಘಟನೆಗಳ ಒಕ್ಕೂಟ
ಮೈಸೂರು, ಸೆಪ್ಟೆಂಬರ್, 29: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಅದೇ ರೀತಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕೂಡ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ತಮಿಳು ಸಂಘಟನೆಗಳ ಒಕ್ಕೂಟವು ಸಹ ಬಂದ್ಗೆ ಬೆಂಬಲ ನೀಡಿರುವುದು ವಿಶೇಷವಾಗಿದೆ.
ಶುಕ್ರವಾರ ಬೆಳಗ್ಗೆ ದೇವರಾಜ ಅರಸು ರಸ್ತೆಯಲ್ಲಿರುವ ಪ್ರತಿಯೊಂದು ಅಂಗಡಿ ಮುಗ್ಗಟ್ಟು, ಮಾಲ್ಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಬಂದ್ ಮಾಡಿ ಬೆಂಬಲ ನೀಡಿದರು. ನಗರದ ಹೃದಯಭಾಗದಲ್ಲಿರುವ ಕೆ.ಆರ್.ಸರ್ಕಲ್ ಹಾಗೂ ಅರಸು ರಸ್ತೆ ವಾಹನಗಳ ಓಡಾಟ ಇಲ್ಲದೆ ಬಣಗುಡುತ್ತಿತ್ತು. ಅಲ್ಲದೆ ರೈತ ಸಂಘದವರು, ಕನ್ನಡ ಹೋರಾಟಗಾರರು ಮೆರವಣಿಗೆ ಮಾಡಿ ಡಿಸಿಗೆ ಮನವಿ ಸಲ್ಲಿಸಿದರು.

ರೈತ ಸಂಘ, ವಿವಿಧ ಕನ್ನಡಪರ ಸಂಘಟನೆಗಳು, ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಸ್ಥೆ ಮೈಸೂರು ಸಂಘ-ಸಂಸ್ಥೆಗಳ ಒಕ್ಕೂಟ, ಹೋಟೆಲ್ ಮಾಲೀಕರ ಸಂಘ ಬಂದ್ಗೆ ಬೆಂಬಲ ಸೂಚಿಸಿವೆ.
ಅಷ್ಟೇ ಅಲ್ಲದೆ ಕಾವೇರಿ, ಕ್ರಿಯಾ ಸಮಿತಿ, ಮೈಸೂರು ಟಾಂಗಾವಾಲಗಳ ಸಂಘ, ಹಿಂದುಸ್ಥಾನ ಜನತಾ ಪಾರ್ಟಿ, ಜಯಕರ್ನಾಟಕ, ಕರ್ನಾಟಕ ರಾಜ್ಯ ರೈತ ಸಂಘ ಖಾಸಗಿ ಬಸ್ ಮಾಲೀಕ ಮತ್ತು ಚಾಲಕರ ಸಂಘ, ಕರ್ನಾಟಕ ತಮಿಳು ಸಂಘಟನೆಗಳ ಒಕ್ಕೂಟ, ವಾಣಿಯ ಸಂಘಂ (ತಮಿಳು ಗಾಣಿಗರು) ಸಂಘಟನೆ ಸೇರಿದಂತೆ ವಿದ್ಯಾರ್ಥಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದವು.
ಹೋಟೆಲ್ಗಳು ಬಂದ್
ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘವು ಬಂದ್ಗೆ ಬೆಂಬಲ ಸೂಚಿಸಿತ್ತು. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹೋಟೆಲ್ಗಳನ್ನು ಮುಚ್ಚಿ ಸಂಪೂರ್ಣ ಬೆಂಬಲ ನೀಡಲು ಸಂಘ ತೀರ್ಮಾನಿಸಿದೆ. ಹೋಟೆಲ್, ರೆಸ್ಟೋರೆಂಟ್, ಬೇಕರಿಗಳು, ಸ್ಟೇಟ್ ಶಾಪ್ಗಳು, ಫಾಸ್ಟ್ಫುಡ್ ಮತ್ತು ಐಷಾರಾಮಿ ಹೋಟೆಲ್ಗಳು ಸೇರಿದಂತೆ ಎಲ್ಲ ರೀತಿಯ ಅತಿಥ್ಯ ನೀಡುವ ವ್ಯಾಪಾರಿಗಳು ಬಂದ್ ಮಾಡಿದ್ದವು.
ಬೆಳಗ್ಗೆ 9:30ಕ್ಕೆ ಕನ್ನಡಪರ ಸಂಘಟನೆಗಳು ಸೇರಿದಂತೆ ಇನ್ನು ಹಲವು ಸಂಘಟನೆಗಳ ಮುಖಂಡರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಮನವಿ ಸಲ್ಲಿಸಿದರು.
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ ಬಂದ್ ಇರುವ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಒಂದು ದಿನ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ, ಖಾಸಗಿ ವಿದ್ಯಾಸಂಸ್ಥೆಗಳನ್ನು ಒಳಗೊಂಡಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಬಂದ್ಗೆ ಅವಕಾಶವಿಲ್ಲ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಇದರಿಂದ ಜನ ಸಾಮಾನ್ಯರ ಹಕ್ಕುಚ್ಯುತಿಯಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದ್ದಾರೆ. ''ನಗರದಲ್ಲಿ ಯಾವುದೇ ರೀತಿಯ ಮೆರವಣಿಗೆ ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ. ರಾಜಕೀಯ ಪಕ್ಷಗಳು ಮತ್ತು ಸಂಘಟನೆಯವರು ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಹಮ್ಮಿಕೊಳ್ಳಲು ಮಾತ್ರ ಅವಕಾಶವಿದೆ," ಎಂದು ತಿಳಿಸಿದ್ದಾರೆ.












Click it and Unblock the Notifications