Karnataka Budget 2023: ಸಾಂಸ್ಕೃತಿಕ ನಗರಿ ಮೈಸೂರಿಗೆ ಸಿಕ್ಕಿದ್ದೇನು?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಬಸವರಾಜ ಬೊಮ್ಮಾಯಿ ಅವರು ಬಜೆಟ್ನಲ್ಲಿ ಸಾಂಸ್ಕೃತಿಕ ಮೈಸೂರು ಜಿಲ್ಲೆಗೆ ಏನೆಲ್ಲ ಘೋಷಣೆ ಮಾಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮೈಸೂರು, ಫೆಬ್ರವರಿ, 17: ಈ ಬಾರಿಯ ಬಜೆಟ್ನಲ್ಲಿ ಮೈಸೂರಿಗೆ ಹಳೆ ಯೋಜನೆಗಳನ್ನು ಪರಿಗಣಿಸದೆ ಹೊಸ ಯೋಜನೆಗಳನ್ನು ನೀಡಲಾಗಿದೆ. ಎಂದಿನಂತೆ ಚಿತ್ರನಗರಿ ಸ್ಥಾಪನೆ, ದಸರಾ ಪ್ರಾಧಿಕಾರ ರಚನೆ, ಟೂರಿಸಂ ಸರ್ಕಿಟ್ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲದೆ ಇರುವುದು ನಿರಾಸೆ ಮೂಡಿಸಿದಂತಾಗಿದೆ.
ಮೈಸೂರು ವಿಮಾನ ನಿಲ್ದಾಣ ಉನ್ನತೀಕರಣ ಹಾಗೂ ರನ್ವೇ ವಿಸ್ತರಣೆ ಕನಸು ನನಸಾಗಲಿದ್ದು, ಭೂ ಸ್ವಾಧೀನಕ್ಕೆ ಬಜೆಟ್ನಲ್ಲಿ 320 ಕೋಟಿ ರೂಪಾಯಿ ಘೋಷಣೆ ಮಾಡಿದೆ. ಅಲ್ಲದೆ, ಇಂಟರ್ಗ್ರೇಟೆಡ್ ಟೌನ್ಶಿಪ್ನಲ್ಲಿ ಮೈಸೂರು ಜಿಲ್ಲೆ ಸ್ಥಾನ ಪಡೆದಿದ್ದು, ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವ ಭರವಸೆ ಸಿಕ್ಕಿದೆ. ಜೊತೆಗೆ ಐವಿಎಫ್ ಕ್ಲಿನಿಕ್ ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಆಶಾದಾಯಕವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ರಾಜ್ಯ ಬಜೆಟ್ 2023-24ರಲ್ಲಿ ಮೈಸೂರಿಗೆ ಐದು ಕೊಡುಗೆಗಳನ್ನು ನೀಡಲಾಗಿದೆ.
ಮೈಸೂರು ಜಿಲ್ಲೆಗೆ ಕೊಡುಗೆ ಏನು?
"ಸಿಎಂ ಬಸವರಾಜ ಬೊಮ್ಮಾಯಿ ಅವರು ನುಡಿದಂತೆ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ಬಜೆಟ್ನಲ್ಲಿ ತಿಳಿಸಿದ್ದಾರೆ. ಅಧಿವೇಶನ ಮುಗಿದ ಬಳಿಕ ಸಿಎಂ ಬಳಿ ಚರ್ಚಿಸಿ ಬಜೆಟ್ ಪ್ಯಾಕೇಜ್ ಘೋಷಣೆಗೆ ಶ್ರಮಿಸುತ್ತೇನೆ," ಎಂದು ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.

ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು
2023-24ರ ಆಯವ್ಯಯದಲ್ಲಿ ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮವಹಿಸುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವುದಾಗಿ ಘೋಷಿಸಲಾಗಿದೆ.
ವಿಮಾನ ನಿಲ್ದಾಣ ಉನ್ನತೀಕರಣಕ್ಕೆ ಕ್ರಮ
ಕ್ಯಾನ್ಸರ್ ಚಿಕಿತ್ಸಾ ಕೇಂದ್ರ, ಟೌನ್ ಶಿಫ್ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಇದರ ಜೊತೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಹೆಕ್ಟೇರ್ ಜಾಗದಲ್ಲಿ ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು 320 ಕೋಟಿ ರೂ. ಗಳಷ್ಟು ಹಂಚಿಕೆ ಮಾಡಲಾಗಿದೆ. ಕಾಡಾನೆ ಹಾವಳಿ, ಚಿರತೆ ದಾಳಿ ತಡೆಗೆ ಹೆಚ್ಚುವರಿ 199 ಸಿಬ್ಬಂದಿ ನೇಮಕಕ್ಕೆ ಅನುಮೋದನೆ ನೀಡಲಾಗಿದೆ. ಒಟ್ಟಾರೆ ಮೈಸೂರು ಜಿಲ್ಲೆಗೆ ಈ ಬಾರಿಯ ಬಜೆಟ್ನಲ್ಲಿ ಹಲವು ಕೊಡುಗೆಗಳನ್ನು ನೀಡಿರುವುದು ಸಂತಸದ ವಿಚಾರ ಎಂದು ತಿಳಿಸಿದ್ದಾರೆ.

ಕಲಾ ಗ್ಯಾಲರಿ ನಿರ್ಮಾಣಕ್ಕೆ ಮೀಸಲಿಟ್ಟ ಹಣ
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಲಾ ವಸ್ತು ಪ್ರದರ್ಶನ ಕೇಂದ್ರವೊಂದನ್ನು ಸ್ಥಾಪಿಸಲು ತೀರ್ಮಾನಿಸಿ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ, ಸುಮಾರು 10 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದರೊಂದಿಗೆ ದಸರಾ ವಸ್ತುಪ್ರದರ್ಶನ ಪ್ರಾಧಿಕಾರಕ್ಕೆ ಶಾಶ್ವತ ನೆಲೆ ರೂಪಿಸಲು ಕಾಯಕಲ್ಪ ನೀಡಲಾಗಿದೆ.












Click it and Unblock the Notifications