Mysuru Airport: ಮೈಸೂರು ಏರ್ಪೋರ್ಟ್ ರನ್ವೇ ವಿಸ್ತರಣೆಗೆ ಬಜೆಟ್ನಲ್ಲಿ ಗ್ರೀನ್ಸಿಗ್ನಲ್
ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿಯ ಬಜೆಟ್ನಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ್ದಾರೆ. ಮೈಸೂರು ಏರ್ಪೋರ್ಟ್ ರನ್ವೇ ವಿಸ್ತರಣೆಗೆ ನಿರ್ಧರಿಸಲಾಗಿದ್ದು, ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದ ಮೈಸೂರು ಏರ್ಪೋರ್ಟ್ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ.
ವಿಜಯಪುರದಲ್ಲೂ 348 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತದೆ. ರಾಯಚೂರು ಏರ್ಪೋರ್ಟ್ ಕಾಮಗಾರಿಗೆ 53 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದೂ ಇದೇ ವೇಳೆ ಹೇಳಿದ್ದಾರೆ. ಮುಖ್ಯವಾಗಿ ಮೈಸೂರು ಏರ್ಪೋರ್ಟ್ ರನ್ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಇದರ ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿದ್ದಾರೆ.

ರನ್ವೇ ವಿಸ್ತರಣೆಗೆ ಸಂಸದ ಯದುವೀರ್ ಸಲಹೆ: ಬಜೆಟ್ನಲ್ಲಿ ಮೈಸೂರು ಏರ್ಪೋರ್ಟ್ ರನ್ವೇ ವಿಸ್ತರಣೆ ಘೋಷಣೆ ಬೆನ್ನಲ್ಲೇ ಈ ಭಾಗದ ಸಂಸದರಾದ ಯದುವೀರ್ ಒಡೆಯರ್ ಅವರು ಮಹತ್ವದ ಸಲಹೆ ನೀಡಿದ್ದಾರೆ. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗೆ ರಾಜ್ಯ ಸರ್ಕಾರ ನಿಧಾನಗತಿಯ ಧೋರಣೆಯನ್ನು ಅನುಸರಿಸುತ್ತಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ಹಣ ಬಿಡುಗಡೆಯ ಕೊರತೆಗಳಂತಹ ಪ್ರಮುಖ ಅಂಶಗಳೇ ಈ ಕಾರ್ಯಕ್ಕೆ ಅಡಚಣೆಯಾಗಿವೆ ಎಂದು ಹೇಳಿದ್ದಾರೆ.
ಮೈಸೂರುವಿಮಾನ ನಿಲ್ದಾಣದ ಮೊದಲ ಹಂತದ ವಿಸ್ತರಣೆಗೆ 46 ಎಕರೆ ಭೂಮಿಯ ಅಗತ್ಯವಿದೆ. ಆದರೆ ಪರಿಹಾರ ವಿಳಂಬವು ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ. ರಾಜ್ಯ ಸರ್ಕಾರ ಭೂಮಾಲೀಕರಿಗೆ ಬಾಕಿ ಇರುವ ಪಾವತಿಗಳನ್ನು ಪೂರ್ಣಗೊಳಿಸಬೇಕು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (ಎಎಐ) ಭೂಮಿಯನ್ನು ತ್ವರಿತವಾಗಿ ವರ್ಗಾಯಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಆಗ ಮಾತ್ರ ದೊಡ್ಡ ವಿಮಾನಗಳ ರನ್ವೇ ವಿಸ್ತರಣೆ ಮುಂದುವರಿಯುತ್ತದೆ ಎಂದು ಆಗ್ರಹಿಸಿದ್ದಾರೆ.
ಅಂತರರಾಷ್ಟ್ರೀಯ ಪ್ರವಾಸಿಗರಿಗೆ ಹೆಬ್ಬಾಗಿಲಾಗಿರುವ ಮೈಸೂರಿನಂತಹ ಪ್ರದೇಶಗಳಲ್ಲಿ ವಿಮಾನಯಾನದ ಸಂಪರ್ಕ ಸೌಲಭ್ಯ ಉತ್ತಮವಾಗಿರಬೇಕೆಂಬುದು ನಮ್ಮ ಆಶಯ. ಆದರೆ ಇದೇ ರೀತಿ ರಾಜ್ಯ ಸರ್ಕಾರ ಪ್ರಮುಖ ಯೋಜನೆಗಳಿಗೆ ವಿಳಂಬ ಮಾಡುತ್ತಿರುವುದರಿಂದ ಪ್ರದೇಶದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ.

ಫಿಲ್ಮ್ ಸಿಟಿಗೂ ಅಸ್ತು: ಅಲ್ಲದೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಈ ಬಜೆಟ್ನಲ್ಲಿ ಘೋಷಣೆಯಾಗಿದೆ. ವಿಶ್ವದರ್ಜೆಯ ಈ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. 500 ಕೋಟಿ ವೆಚ್ಚದಲ್ಲಿ ಈ ಫಿಲ್ಮ್ ಸಿಟಿ ನಿರ್ಮಾಣವಾಗಲಿದ್ದು, ನಂದಿನಿ ಲೇಔಟ್ನಲ್ಲಿರುವ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೈ-ಟೆಕ್ ಮತ್ಸ್ಯದರ್ಶಿನಿ: ಮೈಸೂರಿನಲ್ಲಿ ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮ ವಹಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications