ಬಜರಂಗದಳ ನಿಷೇಧ ವಿವಾದ; ಕಾಂಗ್ರೆಸ್ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂದ ವಿಜಯೇಂದ್ರ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದ್ದು, ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ನಾಯಕರು ಟೊಂಕಕಟ್ಟಿ ನಿಂತಿದ್ದಾರೆ. ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರು ರಾಜ್ಯದೆಲ್ಲೆಡೆ ಸುತ್ತಾಡುತ್ತಿದ್ದಾರೆ.
ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರಿಗೆ ಹೊಸ ಜವಾಬ್ದಾರಿ ಕೊಟ್ಟಿರುವ ಹೈಕಮಾಂಡ್, ತನ್ನ ಕ್ಷೇತ್ರ ಸೇರಿದಂತೆ ಉಳಿದೆಡೆ ಪ್ರಚಾರ ಮಾಡಲು ಸೂಚಿಸಿದೆ.

ಅದರಂತೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಪ್ರಚಾರದಲ್ಲಿ ಭಾಗಿಯಾಗಿದ್ದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ನಿರ್ಧಾರದ ಕುರಿತು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಬಜರಂಗದಳವನ್ನು ನಿಷೇಧ ಮಾಡೋದು ಎಂದು ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದರು.
"ಬಜರಂಗದಳವನ್ನು ನಿಷೇಧ ಮಾಡಲು ಅವರಿಗೆ ಅವಕಾಶ ಯಾರು ಕೊಡುತ್ತಾರೆ? ಬಜರಂಗದಳವು ದೇಶಭಕ್ತ ಸಂಘಟನೆ. ಹಿಂದೂಪರ ಕಾಳಜಿ ಇರುವ ಸಂಘಟನೆ. ಅಂತಹ ಸಂಘಟನೆ ಬಗ್ಗೆ ಕಾಂಗ್ರೆಸ್ ಪಕ್ಷ ಮನಬಂದಂತೆ ಮಾತನಾಡಿದರೆ ರಾಜ್ಯದ ಜನರು ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ," ಎಂದು ವಾಗ್ದಾಳಿ ನಡೆಸಿದರು.

"2023ರ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುವುದರಿಂದ ನಿಷೇಧ ಮಾಡುವ ವಿಚಾರವೇ ಉದ್ಭವ ಆಗುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ಇನ್ನೆಂತ ನಿರೀಕ್ಷೆ ಮಾಡಲು ಸಾಧ್ಯ? ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ಹಿಂದೂ ಯುವಕರ ಹತ್ಯೆ ಆಯಿತು. ಕಾಂಗ್ರೆಸ್ಗೆ ವಿನಾಶಕಾಲೇ ವಿಪರೀತ ಬುದ್ಧಿ ಇರುವುದರಿಂದ, ರಾಜ್ಯದ ಮತದಾರರು ಅವರಿಗೆ ಅವಕಾಶ ಮಾಡಿಕೊಡುವುದಿಲ್ಲ,'' ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮೈಸೂರಿನ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಚಲನಚಿತ್ರ ನಟ-ನಟಿಯರ ಪ್ರಚಾರದ ಕುರಿತು ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, "ವರುಣಾ ಕ್ಷೇತ್ರದಲ್ಲಿ ಸ್ಟಾರ್ಗಳು ಬಂದು ಮತ ಹಾಕುವುದಿಲ್ಲ. ಅಲ್ಲಿ ಮತದಾನ ಮಾಡುವುದು ಅಲ್ಲಿನ ಮತದಾರರು. ಈ ಬಾರಿ ಅಲ್ಲಿನ ಜನಗಳು ಬಿಜೆಪಿ ಅಭ್ಯರ್ಥಿಗೆ ಆಶೀರ್ವಾದ ಮಾಡುತ್ತಾರೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಡಿದ್ದ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, "ಪುನೀತ್ ರಾಜಕುಮಾರ್ ಈ ನಾಡು ಕಂಡಂತಹ ಶ್ರೇಷ್ಠ ಕಲಾವಿದ. ಶಿವರಾಜಕುಮಾರ್ ಯಾವುದೇ ಪಕ್ಷದ ಪರ ಪ್ರಚಾರ ಮಾಡಲು ಅವರಿಗೆ ಸ್ವಾತಂತ್ರ್ಯವಿದೆ. ಅವರು ಎಲ್ಲಿಗೆ ಬೇಕಾದರೂ ಹೋಗಿ ಪ್ರಚಾರ ಮಾಡಬಹುದು. ಇದರಲ್ಲಿ ರಾಜಕೀಯ ಮಾಡುವುದು ಬೇಡ," ಎಂದು ಹೇಳಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications