Varuna: ವರುಣಾದಲ್ಲಿ ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ; ರಕ್ತಸಿಕ್ತ ರಾಜಕೀಯಕ್ಕೆ ಮುನ್ನುಡಿ ಬರೀತಾ ಕಾಂಗ್ರೆಸ್?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ಬೇಸಿಗೆಯ ಬಿಸಿಲಿನಂತೆ ಏರಿಕೆಯಾಗುತ್ತಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮತದಾರರ ಮನಗೆಲ್ಲಲು ಎಲ್ಲ ರೀತಿಯ ಕಸರತ್ತು ನಡೆಸುತ್ತಿದ್ದಾರೆ.
ಕರ್ನಾಟಕ ಕುರುಕ್ಷೇತ್ರದ ಅಖಾಡ ಇದೀಗ ಆರೋಪ-ಪ್ರತ್ಯಾರೋಪ, ನಿಂದನೆ, ಅವಹೇಳನ ಮತ್ತು ಕೀಳುಮಟ್ಟದ ಭಾಷೆಗಳಿಗೆ ಸಾಕ್ಷಿಯಾಗಿದೆ. ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರ ವರುಣಾದಲ್ಲಿ ಇವೆಲ್ಲವನ್ನೂ ಮೀರಿ ಹಲ್ಲೆ ಮಾಡುವ ಮಟ್ಟಕ್ಕೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಪದೇಪದೇ ಹಲ್ಲೆ ನಡೆಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವರು ಸ್ಪರ್ಧಿಸುತ್ತಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ರಾಜಕೀಯ ಗಲಾಟೆ ಮತ್ತೆ ಮುಂದುವರೆದಿದೆ. ಕೆಲ ದಿನಗಳಿಂದ ಹಿಂದೆ ಅಷ್ಟೇ ಸಿದ್ದರಾಮಯ್ಯ ತವರೂರು ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರದ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ವೇಳೆ ಓರ್ವ ಬಿಜೆಪಿ ಕಾರ್ಯಕರ್ತನ ಮೇಲೂ ಹಲ್ಲೆ ಮಾಡಲಾದ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯನವರ ಅಣ್ಣನ ಮಕ್ಕಳ ಮೇಲೆ ಕೇಸ್ ದಾಖಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಸೋಲುವ ಭೀತಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ದಾಂಧಲೆ ನಡೆಸುತ್ತಿದ್ದಾರೆ ಬಿಜೆಪಿ ಆರೋಪಿಸಿತ್ತು.
ವರುಣಾ ಕ್ಷೇತ್ರದಲ್ಲಿನ ಗಲಾಟೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಗಲಾಟೆ ನಡೆದಿದ್ದು, ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವರುಣಾ ಕ್ಷೇತ್ರದ ಬೂತ್ ನಂಬರ್ 109ರ ಬಿಜೆಪಿ ಬೂತ್ ಅಧ್ಯಕ್ಷ ದೀಲಿಪ್ ಕುಮಾರ್ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದು, ದೀಲಿಪ್ ಕುಮಾರ್ ತಲೆಗೆ ಪೆಟ್ಟಾಗಿದೆ. ಇದೀಗ ಅವರನ್ನು ಟಿ.ನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀವು ಬಿಜೆಪಿಗೆ ಬೆಂಬಲ ನೀಡುತ್ತಿದ್ದೀರಾ? ಅದನ್ನು ನಿಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹಲ್ಲೆ ಮಾಡಿದ್ದಾರೆ ಎಂದು ದೀಲಿಪ್ ಕುಮಾರ್ ಆರೋಪಿಸಿದ್ದು, ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಟಿ.ನರಸೀಪುರ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಇದು ಮೂರನೇ ಬಾರಿ ಬಿಜೆಪಿ ಪ್ರಚಾರಕ್ಕೆ ಅಡ್ಡಿ ಮತ್ತು ಗಲಾಟೆಯಂತಹ ಪ್ರಕರಣಗಳು ನಡೆಯುತ್ತಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗಲಾಟೆ ಮಾಡಬೇಡಿ, ಎಲ್ಲರಿಗೂ ಪ್ರಚಾರ ಮಾಡಲೂ ಅವಕಾಶ ನೀಡಿ ಎಂದು ಹೇಳಿದ್ದರೂ ಕಾರ್ಯಕರ್ತರು ಮಾತ್ರ ಗಲಾಟೆ ಮುಂದುವರೆಸಿದ್ದಾರೆ.

ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಕ್ತಸಿಕ್ತ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುನ್ನುಡಿ ಬರೆದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ, ಬಿಜೆಪಿಯ ಹುರಿಯಾಳುವಾಗಿ ವಿ. ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಕ್ಷೇತ್ರದಲ್ಲಿ ವಿ. ಸೋಮಣ್ಣ ವರುಣಾ ಕ್ಷೇತ್ರದ ಅಭ್ಯರ್ಥಿಯಾದಾಗಿನಿಂದ ಸಿದ್ದರಾಮಯ್ಯ ವಿಪರೀತ ಟೆನ್ಶನ್ ಆಗಿದ್ದಾರೆ.
ಕಾಂಗ್ರೆಸ್ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರ ಪ್ರಚಾರಕ್ಕೆ ಸಿದ್ದರಾಮಯ್ಯ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಸಿದ್ದರಾಮಯ್ಯನವರ ತವರೂರು ಸಿದ್ದರಾಮನಹುಂಡಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿದ್ದು, ಇದು ರಾಜಕೀಯ ಗಲಾಟೆಯಲ್ಲ. ವಾಹನ ಅಪಘಾತ ವಿಚಾರಕ್ಕೆ ನಡೆದ ಜಗಳ ಎಂದು ಹೇಳಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಹಲ್ಲೆ ಆರೋಪ ಕೇಳಿಬಂದಿದೆ.












Click it and Unblock the Notifications