Smita Rakesh Campaign: ವರುಣಾದಲ್ಲಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಭರ್ಜರಿ ಪ್ರಚಾರ
ಇದೇ ಮೊದಲ ಬಾರಿಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕುಟುಂಬದಿಂದ ಮಹಿಳೆಯರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ವರುಣಾದಲ್ಲಿ ತಮ್ಮ ಮಾವನ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ಮಿತಾ ರಾಕೇಶ್ ಮನೆ ಮನೆ ಪ್ರಚಾರ ನಡೆಸಿದರು. ಗ್ರಾಮಸ್ಥರನ್ನು ಭೇಟಿ ಮಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಮಾವನವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಪರವಾಗಿ ಕುಟುಂಬದ ಮಹಿಳೆಯರು ಇದೇ ಮೊದಲ ಬಾರಿ ಮತಯಾಚನೆ ಮಾಡುತ್ತಿರುವುದು ಭಾರಿ ಗಮನ ಸೆಳೆದಿದೆ.

ಸ್ಮಿತಾ ರಾಕೇಶ್ ಮನವಿಗೆ ಗ್ರಾಮಸ್ಥರು ಕೂಡ ಉತ್ತಮವಾಗಿ ಸ್ಪಂದಿಸಿದ್ದಾರೆ. ನಾವು ಹಾಕದೇ ಸಿದ್ದರಾಮಯ್ಯನವರಿಗೆ ಎಂದು ಮಹಿಳೆಯರು ಹೇಳಿದರೆ, ಸಿದ್ದರಾಮಯ್ಯನವರಿಗೆ ಜೈಕಾರ ಹಾಕುವ ಮೂಲಕ ಗ್ರಾಮಸ್ಥರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಅವರಿಗೆ ವಿರುದ್ಧವಾಗಿ ಬಿಜೆಪಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದು, ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕನನ್ನು ಕಟ್ಟಿಹಾಕಲು ರಣತಂತ್ರ ರೂಪಿಸಿದೆ.
ರಮ್ಯಾ, ದುನಿಯಾ ವಿಜಯ್ ಪ್ರಚಾರ?
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪರವಾಗಿ ನಟಿ, ಮಾಜಿ ಸಂಸದೆ ರಮ್ಯಾ ಮತ್ತು ಚಲನಚಿತ್ರ ನಟ ದುನಿಯಾ ವಿಜಯ್ ಪ್ರಚಾರ ನಡೆಸುತ್ತಾರೆ ಎಂದು ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರ ಪ್ರಚಾರದ ದಿನಾಂಕ ಯಾವಾಗ ಎಂದು ಇನ್ನೂ ತಿಳಿದುಬಂದಿಲ್ಲ. ಯತೀಂದ್ರ ಸಿದ್ದರಾಮಯ್ಯ ಕೂಡ ವರುಣಾದಲ್ಲಿ ಠಿಕಾಣಿ ಹೂಡಿದ್ದು ಅಪ್ಪನ ಗೆಲ್ಲಿಸಲು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ರಾಜ್ಯಾದ್ಯಂತ ಹಲವು ಕ್ಷೇತ್ರಗಳಲ್ಲಿ ಮತಯಾಚನೆ ಮಾಡುವುದರಲ್ಲಿ ನಿರತವಾಗಿರುವುದರಿಂದ ಸ್ವ ಕ್ಷೇತ್ರದಲ್ಲಿ ಹೆಚ್ಚಿನ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಸಮೀಪವಾಗುತ್ತಿದ್ದಂತೆ ಅವರು ಸ್ವಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರನ್ನು ಸೋಲಿಸಲು ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿರುವ ಬಿಜೆಪಿ, ಪ್ರಮುಖ ಪ್ರಚಾರಕರನ್ನು ಕರೆಸಿ ಪ್ರಚಾರ ಮಾಡಿಸುವ ಸಾಧ್ಯತೆ ಇದೆ. ಅಮಿತ್ ಶಾ ವರುಣಾದಲ್ಲಿ ಪ್ರಚಾರ ಮಾಡಲಿದ್ದು, ಪ್ರಧಾನಿ ಮೋದಿ ಕೂಡ ವರುಣಾದಲ್ಲಿ ಪ್ರಚಾರ ಮಾಡುವ ಸಾಧ್ಯತೆ ಇದೆ.
ಪ್ರಮುಖ ನಾಯಕರು ರಾಜ್ಯಾದ್ಯಂತ ಪ್ರಚಾರದಲ್ಲಿ ನಿರತರಾಗಿರುವಾಗ ಅವರ ಮನೆಯವರು ಸ್ವಕ್ಷೇತ್ರದಲ್ಲಿ ಪ್ರಚಾರ ಮಾಡುವುದು ಸಾಮಾನ್ಯವಾಗಿದೆ. ಕನಕಪುರದಲ್ಲಿ ಡಿಕೆಶಿ ಪತ್ನಿ ಉಷಾ ಶಿವಕುಮಾರ್, ಚನ್ನಪಟ್ಟಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಪರವಾಗಿ ಅನಿತಾ ಕುಮಾರಸ್ವಾಮಿ ಪ್ರಚಾರ ಮಾಡುತ್ತಿದ್ದಾರೆ.












Click it and Unblock the Notifications