ವರುಣ ಮತದಾರರೇ ಸಿದ್ದರಾಮಯ್ಯನವರ ರಾಜಕೀಯ ಜೀವನ ಮುಗಿಸುತ್ತಾರೆ: ಪ್ರತಾಪ್ ಸಿಂಹ
ಮೈಸೂರು, ಏಪ್ರಿಲ್, 13: ರಾಜ್ಯ ವಿಧಾಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಘೋಷಿಸಿದ ಮೊದಲನೇ ಪಟ್ಟಿಯಲ್ಲೇ ವಿ.ಸೋಮಣ್ಣಗೆ ಎರಡು ಕ್ಷೇತ್ರಗಳ ಹೊಣೆಯನ್ನು ಹೊರಿಸಲಾಗಿದೆ. ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಅಖಾಡಕ್ಕಿಳಿಯಲ್ಲಿದ್ದು, ಇಲ್ಲಿ ಅವರು ಗೆಲ್ಲುವುದಕ್ಕೆ ಆಗುವುದಿಲ್ಲ ಎಂದು ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ವರುಣದಲ್ಲಿ ಸಿದ್ದರಾಮಯ್ಯನವರೇ ಸೋಲನುಭವಿಸಲಿದ್ದಾರೆ ಎಂದು ಹೇಳಿದ್ದಾರೆ.
ವರುಣಾ ಕ್ಷೇತ್ರದ ಮತದಾರರು ಬುದ್ದಿವಂತರಿದ್ದಾರೆ. ಹಾಗಾಗಿ ಈ ಬಾರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ರಾಜಕೀಯ ಜೀವನವನ್ನು ಕ್ಷೇತ್ರದ ಜನರೇ ಮುಗಿಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣ ಕ್ಷೇತ್ರ ಚುನಾವಣಾ ಕ್ಷೇತ್ರವಾಗಿ 15 ವರ್ಷ ತುಂಬುತ್ತಾ ಬರುತ್ತಿದೆ. ಆದರೂ ಕ್ಷೇತ್ರದ ಜನರಿಗೆ ತಮ್ಮ ಕೆಲಸ ಮಾಡಿಸಿಕೊಳ್ಳಲು ಎಲ್ಲಿ ಹೋಗಬೇಕೆಂಬ ಗೊಂದಲ ಇದೆ. ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಒಂದು ತಾಲೂಕು ಕೇಂದ್ರ ಮಾಡಿಸಲು ಸಾಧ್ಯವಾಗಿಲ್ಲ. ವರುಣಾ ಕ್ಷೇತ್ರಕ್ಕೆ ತಾಲೂಕು ಕೇಂದ್ರವಿಲ್ಲದೆ ಅಲ್ಲಿನ ಜನ ಅಬ್ಬೆಪರಿಗಳಾಗಿದ್ದಾರೆ ಎಂದು ಕಿಡಿಕಾರಿದರು.
ತಾಯಿ ಚಾಮುಂಡೇಶ್ವರಿ ಆಶೀರ್ವಾದ ಮಾಡುವುದು ಭಕ್ತರಿಗೆ ಮಾತ್ರ
ಮೈಸೂರು ಭಾಗಕ್ಕೆ ನಾಯಕತ್ವದ ದೊಡ್ಡ ಕೊರತೆ ಇತ್ತು. ತುರ್ತಾಗಿ ಒಬ್ಬ ನಾಯಕನ ಅವಶ್ಯಕತೆಯಿತ್ತು. ಸೋಮಣ್ಣ ಆ ಕೊರತೆಯನ್ನು ನೀಗಿಸುತ್ತಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಸಂಘಟನೆ ಮಾಡುತ್ತಾರೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದ ಮಾಡುವುದು ಆಕೆಯ ಭಕ್ತರಿಗೆ ಮಾತ್ರ. ಸಿದ್ದರಾಮಯ್ಯ ಪತ್ನಿ ಚಾಮುಂಡಿ ತಾಯಿ ಭಕ್ತೆ ಇರಬಹುದು. ಆದರೆ ಅವರ ಪತ್ನಿ ಚುನಾವಣೆಗೆ ಸ್ಪರ್ಧಿಸಿಲ್ಲ ಎಂದರು.

ಸಿದ್ದರಾಮಯ್ಯ 2018ರಲ್ಲಿ ಇದೇ ನನ್ನ ಕೊನೆ ಚುನಾವಣೆ ಎಂದಿದ್ದರು. ಕೊನೆ ಚುನಾವಣೆಯಲ್ಲೇ ಚಾಮುಂಡೇಶ್ವರಿ ಕ್ಷೇತ್ರದ ಜನ ಅವರನ್ನು ಮುಗಿಸಿದರು. ಈ ಬಾರಿಯೂ ಅದೇ ಪ್ಲೇಟ್ ಅನ್ನು ಸಿದ್ದರಾಮಯ್ಯ ಹಾಕುತ್ತಿದ್ದಾರೆ. ಇಲ್ಲಿನ ಜನರು ಕೂಡ ಅವರ ರಾಜಕೀಯ ಜೀವನವನ್ನು ಮುಗಿಸುತ್ತಾರೆ ಎಂದು ವ್ಯಂಗ್ಯವಾಡಿದರು. ಹಾಗೆಯೇ ವರುಣಾ ತಾಲೂಕು ಕೇಂದ್ರವಾಗಬೇಕಿದೆ. ಒಂದೇ ಸರ್ಕಾರಿ ಕಚೇರಿಯಲ್ಲಿ ವರುಣದ ಜನರ ಕೆಲಸವಾಗಬೇಕು. ಸೋಮಣ್ಣನವರನ್ನು ಗೆಲ್ಲಿಸಿ ವರುಣ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡುತ್ತೇವೆ ಎಂದರು.
ಪ್ರಚಾರ ಕಾರ್ಯಕ್ಕೆ ಚಾಲನೆ
ಮತ್ತೊಂದೆಡೆ ಬಿಜೆಪಿ ಎರಡನೇ ಪಟ್ಟಿ ಘೋಷಣೆ ಆಗುತ್ತಿದ್ದಂತೆ ಇತ್ತ ವಿಧಾನಸಭೆ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗತೊಡಗಿದೆ. ಹಾಗೆಯೇ ಗುರುವಾರ (ಏಪ್ರಿಲ್ 13) ವರುಣ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಮೈಸೂರಿಗೆ ಭೇಟಿ ನೀಡಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಮೊದಲಿಗೆ ವಿ.ಸೋಮಣ್ಣ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ನಂತರ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಹಾಗೆಯೇ ಸಂಜೆ ನಂಜನಗೂಡು ನಂಜುಂಡೇಶ್ವರ ದರ್ಶನ ಪಡೆಯಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಕ್ಷೇತ್ರದಲ್ಲಿ ಕೇವಲ ನೆಪ ಮಾತ್ರ. ನನ್ನ ಕಾರ್ಯಕರ್ತರು, ಮುಖಂಡರೇ ನನ್ನ ದೊಡ್ಡ ಶಕ್ತಿ ಆಗಿದ್ದಾರೆ. ಇಲ್ಲಿ ಯಾವ ಮುಖಂಡರು, ಚಿಕ್ಕವರು ದೊಡ್ಡವರು ಇಲ್ಲ. ಇಲ್ಲಿ ಎಲ್ಲರೂ ಸೇರಿ ನನ್ನನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂತಹ ನಾಯಕರಾದರೂ ಅವರು ಕೂಡ ನನ್ನಂತೆ ಒಬ್ಬ ಅಭ್ಯರ್ಥಿ ಅಷ್ಟೇ. ನಾನು ಹಾಗೂ ಸಿದ್ದರಾಮಯ್ಯ ಒಂದೇ ಗರಡಿಯಲ್ಲಿ ಪಳಗಿದವರು. ಪ್ರಚಾರಕ್ಕೆ ಯಾರು ಬರುತ್ತಾರೆ, ಯಾರು ಬರುವುದಿಲ್ಲ ಎಂಬ ಚರ್ಚೆ ಅನಗತ್ಯ. ಎಲ್ಲರೂ ಸೇರಿಯೇ ನನ್ನನ್ನು ವರುಣಾ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ ಎಂದು ತಿಳಿಸಿದರು.












Click it and Unblock the Notifications