Siddaramaiah: ಸಿದ್ದರಾಮಯ್ಯ ಸಿಎಂ ಎಂದು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಮೈಸೂರು, ಮೇ. 13: ಕಾಂಗ್ರೆಸ್ ಈಗಾಗಲೇ ಮ್ಯಾಜಿಕ್ ನಂಬರ್ ಅನ್ನು ದಾಟುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದರೆ ಸಿಎಂ ಯಾರು ಎಂಬುದು ಈಗೀನ ಬಹು ಮುಖ್ಯ ಪ್ರಶ್ನೆ. ಸಿಎಂ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮುಖವಾಗಿ ಪೈಪೋಟಿಯಲ್ಲಿದ್ದಾರೆ.
ಇವರ ಜೊತೆಗೆ ದಲಿತ ಸಿಎಂ ಎನ್ನುವ ಅಂಶವೂ ಸೇರಿಕೊಂಡು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಕೂಡ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ನಡುವೆ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭರ್ಜರಿ ಅಂತರದಲ್ಲಿದ್ದು, ಗೆಲುವು ಖಚಿತವಾಗಿದೆ. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.

ಎದೆಯ ಮೇಲೆ ಸಿದ್ದರಾಮಯ್ಯ ಸಿಎಂ ಎಮದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೈಸೂರಿನ ಅಭಿಮಾನಿ ತಮಗೆ ಸಿದ್ದರಾಮಯ್ಯ ಮೇಲಿರುವ ಅಭಿಮಾನವನ್ನು ಈ ರೀತಿ ವ್ಯಕ್ತಪಡಿಸಿದ್ದಾರೆ.
ಇತ್ತ ಫಲಿತಾಂಶದ ಹೊತ್ತಿನಲ್ಲಿ ಕಾಂಗ್ರೆಸ್ ಪರ ಅಲೆ ಎಂಬ ನಂಬಿಕೆಯನ್ನು ಕೈ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ. ಆ ಕಾರಣಕ್ಕಾಗಿ ಅವರು 'MyCM' ಕ್ಯಾಂಪೇನ್ ಅನ್ನು ಆರಂಭಿಸಿದ್ದು, ಕಾಂಗ್ರೆಸ್ಗೆ ಬಹುಮತ ಬಂದರೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಸಚಿವ ವಿ ಸೋಮಣ್ಣ ಅವರು ಕಣಕ್ಕಿಳಿದಿದ್ದಾರೆ. ಏಳನೇ ಸುತ್ತಿನಲ್ಲಿ ಸಿದ್ದರಾಮಯ್ಯ 45075 ಮತಗಳನ್ನು ಪಡೆದಿದ್ದರೇ, ಬಿಜೆಪಿ ಅಭ್ಯರ್ಥಿ, ಸಚಿವ ವಿ ಸೋಮಣ್ಣ 26049 ಮತಗಳನ್ನು ಪಡೆದಿದ್ದಾರೆ. ಸಿದ್ದರಾಮಯ್ಯ 28026 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, 'ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.












Click it and Unblock the Notifications