Varuna: ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರ ಯಾತ್ರೆ ಮೇಲೆ ಕಲ್ಲು ತೂರಾಟ, ಗಲಾಟೆ; ಬಿಜೆಪಿ ಕಾರ್ಯಕರ್ತನಿಗೆ ಗಾಯ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರ ಕಾವು ಇದೀಗ ಕಲ್ಲು ತೂರಾಟ ಮತ್ತು ಗಲಾಟೆ ಹಂತದವರೆಗೂ ತಲುಪಿದೆ. ಮೇ 10ರಂದು ಮತದಾನ ಸಮೀಪಿಸುತ್ತಿರುವ ಬೆನ್ನಲ್ಲೇ ಚುನಾವಣಾ ಕಣ ರಣರಂಗವಾಗಿದೆ.
ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಕೀಳನಪುರದ ಬಿಜೆಪಿ ಕಾರ್ಯಕರ್ತ ನಾಗೇಶ್ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. pic.twitter.com/ov60uuzizr
— Pratap Simha (@mepratap) April 27, 2023
ಕರ್ನಾಟಕದಲ್ಲಿಯೇ ಹೈ-ವೋಲ್ಟೇಜ್ ಕ್ಷೇತ್ರವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಚಾರ ಯಾತ್ರೆ ಮೇಲೆ ಕಲ್ಲು ತೂರಾಟ ನಡೆದಿದೆ. ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ತವರೂರಾದ ಸಿದ್ದರಾಮನಹುಂಡಿದಲ್ಲಿ ಕಲ್ಲು ತೂರಾಟದ ಘಟನೆ ನಡೆದಿದೆ.

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ವಿ. ಸೋಮಣ್ಣ ಅವರೊಂದಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮನಹುಂಡಿಗೆ ಬಂದಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ಮನೆ ಎದುರು ಪ್ರಚಾರ ಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಸ್ವಲ್ಪದರಲ್ಲೇ ಪಾರಾಗಿದ್ದು, ಓರ್ವ ಬಿಜೆಪಿ ಕಾರ್ಯಕರ್ತನಿಗೆ ಗಾಯವಾಗಿದೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸಿದ್ದರಾಮಯ್ಯ ಸಂಬಂಧಿಕರಿಂದ ಗಲಾಟೆ ಆರೋಪ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಕಾರ್ಯಕರ್ತನೊಬ್ಬ, "ಸಿದ್ದರಾಮಯ್ಯ ಸಂಬಂಧಿಕರು ನಮ್ಮ ಜೊತೆ ಗಲಾಟೆ ಮಾಡಿದರು. ಏಕಾಏಕಿ ಸಿದ್ದರಾಮಯ್ಯಗೆ ಜೈ, ಸೋಮಣ್ಣಗೆ ಧಿಕ್ಕಾರ ಎಂದು ಕೂಗಿದರಲ್ಲದೆ, ಕಲ್ಲು ತೂರಾಟ ನಡೆಸಿ ಕಾರುಗಳನ್ನು ಜಖಂಗೊಳಿಸಿದರು," ಎಂದು ಆರೋಪಿಸಿದ್ದಾರೆ.
ಸಿದ್ದರಾಮನಹುಂಡಿಯಲ್ಲಿ ಪ್ರಚಾರ ವೇಳೆ ವಾಹನದಲ್ಲಿ ವಿ.ಸೋಮಣ್ಣ, ಪ್ರತಾಪ್ ಸಿಂಹ ಇದ್ದರು. ಏಕಾಏಕಿ ಕಲ್ಲು ತೂರಾಟ ನಡೆಸಿ, ದೊಣ್ಣೆಯಿಂದ ಹಲ್ಲೆ ಮಾಡಿದರು. ಈ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಎನ್ನುವವರ ಕಾಲು ಮತ್ತು ಕೈಗೆ ಗಾಯವಾಗಿದೆ ಎಂದು ಹೇಳಿದರು.
ಗಲಾಟೆ ಸಂಬಂಧ ಮೂವರನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ನಂತರ ಸಿದ್ದರಾಮಯ್ಯ ಆಪ್ತರು ಪೊಲೀಸರಿಗೆ ಕರೆ ಮಾಡಿದ ನಂತರ ಬಿಡುಗಡೆ ಮಾಡಲಾಗಿದೆ. ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇವೆ. ನಾವು ಪ್ರಚಾರ ನಡೆಸಲು ಕಷ್ಟವಾಗಿದೆ, ಆದರೂ ಪ್ರಚಾರ ಮಾಡುತ್ತಿದ್ದೇವೆ ಎಂದು ಬಿಜೆಪಿ ಕಾರ್ಯಕರ್ತ ಹೇಳಿದ್ದಾರೆ.
"ಇಂದು ವರುಣಾ ಕ್ಷೇತ್ರದಲ್ಲಿ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತ ಅಮಾನುಷವಾಗಿ ಹಲ್ಲೆಗೊಳಗಾಗಿದ್ದಾನೆ. ಡಬಲ್ ಇಂಜಿನ್ ಸರ್ಕಾರ ಮತ್ತು ಉತ್ತಮ ಕರ್ನಾಟಕಕ್ಕಾಗಿ ಮತಗಳನ್ನು ಪಡೆಯಲು ಶ್ರದ್ಧೆಯಿಂದ ಪ್ರಚಾರ ಮಾಡುತ್ತಿರುವುದು ಈತನ ಅಪರಾಧವೇ?," ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯ ಅಣ್ಣನ ಮಕ್ಕಳ ವಿರುದ್ಧ ಪ್ರಕರಣ ದಾಖಲು
ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೆಂಬಲಿಗರ ಮೇಲೆ ಕಾಂಗ್ರೆಸ್ ಮುಖಂಡರು ಕಲ್ಲು ತೂರಾಟ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಣ್ಣನ ಮಕ್ಕಳ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತ ನಾಗೇಶ್ ಅವರ ತಂದೆ ಚಂದ್ರಪ್ಪ ಅವರು ದೂರು ದಾಖಲಿಸಿದ್ದು, ನಾಗೇಶ್ಗೆ ಸಿದ್ದರಾಮಯ್ಯ ಅಣ್ಣನ ಮಕ್ಕಳಿಂದ ಮಾರಣಾಂತಿಕವಾಗಿ ಹಲ್ಲೆ ಎಂದು ಯಾರ ಹೆಸರನ್ನು ಉಲ್ಲೇಖಿಸದೆ ನಾಗೇಶ್ ತಂದೆ ದೂರು ನೀಡಿದ್ದಾರೆ.
ಹಲ್ಲೆಗೊಳಗಾದ ನಾಗೇಶ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ನನ್ನ ಮಗ ವಿ. ಸೋಮಣ್ಣ ಪರ ಪ್ರಚಾರಕ್ಕೆ ಹೋಗಿದ್ದಾಗ ಘಟನೆ ನಡೆದಿದ್ದು, ನನ್ನ ಮಗನಿಗೆ ನ್ಯಾಯ ಕೊಡಿಸಿ ಎಂದು ಚಂದ್ರಪ್ಪ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವರುಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications