ಅಬ್ದುಲ್ ಅಜೀಜ್ ಜೆಡಿಎಸ್ ತೊರೆಯುವ ನಿರ್ಧಾರ ಮಾಡಿದ್ದೇಕೆ?, ಇಲ್ಲಿದೆ ವಿವರ
ಮೈಸೂರು, ಏಪ್ರಿಲ್, 03: ಜೆಡಿಎಸ್ ವರಿಷ್ಠರ ಧೋರಣೆಯಿಂದ ಬೇಸರಗೊಂಡಿರುವ ಎನ್.ಆರ್. ಕ್ಷೇತ್ರದ ಮುಖಂಡ ಹಾಗೂ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಜೀಜ್ (ಅಬ್ದುಲ್ಲಾ) ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ.
ಸೋಮವಾರ ಬೆಳಗ್ಗೆ ಮೈಸೂರು ನಗರದ ರಾಜೀವ್ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದರೆ. ಆದರೆ ಈಗ ನನ್ನನ್ನು ಕಡೆಗಣಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಮುಂದುವರಿಯಬೇಕೆ? ಅಥವಾ ಬೇಡವೇ ಎಂಬುದರ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಚುನಾವಣೆಯಲ್ಲಿ ಸೋತರೂ ಕಳೆದ ಐದು ವರ್ಷಗಳಿಂದ ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಜೆಡಿಎಸ್ ಕಟ್ಟಿ ಬೆಳೆಸಿದ್ದೇನೆ. ನಾಲ್ಕು ತಿಂಗಳ ಹಿಂದೆ ನನ್ನೊಡನೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ನಾನು ಎನ್.ಆರ್.ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ನೀವು ಬೆಂಬಲಿಸಬೇಕು ಎಂದು ಕೇಳಿಕೊಂಡಿದ್ದರು. ಅವರನ್ನು ನಾನೂ ಸ್ವಾಗತಿಸಿದ್ದೆ ಎಂದರು.
ನನ್ನೊಡನೆ ಯಾವುದೇ ಚರ್ಚೆ ಮಾಡಲಿಲ್ಲ
ನಮ್ಮ ಸಮಾಜದ ಹಿರಿಯ ಮುಖಂಡರು ಕ್ಷೇತ್ರಕ್ಕೆ ಬರುತ್ತಾರೆ. ನಮ್ಮಂತಹವರನ್ನು ಬೆಳೆಸುತ್ತಾರೆ ಎಂದುಕೊಂಡಿದ್ದೆ. ಆದರೆ, ನಂತರ ಅವರು ನನ್ನೊಡನೆ ಯಾವುದೇ ಚರ್ಚೆ ಮಾಡಲಿಲ್ಲ. ಕ್ಷೇತ್ರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಆರಂಭಿಸಿದರು. ಮೊದಲನೇ ಪಟ್ಟಿಯಲ್ಲಿ ಎನ್.ಆರ್.ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಿಲ್ಲ. ಹೀಗಾಗಿ ಕಾರ್ಯಕರ್ತರಲ್ಲಿ ಗೊಂದಲವಿದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಪಕ್ಷದಲ್ಲಿ ಮುಂದುವರಿಯಬೇಕೆ ಎಂಬ ಬಗ್ಗೆ ಚರ್ಚೆಯನ್ನು ನಡೆಸುತ್ತಿದ್ದೇನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಜೆಡಿಎಸ್ನ ಅಭ್ಯರ್ಥಿ ಯಾರು ಎಂಬ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಕಳೆದ ಚುನಾವಣೆಯಲ್ಲಿಯೂ ಕೊನೆ ಕ್ಷಣದಲ್ಲಿ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಆದ್ದರಿಂದ ಆಗ ಕಡಿಮೆ ಮತಗಳನ್ನು ಪಡೆಯುವಂತಾಯಿತು. ಈ ಬಾರಿಯೂ ಅದು ಮರುಕಳಿಸುವಂತಿದೆ. ಈ ಹಿನ್ನೆಲೆ ಜೆಡಿಎಸ್ನಿಂದ ಟಿಕೆಟ್ ನೀಡಿದರೂ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ಬೇಸರ ವ್ಯಕ್ತಪಡಿಸಿದ ಅಬ್ದುಲ್ ಅಜೀಜ್
ಪಕ್ಷದ ಪದಾಧಿಕಾರಿಗಳಾಗಿ ನೇಮಕಗೊಂಡಿದ್ದವರನ್ನು ನಮಗೆ ಗೊತ್ತಿಲ್ಲದೇ ಬದಲಾಯಿಸತೊಡಗಿದರು. ಕ್ಷೇತ್ರದ ಪರಿಚಯವೇ ಇಲ್ಲದವರನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದರು. ಇದರಿಂದ ಸಹಜವಾಗಿ ಕ್ಷೇತ್ರದ ಕಾರ್ಯಕರ್ತರಲ್ಲಿ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿ.ಮಂಜು ಗೌಡ, ಪಾಲಿಕೆ ಮಾಜಿ ಸದಸ್ಯ ರಾಮು, ಎಸ್ಸಿ ಘಟಕದ ಅಧ್ಯಕ್ಷ ಕಿರಣ್ಕುಮಾರ್, ರಾಜ್ಯ ಕಾರ್ಯದರ್ಶಿ ಇಲಿಯಾಸ್ ಬೇಗ್, ಅಬ್ದುಲ್ ರಶೀದ್, ರಮೇಶ್, ಗುರುಪ್ರಸಾದ್, ಪ್ರದೀಪ್ಗೌಡ, ಮಂಜುನಾಥ್, ಸೈಯದ್ ಸನಾವುಲ್ಲಾ ಸೇರಿದಂತೆ ಮತ್ತಿತರರು ಇದ್ದರು.
ಕಾಂಗ್ರೆಸ್ಸಿನಲ್ಲಿಯೇ ಇದ್ದವನು ನಾನು
ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಹಾಗೂ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಸೋಮವಾರ ಮೈಸೂರು ನಗರದ ನ್ಯಾಯಾಲಯದ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಇಂದು ಪ್ರಾಯಶ್ಚಿತ ಸತ್ಯಾಗ್ರಹ ಹೆಸರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಪ್ರಾಯಶ್ಚಿತ ಸತ್ಯಾಗ್ರಹ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳ ಸಕ್ರಿಯ ರಾಜಕಾರಣದಲ್ಲಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿಯೇ ಇದ್ದವನು ನಾನು.
ಎಲ್ಲಿದ್ದರೂ, ಹೇಗಿದ್ದರೂ ಎಲ್ಲ ಕಾಲದಲ್ಲಿಯೂ ನನ್ನ ಮನಸ್ಸಿನಲ್ಲಿರುವುದು ಕಾಂಗ್ರೆಸ್ ಮಾತ್ರ ಶಾಸಕ, ಸಚಿವ, ಸಂಸದನಾಗಿ ಸದಾ ಕಾಲವೂ ಜನರೊಟ್ಟಿಗೆ ಬೆರೆತು ಬದುಕಿದ ಹಾಗೂ ಜನರೊಟ್ಟಿಗೇ ಬದುಕಲು ಬಯಸುವ ಜೀವ ನನ್ನದು ಎಂದು ತಿಳಿಸಿದರು.
ಕೆಲವರು ನೀವು ಭಾರತೀಯ ಜನತಾ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದೀರಿ ಎಂದು ಹೇಳುತ್ತಿದ್ದಾರೆ. ನಾನು ಸಾಂಸ್ಕೃತಿಕ ಮತ್ತು ಸಾಹಿತ್ಯಕವಾದ ಕೋಟಾದ ಅಡಿಯಲ್ಲಿ ವಿಧಾನ ಪರಿಷತ್ತಿನ ಸದಸ್ಯನಾಗಿದ್ದೇನೆಯೇ ಹೊರತು, ಪಕ್ಷದ ಬಲದಿಂದ ಅಲ್ಲ ಎನ್ನುವುದನ್ನು ದೂರುವ ಮಂದಿ ಅರ್ಥ ಮಾಡಿಕೊಳ್ಳಬೇಕಾದ ಅಗತ್ಯವಿದೆ. ನಾನು ರಾಜ್ಯಪಾಲರಿಂದ ನಾಮಕರಣಗೊಂಡ ಸದಸ್ಯನಾದುದರಿಂದ ಸ್ವತಂತ್ರನಾಗಿದ್ದೇನೆ. ನಾನು ಯಾವುದೇ ಪಕ್ಷದ ಸಿದ್ಧಾಂತಕ್ಕೂ ಸೇರಿದವನಲ್ಲ ಎಂಬುದನ್ನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ ಎಂದರು.












Click it and Unblock the Notifications