ಮೈಸೂರು ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು, ಅ. 14: ವೈರಸ್ ಸಂಕಷ್ಟದ ಮಧ್ಯೆ ವಿಶ್ವವಿಖ್ಯಾತ ದಸರಾ ಮಹೋತ್ಸವ ಆಚರಿಸಬೇಕಾದ ಅನಿವಾರ್ಯತೆ ಈ ಸಲ ಎದುರಾಗಿದೆ. ಹೀಗಾಗಿ ದಸರಾ ಆಚರಣೆ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರು ಮಾರ್ಗಸೂಚಿಯನ್ನು ಮೈಸೂರು ಜಿಲ್ಲಾಡಳಿತಕ್ಕೆ ಕಳುಹಿಸಿದ್ದಾರೆ.
ಈ ಬಾರಿ ದಸರಾ ಕಾರ್ಯಕ್ರದಲ್ಲಿ ಭಾಗವಹಿಸುವ ಎಲ್ಲರಿಗೂ ಕೋವಿಡ್ ಪರೀಕ್ಷೆಯನ್ನು ಕಡ್ಡಾಯ ಮಾಡಲಾಗಿದೆ. ದಸರಾ ಆಚರಣೆಯ ಪ್ರಮುಖ ನಾಲ್ಕು ಕಾರ್ಯಕ್ರಮಗಳಿಗೆ ಷರತ್ತು ಬದ್ದ ಅನುಮತಿಯನ್ನು ರಾಜ್ಯ ಸರ್ಕಾರ ಕೊಟ್ಟಿದೆ. ದಸರಾ ಉದ್ಘಾಟನೆ, ಜಂಬೂ ಸವಾರಿ, ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ. ಜೊತೆಗೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು 200 ಮಂದಿಗೆ ಮಾತ್ರ ಅವಕಾಶ ನೀಡಿ ಅನುಮತಿ ಕೊಡಲಾಗಿದೆ.
ಕರ್ನಾಟಕದಲ್ಲಿ ದಸರಾ, ದೀಪಾವಳಿ ಆಚರಣೆಗೆ ಮಾರ್ಗಸೂಚಿ!
ದಸರಾ ಜಂಬೂಸವಾರಿಗೆ 300 ಮಂದಿಗೆ ಅವಕಾಶ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 50 ಮಂದಿಗೆ ಮಾತ್ರ ಅವಕಾಶ ಕೊಡಲಾಗಿದೆ. ದೀಪಾಲಂಕಾರ ಒಂದು ದಿನಕ್ಕೆ ಎರಡು ಗಂಟೆ ಮಾತ್ರ ಇರಬೇಕು. ಆಗ ಎಲ್ಲಿಯೂ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಪ್ರವೇಶವಿರುತ್ತದೆ. ಕೊರೊನಾ ಮಾರ್ಗಸೂಚಿ ಮೀರದಂತೆ ಕಾರ್ಯಕ್ರಮ ರೂಪಿಸಲು ಸೂಚನೆ ಕೊಡಲಾಗಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಎಲ್ಲರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರು ಮಾರ್ಗಸೂಚಿಯಲ್ಲಿ ಸೂಚಿಸಿದ್ದಾರೆ.