Siddaramaiah Varuna Campaign: ವರುಣಾ ಕ್ಷೇತ್ರದ 13 ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ
ಮೈಸೂರು, ಏಪ್ರಿಲ್ 22: ಕರ್ನಾಟಕ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರ ವರುಣಾದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ವಿ ಸೋಮಣ್ಣ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣಕ್ಕಿರುದಿರುವುದು ಬಿಸಿಲಿ ಬೇಗೆಯಂತೆ ಚುನಾವಣಾ ಕಾವು ಏರತೊಡಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪ್ರಚಾರ ಕಣದಲ್ಲಿ ಧುಮುಕಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಪ್ರಾಬಲ್ಯವಿರುವ ವರುಣಾದಲ್ಲಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯ ಹಿರಿಯ ನಾಯಕರಾಗಿರುವ ವಿ ಸೋಮಣ್ಣ ಅವರ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ಹೆಚ್ಚು ಗಮನವಿರಿಸಲಾಗಿದೆ. ಈ ಬಾರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿಯ ಹಿರಿಯ ನಾಯಕರು ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಹುಡುಕುತ್ತಲೇ ಇದ್ದರು.

ಕೊನೆಗೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಮತಗಳು ನಿರ್ಣಯಕವಾಗಿರುವುದರಿಂದ ವಿ ಸೋಮಣ್ಣ ಅವರನ್ನು ಸ್ಪರ್ಧೆಗೆ ಇಳಿಸಲಾಗಿದೆ. ಚುನಾವಣಾ ಸಮೀಕ್ಷೆಗಳ ಪ್ರಕಾರ ಸಿದ್ದರಾಮಯ್ಯ ಅವರು ತಮ್ಮ ತವರು ಕ್ಷೇತ್ರದಲ್ಲಿ ಗೆಲ್ಲುವುದು ಸುಲಭವಾಗಿದೆ. ವರುಣಾದಲ್ಲಿ ಸ್ಪರ್ಧೆ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ಇದು ನನ್ನ ಕೊನೆಯ ಚುನಾವಣೆ ಹೀಗಾಗಿ ನಾನು ಈ ಕ್ಷೇತ್ರದಲ್ಲಿ ನಿಲ್ಲುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ಬಿಜೆಪಿ ಹಾಗೂ ಆರ್ಎಸ್ಎಸ್ನವರು ನನ್ನನ್ನು ಸೋಲಿಸಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಆದರೆ ಇಲ್ಲಿ ಜನಧಿಕಾರವೇ ಅಂತಿಮವಾಗಿದ್ದು, ಜನಗೆ ಜನಾಶೀರ್ವಾದ ಇದೆ. ಹೀಗಾಗಿ ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ಸುತ್ತೂರು ಮಠಕ್ಕೆ ಆಗಮಿಸಿದ್ದು ಬಳಿಕ ಅಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಸಿದ್ದರಾಮಯ್ಯ ಅವರು ಶನಿವಾರ ನಂಜನಗೂಡು ತಾಲೂಕಿನ ಕಾರ್ಯ, ಕರೇಪುರ, ಹಾಡ್ಯ, ಬಾಣೂರು, ಚಿನ್ನಂಬಳ್ಳಿ, ತಗಡೂರು, ವರಹಳ್ಳಿ, ಚುಂಚನಹಳ್ಳಿ, ಹನುಮಪುರ, ದಾಸನೂರು, ಕಾರೆಮೊಳೆ, ತೊರೆವಳ್ಳಿ, ತೊರೆವಳ್ಳಿ ಮೋಳೆ, ಚಿಕ್ಕಹೊಮ್ಮಾದ ಮೊಳೆ, ಅಂಕುಶರಾಯನಪುರ, ಚಿಕ್ಕಹೊಮ್ಮ, ದೊಡ್ಡಹೊಮ್ಮ, ಅವತಾಳಪುರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶನಿವಾರ ರಾತ್ರಿವರೆಗೂ ಪ್ರಚಾರ ಭರಾಟೆ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಈಗಗಲೇ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಳಮಟ್ಟದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಪರ ಮಗ ಯತೀಂದ್ರ ಹಾಗೂ ಮೊಮ್ಮಗನೂ ಪ್ರಚಾರಕ್ಕೆ ತೊಡಗಿಸಿಕೊಂಡಿದ್ದಾನೆ. ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿ ಪಾಠ ಕಲಿಸಿದ್ದಾರೆ. ಈ ಬಾರಿ ವರುಣಾದಲ್ಲಿ ಸೋಲಿಸಿ ಮನೆಗೆ ಕಳುಹಿಸಲಿದ್ದಾರೆ ಎಂದು ಗುಡುಗಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಹಾಗೂ ಅಭ್ಯರ್ಥಿಯಾದ ಸೋಮಣ್ಣ ಅವರಿಗೆ ಎರಡು ಕಡೆ ಜನ ಪ್ರಶ್ನೆಗಳನ್ನು ಕೇಳಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗುತ್ತಿವೆ. ಹೀಗಾಗಿ ಬಿಜೆಪಿ ಬಲವರ್ಧನೆಗಾಗಿ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿಯಾದ ಬಿಎಲ್ ಸಂತೋಷ್ ಅವರು ಶುಕ್ರವಾರ ಮೈಸೂರಿಗೆ ತೆರಳಿ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ.












Click it and Unblock the Notifications