ಮೈಸೂರು ಮೃಗಾಲಯ ಸಂಪರ್ಕಿಸಲು ಅಂಡರ್ ಪಾಸ್ ನಿರ್ಮಾಣ
ಮೈಸೂರು, ಜನವರಿ 29 : ಸದಾ ವಾಹನ ದಟ್ಟಣೆಯಿಂದ ಕೂಡಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ರಸ್ತೆಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. 1.95 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುವುದರಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಸುತ್ತಾ ಸದಾ ವಾಹನ ಸಂಚಾರ ದಟ್ಟಣೆ ಇರುತ್ತದೆ. ವಾರಾಂತ್ಯ ಮತ್ತು ರಜೆ ದಿನಗಳಲ್ಲಿ ವಾಹನ ಸಂಖ್ಯೆ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿದೆ.
ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಸಂಚಾರ ದಟ್ಟಣೆ ಕಡಿಮೆ ಆಗಿಲ್ಲ. ಆದ್ದರಿಂದ, ಜನರು ರಸ್ತೆ ದಾಟಲು ಪರದಾಡುತ್ತಿದ್ದಾರೆ. ಹೀಗಾಗಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತಿದೆ.

ಪಾರ್ಕಿಂಗ್ ಸ್ಥಳದಿಂದ ಮೃಗಾಲಯಕ್ಕೆ ಸಂಪರ್ಕ ಕಲ್ಪಿಸಲು ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರ 1.95 ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ನಿರ್ಮಿಸಲಿದೆ. ಕಾಮಗಾರಿ ಟೆಂಡರ್ ಪೂರ್ಣಗೊಂಡಿದ್ದು, 165 ದಿನದಲ್ಲಿ ಕಾಮಗಾರಿ ಮುಗಿಯುವ ನಿರೀಕ್ಷೆ ಇದೆ.
ಮೈಸೂರು ಮಹಾನಗರ ಪಾಲಿಕೆ ಈಗಾಗಲೇ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ ನೀಡಿದೆ. ಮೃಗಾಲಯಕ್ಕೆ ಹೋಗಲು ಮತ್ತು ಹೊರಬರಲು ಪ್ರತ್ಯೇಕ ಮಾರ್ಗಗಳನ್ನು ನಿರ್ಮಾಣ ಮಾಡಲಾಗುತ್ತದೆ.
ಕಾಮಗಾರಿ ಆರಂಭವಾದರೆ ಕೆಲವು ದಿನಗಳ ಕಾಲ ಮುಖ್ಯ ರಸ್ತೆ ಬಂದ್ ಆಗಲಿದೆ. ಇದರಿಂದಾಗಿ ಚಾಮುಂಡಿಬೆಟ್ಟ ಮತ್ತು ಇತರ ಸ್ಥಳಗಳಿಗೆ ಸಾಗಲು ಮೃಗಾಲಯದ ಹಿಂಭಾಗದ ರಸ್ತೆಯನ್ನು ಜನರು ಬಳಸಬೇಕಾಗುತ್ತದೆ.












Click it and Unblock the Notifications