ಕೊರೊನಾ- ನಿಫಾ ಆತಂಕ: ಅಕ್ಟೋಬರ್ ಅಂತ್ಯದವರೆಗೆ ಮೈಸೂರು- ಕೇರಳ ಸಂಚಾರ ನಿರ್ಬಂಧ
ಮೈಸೂರು, ಸೆಪ್ಟೆಂಬರ್ 11: ನೆರೆಯ ರಾಜ್ಯ ಕೇರಳದಲ್ಲಿ ಮಹಾಮಾರಿ ಕೋವಿಡ್ ಸೋಂಕು ಹರಡುವಿಕೆಯ ಹೆಚ್ಚಳ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮೈಸೂರು- ಕೇರಳ ನಡುವೆ ವಾಹನಗಳ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ.
ಇದುವರೆಗೆ ಎರಡು ರಾಜ್ಯಗಳ ನಡುವೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ, ಸೆ.7ರಿಂದ ತುರ್ತು ಚಿಕಿತ್ಸಾ ವಾಹನ ಹಾಗೂ ಗೂಡ್ಸ್ ವಾಹನ ಹೊರತುಪಡಿಸಿ, ಬೇರೆ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾಧ್ಯಮಗಳೊಂದಿಗೆ ಮಾತನಾಡಿ, ಕೊರೊನಾ ಮೂರನೇ ಅಲೆ ಹಾಗೂ ನಿಫಾ ವೈರಸ್ ಹರಡುವ ಆತಂಕದಿಂದ ಸೆ.7ರಿಂದ ಮೈಸೂರು ಹಾಗೂ ಕೇರಳ ನಡುವೆ ಅಕ್ಟೋಬರ್ ತಿಂಗಳ ಅಂತ್ಯದವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಂಬ್ಯುಲೆನ್ಸ್ ಹಾಗೂ ಗೂಡ್ಸ್ ವಾಹನಗಳ ಸಂಚಾರಕಷ್ಟೇ ಅನುಮತಿ ಇದೆ ಎಂದು ತಿಳಿಸಿದರು.

ಮೈಸೂರಿನಿಂದ ಕೇರಳಕ್ಕೆ ಹೋಗಿರುವ ಹಾಗೂ ಕೇರಳದಿಂದ ಮೈಸೂರಿಗೆ ಬಂದಿರುವ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ಅಲ್ಲಿಯೇ ವಾಸ್ತವ್ಯ ಮುಂದುವರೆಸಬೇಕು. ನಿಫಾ ವೈರಸ್ ಬಗ್ಗೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಗಡಿಯಲ್ಲಿರುವ ಬಾವಲಿ ಚೆಕ್ಪೋಸ್ಟ್ ಬಳಿ ಇರುವ ಗ್ರಾಮ ಹಾಗೂ ಹಾಡಿ ಜನರಿಗೆ ಕರಪತ್ರ ನೀಡುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಕೊಡಗಿನಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ
ಗಡಿ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ.

"ಈ ಆದೇಶವು ಸೆ.30ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದು, ರಾತ್ರಿ ಕರ್ಫ್ಯೂ ಅವಧಿಯಲ್ಲಿ ತುರ್ತು, ಅತ್ಯವಶ್ಯಕ, ವೈದ್ಯಕೀಯ ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಈ ಕೆಳಕಂಡ ತುರ್ತು,ಅತ್ಯವಶ್ಯಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ," ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಗಡಿಯಲ್ಲಿ ಕಟ್ಟೆಚ್ಚರ
ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಆತಂಕವನ್ನು ಸೃಷ್ಠಿಸಿದೆ. ಕೇರಳ ಕೋಯಿಕ್ಕೋಡ್ನಲ್ಲಿ ನಿಫಾ ವೈರಸ್ನಿಂದ ಸೆ.3 ರಂದು 12 ವರ್ಷದ ಬಾಲಕ ಮೃತನಾಗಿದ್ದು, ಮೃತಪಟ್ಟ ಬಾಲಕನ ಸಂಪರ್ಕದಲ್ಲಿದ್ದ 250ಕ್ಕೂ ಹೆಚ್ಚು ಜನರನ್ನು ಐಸೋಲೇಷನ್ನಲ್ಲಿಟ್ಟು ಕೇರಳ ರಾಜ್ಯ ಆರೋಗ್ಯ ಇಲಾಖೆ ತೀವ್ರ ನಿಗಾದಲ್ಲಿರಿಸಿದೆ.

ಕೇರಳದಲ್ಲಿ ಕೊರೊನಾ ಜೊತೆಗೆ ನಿಫಾ ವೈರಸ್ ಕೂಡಾ ಹರಡುತ್ತಿರುವುದರಿಂದ ಕೇರಳದ ಗಡಿ ಭಾಗ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ, ಕೇರಳದ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಹೈಅಲರ್ಟ್ನ್ನು ಘೋಷಣೆ ಮಾಡಿದೆ. ಕೇರಳದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ನಿಫಾ ವೈರಸ್ ಬಗ್ಗೆ ಜನಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿಪತ್ರ ಬಿಡುಗಡೆ ಮಾಡಿದೆ. ನಿಫಾ ಸೋಂಕಿನ ಲಕ್ಷಣವಿರುವ ಜನರ ಮೇಲೆ ತೀವ್ರ ನಿಗಾ ವಹಿಸುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಕೇರಳದಿಂದ ಜ್ವರದ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಆಗಮಿಸುವ ಕೇರಳಿಗರನ್ನು ನಿಫಾ ಟೆಸ್ಟ್ಗೆ ಒಳಪಡಿಸುವಂತೆ ವೈದ್ಯರುಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.












Click it and Unblock the Notifications