ಮೈಸೂರು ಮಹಾರಾಜರ ಭವ್ಯ ಇತಿಹಾಸ (ಭಾಗ 2)
(ಮುಂದುವರಿದಿದೆ...) 1572ರಿಂದ 1576ರವರೆಗೆ ನಾಲ್ಕನೇ ಬೋಳಚಾಮರಾಜ ಒಡೆಯರ್ ಆಡಳಿತ ನಡೆಸಿದರು. ಇವರ ಆಡಳಿತಾವಧಿಯಲ್ಲಿ ಒಂದು ವಿಸ್ಮಯ ನಡೆಯಿತು. ಅದೇನೆಂದರೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ತೆರಳಿದಾಗ ಇವರ ತಲೆ ಮೇಲಾಗಿ ಸಿಡಿಲು ಬಡಿಯಿತು. ಆದರೆ ಇವರಿಗೆ ಅದರಿಂದ ಯಾವುದೇ ತೊಂದರೆಯಾಗದೆ ತಲೆಕೂದಲು ಮಾತ್ರ ಉದುರಿತು. ಮುಂದೆ ಬೋಳಚಾಮರಾಜ ಒಡೆಯರ್ ಎಂದೇ ಹೆಸರಾದರು. ಇವರು 'ಸುಗುಣ ಗಂಭೀರ' ಎಂಬ ಬಿರುದು ಪಡೆದಿದ್ದರು.
ಐದನೇ ಬೆಟ್ಟದ ಚಾಮರಾಜ ಒಡೆಯರ್ 1576ರಿಂದ 1578ರವರೆಗೆ ಕೇವಲ ಎರಡು ವರ್ಷಗಳ ಕಾಲ ಆಡಳಿತ ನಡೆಸಿದರಲ್ಲದೆ, ವೈರಾಗ್ಯ ತಾಳಿದ ಅವರು ಆಡಳಿತವನ್ನು ತನ್ನ ಸಹೋದರರಿಗೆ ವಹಿಸಿಕೊಟ್ಟರು. ಆ ನಂತರ ಆಡಳಿತ ವಹಿಸಿಕೊಂಡ ಒಂದನೇ ರಾಜ ಒಡೆಯರ್ 1578ರಿಂದ 1617ರವರೆಗೆ ಆಡಳಿತ ನಡೆಸಿದರು. ಇವರ ಕಾಲದಲ್ಲಿ ಅಂದರೆ 1610ರಲ್ಲಿ ರಾಜಧಾನಿಯನ್ನು ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ವರ್ಗಾಯಿಸಲಾಯಿತಲ್ಲದೆ, ದಸರಾ ಆಚರಣೆಯೂ ಜಾರಿಗೆ ಬಂದಿತು. [ಯದುವೀರ ಪಟ್ಟಾಭಿಷೇಕ ಕಾರ್ಯಕ್ರಮ ವಿವರ]
1617ರಿಂದ 1637ರವರೆಗೆ ಆರನೇ ಚಾಮರಾಜ ಒಡೆಯರ್ ಆಡಳಿತ ನಡೆಸಿದರು. ಇವರ ಕಾಲದಲ್ಲಿ ಮೈಸೂರು ರಾಜ್ಯ ಇನ್ನಷ್ಟು ವಿಸ್ತಾರಗೊಂಡಿತು. ಇವರು ಸಾಹಿತ್ಯದ ಅಭಿರುಚಿ ಹೊಂದಿದ್ದರು. 1637ರಲ್ಲಿ ಪಟ್ಟಕ್ಕೆ ಬಂದ ಇಮ್ಮಡಿರಾಜ ಒಡೆಯರ್ ವೀರರಾಗಿದ್ದರಲ್ಲದೆ ಒಂದೇ ವರ್ಷದಲ್ಲಿ ಮಲೆವರಗಂಡ, ಸಂಗೀತಲೋಲ, ವೀರ ಶೂರ, ಸಾಹಿತ್ಯ ರತ್ನಾಕರ, ಅಭಯ ಪ್ರತಾಪಾಧೀಶ್ವರ ಮುಂತಾದ ಬಿರುದು ಪಡೆದು 1638ರವರೆಗೆ ಆಡಳಿತ ನಡೆಸಿದರು.
1638ರಿಂದ 1659 ರಣಧೀರ ಕಂಠೀರವ ನರಸರಾಜ ಒಡೆಯರ್ ಆಡಳಿತ ನಡೆಸಿದರು. ಇವರು ಮಹಾವೀರರಾಗಿದ್ದು, 25 ಜಟ್ಟಿಗಳ ಸಂಗಡ ಹೋರಾಡಿ ಗೆದ್ದ ಖ್ಯಾತಿಯೂ ಇವರದಾಗಿತ್ತು. ಸುಮಾರು 20 ವರ್ಷಗಳ ಕಾಲ ಆಡಳಿತ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
1659ರಿಂದ 1672ರವರೆಗೆ ಆಡಳಿತ ನಡೆಸಿದ ದೊಡ್ಡ ದೇವರಾಜ ಒಡೆಯರ್ ಪರಾಕ್ರಮಿಯಾಗಿದ್ದು, ಇವರ ಕಾಲದಲ್ಲಿ ಭಕ್ತರ ಅನುಕೂಲಕ್ಕಾಗಿ ಚಾಮುಂಡಿಬೆಟ್ಟಕ್ಕೆ ಮೆಟ್ಟಿಲುಗಳನ್ನು ಸ್ಥಾಪಿಸಲಾಯಿತು. ಅಲ್ಲದೆ, ಅನ್ನಛತ್ರ, ಸಾಲುಮರ, ನೀರಿನಕೊಳ ಮತ್ತು ಅಗ್ರಹಾರಗಳನ್ನು ನಿರ್ಮಿಸಿದರು. ಇವರು ರಾಜಕುಲತಿಲಕ, ರಾಜಮಾರ್ತಾಂಡ, ರಾಜಾಧಿರಾಜ, ಪರಮೇಶ್ವರ ಮುಂತಾದ ಬಿರುದಿಗೆ ಪಾತ್ರರಾಗಿದ್ದರು.