ನನ್ನ ಸಂಬಂಧಿಕರ ನಿವೇಶನವನ್ನು ED ಅಧಿಕಾರಿಗಳು ಮಾರಿಕೊಡ್ತಾರಾ?- ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮೈಸೂರು, ಜನವರಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ನಾಶ ಮಾಡುವ ನಡೆಯುತ್ತಿದ್ದು ಇದರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಿರುವುದಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಅಲ್ಲದೇ ಜಾರಿ ನಿರ್ದೇಶನಾಲಯದ (ಇಡಿ) ಪತ್ರಿಕಾ ಪ್ರಕಟಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ನಾಶ ಮಾಡುವ, ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತನಿಖೆ ಪೂರ್ಣಗೊಳ್ಳುವ ಮುನ್ನ ಎಪಿಸೋಡ್ ರೀತಿ ಮಾಹಿತಿ ಹಂಚಿಕೊಳ್ಳಬಹುದೇ? ತನಿಖಾ ಮಾಹಿತಿ ಬಹಿರಂಗಪಡಿಸಲು ನ್ಯಾಯಾಲಯದ ನಿರ್ದೇಶನ ಇತ್ತೇ? ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದಕ್ಕೆ ಉತ್ತರಿಸಬೇಕು. ತನ್ನ ಪಾವಿತ್ರ್ಯತೆ ಕಳೆದುಕೊಂಡಿರುವ ಇಡಿ, ಬಿಜೆಪಿ, ಆರ್ಎಸ್ಎಸ್ ಬಾಲಂಗೋಚಿಯಾಗಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಹೆಸರಲ್ಲಿ ನಿವೇಶನ ಇತ್ತೇ? ಪ್ರಕಟಣೆಯಲ್ಲಿ ಉದ್ದೇಶ ಪೂರ್ವಕವಾಗಿ ಸಿದ್ದರಾಮಯ್ಯ ಹೆಸರು ಸೇರಿಸುವ ನಿಮ್ಮ ಉದ್ದೇಶ ಏನು? ಎಂದು ಪ್ರಶ್ನಿಸಿದ್ದಾರೆ.

142 ನಿವೇಶನಗಳ ಸಂಖ್ಯೆ ಬಿಡುಗಡೆ ಮಾಡಿರುವ ಇಡಿ ಅಧಿಕಾರಿಗಳು ಯಾರ ಹೆಸರಲ್ಲಿದೆ ಎಂಬ ಮಾಹಿತಿ ನೀಡಬೇಕು. ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ನಿವೇಶನದ ಉಲ್ಲೇಖವಿಲ್ಲ. ಬೆಂಗಳೂರಿನ ಮಂಜುನಾಥ್, ಮೈಸೂರಿನ ಜಯರಾಮ್, ಕ್ಯಾಥಡ್ರೆಲ್ ಪ್ಯಾರಲ್ ಸೊಸೈಟಿಯ 63, ಬಿಜೆಪಿ, ಜೆಡಿಎಸ್ ಮುಖಂಡರ 97 ನಿವೇಶನಗಳನ್ನು ಬೇನಾಮಿ ಹೆಸರಲ್ಲಿ ಪಡೆದುಕೊಂಡಿರುವ ಮಾಹಿತಿ ನಮ್ಮ ಬಳಿ ಇದೆ.
ಸಿದ್ದರಾಮಯ್ಯ ಅವರ 14 ನಿವೇಶನದ ಮೌಲ್ಯ ಒಟ್ಟು 56 ಕೋಟಿ ರೂಪಾಯಿ ಎಂದು ಇಡಿ ಅಂದಾಜು ಮಾಡಿದೆ. ಇಡಿ ಲೆಕ್ಕಾಚಾರದ ಪ್ರಕಾರ ಚದರಡಿ 17 ಸಾವಿರ ರೂಪಾಯಿಗಳಾಯಿತು. ವಿಜಯನಗರದಲ್ಲಿ ಚದರಡಿಗೆ 17 ಸಾವಿರ ರೂ. ದರ ಇದೆಯೇ? ಇದ್ದರೆ ನನ್ನ ಸಂಬಂಧಿಕರದೊಂದು ನಿವೇಶನವನ್ನು ಇಡಿ ಅಧಿಕಾರಿಗಳು ಮಾರಿಸಿ ಕೊಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
300 ಕೋಟಿ ಆಸ್ತಿ ವಶ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟು ಕಿರುಕುಳ ಕೊಡಲು ಮುಂದಾಗಿದೆ. ಮುಡಾದಿಂದ ಪಡೆದಿದ್ದ ನಿವೇಶನವನ್ನು ವಾಪಸ್ ನೀಡಿದ್ದರೂ ಸಪ್ರಕರಣವನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಲಾಗುತ್ತಿದೆ. ರಾಷ್ಟ್ರೀಯ ವಾಹಿನಿಗಳಲ್ಲಿ ದಿನಪೂರ್ತಿ ತಪ್ಪು ಮಾಹಿತಿ ಪ್ರಕಟಿಸಿ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.

ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ಕೊಡುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಪ್ರಚಾರದ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೆಸರೇಳದೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್, ಕಾಂಗ್ರೆಸ್ ಉಸಾಬರಿ ನಿಮಗ್ಯಾಗೆ? ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಕಂದಕ ತರಲು ಮುಂದಾಗಿದ್ದಾರೆ. ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಮನೆಗೂ ಹೋಗುತ್ತಾರೆ. ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಏನೆಲ್ಲಾ ಮಾಡಿದರು ಎಂಬುದು ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿದೆ. ಅವರೊಬ್ಬ ಅತ್ಯಂತ ಅಪಾಯಕಾರಿ ಮನುಷ್ಯ ಎಂದು ಟೀಕಿಸಿದ್ದಾರೆ












Click it and Unblock the Notifications