ಅಗತ್ಯ ವಸ್ತುಗಳ ಬೆಲೆ ಇಳಿಸಿ, ಇಲ್ಲವೇ ರಾಜೀನಾಮೆ ಕೊಡಿ
ಮೈಸೂರು, ಮಾರ್ಚ್ 01: ಎಲ್ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಸೋಮವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಮೈಸೂರು ನಗರದ ಟೌನ್ ಹಾಲ್ನ ಅಂಬೇಡ್ಕರ್ ಪ್ರತಿಮೆ ಬಳಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದಾಗಿ ಜನ ಸಾಮಾನ್ಯರು ಕಂಗಾಲಾಗಿದ್ದಾರೆ ಎಂದು ಆರೋಪಿಸಿದರು. ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.

'ಅಚ್ಚೇ ದಿನ್ ಮರ್ ಗಯಾ' ಎಂದು ಘೋಷಣೆ ಕೂಗಿದ ಪ್ರತಿಭಟನಾನಿರತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು. ಕಳೆದೊಂದು ವರ್ಷದಿಂದ ನಿರಂತರವಾಗಿ ಬೆಲೆಗಳು ಏರಿಕೆ ಆಗುತ್ತಲೇ ಇವೆ ಎಂದು ದೂರಿದರು.
ಇಂಧನ ದರದ ಜೊತೆಗೆ ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಕೂಡ ದುಬಾರಿಯಾಗಿವೆ. ಜನಸಾಮಾನ್ಯರು ಬದುಕು ನಡೆಸಲು ಕಷ್ಟವಾಗುತ್ತಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜನರ ಮೇಲೆ ತೆರಿಗೆ ಬರೆ ಎಳಿದಿವೆ ಎಂದು ಆರೋಪಿಸಿದರು.
ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕೇವಲ ಸುಳ್ಳು ಹೇಳಿ ಸರ್ಕಾರ ನಡೆಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ದ್ವೇಷದ ರಾಜಕಾರಣದಲ್ಲಿ ಮುಳುಗಿದ್ದಾರೆ. ನಿರ್ಮಲಾ ಸೀತಾರಾಮನ್ ಕೆಟ್ಟ ಆರ್ಥಿಕ ನೀತಿಯಿಂದ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.












Click it and Unblock the Notifications