ಹುತಾತ್ಮ ಯೋಧ ಗುರು ಪತ್ನಿಗೆ ಕೆಎಸ್ಓಯುನಿಂದ ಉಚಿತ ಶಿಕ್ಷಣ
ಮೈಸೂರು, ಮಾರ್ಚ್ 2 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಮಡಿದ ಯೋಧ ಗುರು ಅವರ ಪತ್ನಿ ಕಲಾವತಿಗೆ ಉಚಿತ ಶಿಕ್ಷಣ ನೀಡಲು ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಮುಂದಾಗಿದೆ.
ಈ ಕುರಿತಾಗಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ, ಹುತಾತ್ಮ ಯೋಧ ಗುರು ಎಚ್ ಅವರ ಮಡದಿ ಕಲಾವತಿ ಕೆಎಸ್ಒಯು ರಾಮನಗರ ಪ್ರಾದೇಶಿಕ ಕೇಂದ್ರದ ಮೂಲಕ ಪ್ರಥಮ ವರ್ಷದ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.
ವಿದ್ಯಾಭ್ಯಾಸ ಮುಂದುವರೆಸಲು ಅವರಿಗಿರುವ ಆಸಕ್ತಿಯನ್ನು ಮನಗಂಡು ಕೆಎಸ್ಒಯು ಅವರಿಂದ ಯಾವುದೇ ಶುಲ್ಕ ಪಡೆಯದೇ ಉಚಿತ ಶಿಕ್ಷಣ ನೀಡಲು ಉದ್ದೇಶಿಸಿದೆ. ಈ ಸಂಬಂಧ ಮುಂದಿನ ವ್ಯವಸ್ಥಾಪನಾ ಮಂಡಳಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ ಎಂದರು.

ಮುಕ್ತ ವಿವಿ ಘಟಿಕೋತ್ಸವಕ್ಕೆ ಸಿದ್ಧತೆ : ಯುಜಿಸಿ ಮಾನ್ಯತೆ ಸಮಸ್ಯೆ ಕಾರಣ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಮಾ. 5 ರಂದು ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ 16 ನೇ ಘಟಿಕೋತ್ಸವ ಆಯೋಜಿಸಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ,ದೇವೇಗೌಡ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡುವರು. ಸಮಾರಂಭದ ಮುಖ್ಯ ಅತಿಥಿಯಾಗಿ ನ್ಯಾಕ್ ಸಂಸ್ಥೆ ನಿರ್ದೇಶಕ ಪ್ರೊ.ಎಸ್.ಸಿ,ಶರ್ಮ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು ಎಂದರು.

ಯುಜಿಸಿ2018-19 ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮಾನ್ಯತೆ ಮಂಜೂರು ಮಾಡಿದೆ. ಆದ್ದರಿಂದ 2012-13 ಮತ್ತು ಹಿಂದಿನ ವರ್ಷಗಳಲ್ಲಿ ಪ್ರವೇಶ ಹೊಂದಿ ಅಂತರಗೃಹ ಕಾರ್ಯಕ್ರಮಗಳಲ್ಲಿ ಪದವಿ ಪರೀಕ್ಷೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ.
ಈ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಒಟ್ಟು 17,512 ವಿದ್ಯಾರ್ಥಿಗಳು ಅರ್ಹರಾಗಿದ್ದು, ಅವರಲ್ಲಿ 5,364 ಪುರುಷರು ಹಾಗೂ 12,148 ಮಂದಿ ಮಹಿಳಾ ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದರು.












Click it and Unblock the Notifications