ನಾನು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ:ಸಿಎಂ
ಮೈಸೂರು, ಅಕ್ಟೋಬರ್.18: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಿಂದ ಕಾಂಗ್ರೆಸ್ ಗೆ ಹಿನ್ನಡೆಯಾಯಿತು ಎಂದು ಸಚಿವ ಡಿಕೆಶಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ.
ಹಿಂದಿನ ಸರ್ಕಾರದಲ್ಲಿ ಎರಡು ವರ್ಗಗಳು ಯಾತಕ್ಕಾಗಿ ಕಿತ್ತಾಡಿದವು ಎಂಬುದೂ ಗೊತ್ತಿಲ್ಲ. ಧರ್ಮಗಳ ವಿಚಾರದಲ್ಲಿ ಧರ್ಮಗುರುಗಳು ಕುಳಿತು ಮಾತನಾಡಬೇಕು. ನಮ್ಮ ಸರ್ಕಾರ ಬಂದಾಗಿನಿಂದ ಪ್ರತ್ಯೇಕ ಧರ್ಮದ ವಿಚಾರವಾಗಿ ಯಾವುದೇ ಅರ್ಜಿಗಳು ಪರಿಶೀಲನೆಗೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಶಬರಿಮಲೆಗೆ ಹೆಣ್ಣು ಮಕ್ಕಳ ಪ್ರವೇಶ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕುಮಾರಸ್ವಾಮಿ, ಹಿಂದೆ ಹೇಗೆ ನಡೆದುಕೊಂಡು ಬಂದಿದೆಯೋ ಹಾಗೆಯೇ ಮುಂದುವರೆಸಿಕೊಂಡು ಹೋಗುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡುವ ಶಕ್ತಿಗಳ ವಿರುದ್ಧವೇ ನಾವು ಸಂಘರ್ಷ ಮಾಡುವ ವಾತಾವರಣ ನಿರ್ಮಾಣ ಮಾಡಿಕೊಂಡಿದ್ದೇವೆ ಎಂದರು.
ಪ್ರಸ್ತುತ ಯುಗದಲ್ಲಿ ವೈಜ್ಞಾನಿಕವಾಗಿ ಬಹಳ ಮುಂದೆ ಹೋಗುತ್ತಿದ್ದೇವೆ. ಈಗಾಗಲೇ ಚಂದ್ರಲೋಕದಲ್ಲಿ ವಾಸ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇಷ್ಟೆಲ್ಲಾ ಇದ್ದರೂ ಯಾವುದಕ್ಕೆ ಪ್ರಕೃತಿ ವಿಕೋಪಗಳು ಆಗುತ್ತಿವೆ. ನಮ್ಮ ಸಂಸ್ಕೃತಿಯನ್ನು ಪೂರ್ವಿಕರು ಮಾಡುವಾಗ ಹಿಂದೊಂದು ಉದ್ದೇಶವಿರುತ್ತಿತ್ತು. ಆ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.












Click it and Unblock the Notifications