'ಸುಳ್ಳಿನ ಯಾತ್ರೆʼ ಹೊರಟವರು; ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಎಚ್‌ಡಿಕೆ ಟ್ವೀಟ್

ಬೆಂಗಳೂರು, ಜನವರಿ 03; "ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು ಕರ್ನಾಟಕ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯನ್ನು ಟೀಕಿಸಿದ್ದಾರೆ. "ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು 'ಸತ್ಯ' ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ 'ಸುಳ್ಳು ಹೇಳಿ ಅಪಚಾರ' ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ" ಎಂದು ಎಚ್ಚರಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಆರಂಭಿಸಲಿರುವ ಕಾಂಗ್ರೆಸ್ ನಾಯಕರು ಭಾನುವಾರ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಚಾಮರಾಜೇಶ್ವರನ ಆಶೀರ್ವಾದ ಪಡೆದಿದ್ದರು. ಇದನ್ನು ಟ್ವೀಟ್‌ನಲ್ಲಿ ಎಚ್‌ಡಿಕೆ ಉಲ್ಲೇಖಿಸಿದ್ದಾರೆ.

Kumaraswamy Tweet Against Congress Padayatra From Mekedatu

ಎಚ್. ಡಿ. ಕುಮಾರಸ್ವಾಮಿ ಮತ್ತೊಂದು ಟ್ವೀಟ್‌ನಲ್ಲಿ, "ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ, ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ" ಎಂದು ಹೇಳಿದ್ದಾರೆ.

"ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ 'ಸುಳ್ಳಿನ ಸರಮಾಲೆ'ಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ 'ರಾಜಕೀಯ ಹುಂಬತನ'ವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ 'ಸುಳ್ಳಿನಯಾತ್ರೆ'ಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ; ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾದತ್ರೆ ಈಗ ಬಹು ಚರ್ಚಿತ ವಿಷಯವಾಗಿದೆ. ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೇಕೆದಾಟುವಿನಿಂದ ಆರಂಭಗೊಳ್ಳುವ ಪಾದಯಾತ್ರೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪೂರ್ಣಗೊಳ್ಳಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಸನ, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಂಚಾರ ನಡೆಸಿ ಪಾದಯಾತ್ರೆಗೆ ಆಗಮಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರಿಗೆ ಮನವಿ ಮಾಡುತ್ತಿದ್ದಾರೆ.

2023ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಕಾಂಗ್ರೆಸ್ ಈ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಟೀಕಿಸುತ್ತಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆ ಬಗ್ಗೆ ಮಾತನಾಡಿದ್ದು, "ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು, ಆಸಕ್ತರು ಇದರಲ್ಲಿ ಭಾಗವಹಿಸುವಂತೆ ವಿನಮ್ರವಾಗಿ ಮನವಿ ಮಾಡುತ್ತೇನೆ. ಮೇಕೆದಾಟು ನಮ್ಮ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ" ಎಂದು ಹೇಳಿದ್ದಾರೆ.

"ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ, ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ" ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಯೋಜನೆ ಜಾರಿಯಾದರೆ ರಾಜ್ಯಗಳಿಗೆ ಬರಬೇಕಾದ ಕಾವೇರಿ ನೀರಿನ ಹಂಚಿಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿವೆ. ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಮತ್ತು ಸುಪ್ರೀಂಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಕೆ ಮಾಡಿವೆ.

ಮೇಕೆದಾಟು ಯೋಜನೆಗೆ ಕಾನೂನು ತೊಡಕು ಇಲ್ಲ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ನಮ್ಮದು ಡಬಲ್ ಎಂಜಿನ್ ಸರ್ಕಾರ ಎನ್ನುವ ಬಿಜೆಪಿ ಯೋಜನೆಯನ್ನು ಜಾರಿಗೊಳಿಸಲಿ ಎಂಬುದು ಕಾಂಗ್ರೆಸ್ ಒತ್ತಾಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+