2018 ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಸಿದ್ಧತೆ ಶುರು!
ಮೈಸೂರು, ಆಗಸ್ಟ್ 10 : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ-2018 ಕ್ಕೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪಿ. ಶ್ರೀನಿವಾಸಾಚಾರಿ ಅವರು ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆ, ಮೃತರ ಹೆಸರನ್ನು ತೆಗೆದುಹಾಕುವುದು, ಅಧಿಕಾರಿಗಳ ನೇಮಕ ಹೀಗೆ ಹಲವು ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಚುನಾವಣಾ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂವಾದ ಕೂಡ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ನಗರ ಪಾಲಿಕೆ ಆಯುಕ್ತರುಮತ್ತು ಜಿಲ್ಲೆಯ ಎಲ್ಲ ತಹಶೀಲ್ದಾರುಗಳು ಮತ್ತು ಪ್ರತಿ ವಿಧಾನಸಭಾವಾರು ಚುನಾವಣೆಯ ಪೂರ್ವಸಿದ್ಧತೆಯ ಬಗ್ಗೆ ವೈಯಕ್ತಿಕ ಗಮನಹರಿಸಿ ಪೂರ್ಣ ಮಾಹಿತಿಯನ್ನು ಆ.21ರೊಳಗೆ ಆಯೋಗಕ್ಕೆ ನೀಡುವಂತೆ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ 2 ವರ್ಷಗಳಲ್ಲಿ ಅವಧಿಯಲ್ಲಿ ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕುವುದು, ಬಾಕಿ ಉಳಿದಿರುವ ಪ್ರಕರಣಗಳನ್ನು ಕೂಡಲೇ ಸರಿಪಡಿಸಿ ಕ್ರಮ ಕೈಗೊಳ್ಳುವುದು, ಜನಸಂಖ್ಯೆಯಲ್ಲಿ ಕಂಡುಬಂದ ವ್ಯತ್ಯಾಸಗಳನ್ನು ಸರಿಪಡಿಸುವುದು, ಚುನಾವಣಾ ಪ್ರಕ್ರಿಯೆಗೆ ಬಿಎಲ್ ಒ ಮತ್ತು ಸೂಪರ್ ವೈಸರ್ ಗಳ ನೇಮಕ ಮತ್ತು ಪಟ್ಟಿಯನ್ನು ನವೀಕರಿಸುವುದಕ್ಕೆ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಮತದಾರರ ನೋಂದಣಿ ಕಾರ್ಯಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿ ಮಾಡುವುದು, ಮತದಾನ ಕೇಂದ್ರಗಳ ಬಗ್ಗೆ ಹೊಸ ಮತಗಟ್ಟೆಗಳನ್ನು ಸ್ಥಾಪಿಸಿಕೊಡುವಂತೆ ಕೋರಿ ಸಾರ್ವಜನಿಕರಿಂದ ಬಂದಿರುವ ಮನವಿಗಳನ್ನು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳ ಬೇಕು ಎಂದು ಸೂಚನೆ ನೀಡಿದ್ದಾರೆ.
ಚುನಾವಣಾ ಶಾಖೆಯ ಸಿಬ್ಬಂದಿಗೆ ಇತರೆ ಕೆಲಸಗಳನ್ನು ನೀಡುವ ಮೂಲಕ ಮೂಲ ಕರ್ತವ್ಯಕ್ಕೆ ಅಡಚಣೆಯಾಗದಂತೆ ಸೂಕ್ತ ಕ್ರಮವಹಿಸುವಂತೆ ಚುನಾವಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.












Click it and Unblock the Notifications