ನಾಲ್ಕೂ ವಿಭಾಗದಲ್ಲಿ ರೈತರಿಗೆ ಸಾಲ ಮೇಳ; ಸಚಿವ ಸೋಮಶೇಖರ್
ಮೈಸೂರು, ಆಗಸ್ಟ್ 29: ಕಲಬುರಗಿ, ಬೆಳಗಾವಿ, ಬೆಂಗಳೂರು ಹಾಗೂ ಮೈಸೂರಿನ ನಾಲ್ಕು ವಿಭಾಗಗಳಲ್ಲಿ ಸಾಲ ಮೇಳ ಮಾಡಿ ರೈತರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸಹಕಾರ ಇಲಾಖೆ ಮೂಲಕ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವರ್ಷ 13,500 ಕೋಟಿ ರೂಪಾಯಿ, ಈ ಸಾಲಿನಲ್ಲಿ 14,500 ಕೋಟಿ ರೂ ಹಾಗೂ ಮುಂದಿನ ವರ್ಷ 20 ಸಾವಿರ ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳ ಜೊತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಮೈಸೂರು ಡಿಸಿ ದಿಢೀರ್ ವರ್ಗಾವಣೆ; ಸ್ಪಷ್ಟನೆ ಕೊಟ್ಟ ಸೋಮಶೇಖರ್
Recommended Video
ಹೊಸಬರನ್ನು ಗುರುತಿಸಿ ಸಾಲ ನೀಡಬೇಕೆಂಬ ಗುರಿ ನೀಡಲಾಗಿದೆ. ಅಲ್ಲದೆ, 21 ಡಿಸಿಸಿ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕ್ಸ್ ವತಿಯಿಂದ 14500 ಕೋಟಿ ರೂಪಾಯಿ ಸಾಲ ನೀಡುವ ಗುರಿ ಹಾಕಲಾಗಿದೆ. ಈ ಬಗ್ಗೆ ಆಗಸ್ಟ್ 31ರ ಗುರಿ ನೀಡಲಾಗಿದೆ. 5529 ಕೋಟಿ ರೂ. ಸಾಲವನ್ನು 119 ಸಕ್ಕರೆ ಕಾರ್ಖಾನೆಗಳು ಪಡೆದಿವೆ. ಆದರೆ, ವಸೂಲಾತಿ ಆಗಿಲ್ಲ. ಅದೇ ರೈತರಿಗೆ ಸಾಲದ ಹಣ ಕೊಟ್ಟರೆ ಅವರಿಂದ ಶೇಕಡಾ 100ರಷ್ಟು ಹಣ ಮರುಪಾವತಿಯಾಗುತ್ತದೆ. ಹೀಗಾಗಿ ಹೈನುಗಾರಿಕೆ, ಮೀನುಗಾರಿಕೆ ಸೇರಿದಂತೆ ಇತರ ಕ್ಷೇತ್ರಗಳಿಗಾಗಿ ಸಾಲ ಕೊಟ್ಟರೆ ಸಾಲ ಮರುಪಾವತಿಯಾಗುವುದಲ್ಲದೆ ಬ್ಯಾಂಕುಗಳು ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
ರಾಜ್ಯದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೂ ತಲಾ 3000 ಸಿಗಬೇಕು ಎಂಬ ನಿಟ್ಟಿನಲ್ಲಿ ನಾನು ವಿಚಾರಣೆ ನಡೆಸುತ್ತಿದ್ದೇನೆ. ಈಗಾಗಲೇ 42 ಸಾವಿರ ಆಶಾ ಕಾರ್ಯಕರ್ತೆಯರಲ್ಲಿ ಬಹುತೇಕರಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಗಿದೆ. ಕೆಲವೇ ಕೆಲವು ಆಶಾ ಕಾರ್ಯಕರ್ತೆಯರಿಗೆ ಲಭಿಸಿಲ್ಲ ಎಂಬ ಮಾಹಿತಿ ಕೇಳಿ ಬರುತ್ತಿದೆ. ಹೀಗಾಗಿ ಯಾರಿಗೆ ತಲುಪಿಲ್ಲವೋ ಅವರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿದ್ದು, ಅದಕ್ಕೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿದ್ದೇವೆ. ಇನ್ನು ಸ್ತ್ರೀ ಶಕ್ತಿ ಗುಂಪುಗಳಂತೆ ಆಶಾ ಕಾರ್ಯಕರ್ತೆಯರಿಗೂ ಸಾಲ ಯೋಜನೆ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಅವರಿಗೆ ಸಹಕಾರಿ ಸಂಘದ ಮೂಲಕ ಸಾಲ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಶೀಘ್ರದಲ್ಲಿ ಈ ಬಗ್ಗೆ ತಿಳಿಸಲಾಗುವುದು ಎಂದರು.