ಲಾಕ್ ಡೌನ್ ಉಲ್ಲಂಘನೆ: ವಾಹನ ಸೀಜ್ ಮಾಡಿದ ಪೊಲೀಸರು
ಮೈಸೂರು, ಮಾರ್ಚ್ 30: ನಂಜನಗೂಡು ಪಟ್ಟಣದಲ್ಲಿ ಐದು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಅನಗತ್ಯ ಜನರ ಓಡಾಟ ಮತ್ತು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಅನಗತ್ಯವಾಗಿ ರಸ್ತೆಗಿಳಿಯುವ ವಾಹನ ಸವಾರರಿಗೆ ಪೊಲೀಸರು ಭರ್ಜರಿಯಾಗಿಯೇ ಚುರುಕು ಮುಟ್ಟಿಸಿದ್ದಾರೆ. ವಾಹನ ಸವಾರರಿಗೆ ಪೊಲೀಸರು ಲಾಠಿಯಿಂದ ಹೊಡೆಯುತ್ತಿಲ್ಲ. ಬದಲಾಗಿ ರಸ್ತೆಗಿಳಿದ ವಾಹನಗಳನ್ನು ಜಪ್ತಿ ಮಾಡಲಾಗುತಿದ್ದು, ಈಗಾಗಲೇ ಒಟ್ಟು 220 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರದಿಂದ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಸಿ.ಬಿ ರಿಷ್ಯಂತ್ ಎಚ್ಚರಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮ ಕುರಿತಂತೆ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 1372 ನೌಕರರು ಕೆಲಸ ಮಾಡುತ್ತಿದ್ದು, ಅವರಲ್ಲಿ ಈಗಾಗಲೇ 900 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ. ಉಳಿದವರನ್ನೂ ಇನ್ನೆರಡು ದಿನದಲ್ಲಿ ಹೋಮ್ ಕ್ವಾರಂಟೇನ್ ನಲ್ಲಿ ಇಡಲಾಗುತ್ತದೆ ಎಂದರು.
ಹಲವು ಜನ ಕರೆ ಮಾಡಿ ನಮ್ಮ ಮನೆ ಪಕ್ಕದ ನಿವಾಸಿ ಜ್ಯುಬಿಲಿಯಂಟ್ ಕಾರ್ಖಾನೆ ಸಿಬ್ಬಂದಿಯಾಗಿದ್ದು, ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲವೇ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಕೆಲವರು ಹೋಮ್ ಕ್ವಾರಂಟೈನ್ ನಲ್ಲಿರುವ ಕಾರ್ಖಾನೆ ಸಿಬ್ಬಂದಿಗಳನ್ನು ವಸತಿ ಪ್ರದೇಶದಿಂದ ಹೊರಗೆ ಸ್ಥಳಾಂತರ ಮಾಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮೈಸೂರು ನಗರದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಹೋಮ್ ಕ್ವಾರಂಟೈನ್ ನಲ್ಲಿರುವ ಕಾರ್ಖಾನೆ ಸಿಬ್ಬಂದಿಗಳನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದೆ. ಬೀಟ್ ಪೊಲೀಸರು ದಿನಕ್ಕೊಮ್ಮೆ ಕ್ವಾರಂಟೈನ್ ನಲ್ಲಿರುವವರ ಮನೆಗೆ ತೆರಳಿ ಪರಿಶೀಲಿಸಲಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲಿಸುತ್ತಾರೆ.
ಅಲ್ಲದೆ ಜಿಲ್ಲಾಧಿಕಾರಿ ಕಚೇರಿಯಿಂದಲೂ ಮೊಬೈಲ್ ಗೆ ಕರೆ ಮಾಡಿ ಮಾನಿಟರ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಅಗತ್ಯ ವಸ್ತುಗಳ ಸಾಗಾಣಿಕಾ ವಾಹನ, ತುರ್ತು ವಾಹನ ಹೊರತುಪಡಿಸಿ ಬೇರೆ ಯಾವುದೇ ವಾಹನ ಬಂದರೂ ಸೀಜ್ ಮಾಡುತ್ತೇವೆ ಎಂದು ಎಚ್ಚರಿಸಿದರು.
ಮೈಸೂರಿನ ಬಂಡೀಪಾಳ್ಯದ ಎಪಿಎಂಸಿಯಲ್ಲಿ ಚಿಲ್ಲರೆ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಚಿಲ್ಲರೆ ವ್ಯಾಪಾರವನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ಬೈಕ್ ನಲ್ಲಿ ತರಕಾರಿ, ದಿನಸಿ ಖರೀದಿಗಾಗಿ ಎಪಿಎಂಸಿಗೆ ಬಂದರೆ ಕೇಸ್ ದಾಖಲಿಸುವುದಲ್ಲದೇ ವಾಹನ ವಶಕ್ಕೆ ಪಡೆಯುತ್ತೇವೆ ಎಂದು ಮೈಸೂರು ಎಸ್ಪಿ ಸಿ.ಬಿ ರಿಷ್ಯಂತ್ ತಿಳಿಸಿದರು.