Lok Sabha Election 2024: ಮೈಸೂರು-ಕೊಡಗು ಲೋಕಸಭಾ ಅಖಾಡದಲ್ಲಿ ಶತ್ರುಗಳ ಮುಖಾಮುಖಿ?
ಮೈಸೂರು, ಮಾರ್ಚ್ 06: ಕಳೆದ ಕೆಲವು ವರ್ಷಗಳಿಂದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನೇ ಟಾರ್ಗೆಟ್ ಮಾಡಿ ಆರೋಪಗಳನ್ನು ಮಾಡುತ್ತಾ ಬಂದಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದು, ಇದು ಕ್ಷೇತ್ರದ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇದುವರೆಗೆ ಇವರಿಬ್ಬರ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳಷ್ಟೇ ನಡೆಯುತ್ತಿದ್ದವು ಆದರೀಗ ಇಬ್ಬರೂ ಕ್ಷೇತ್ರದಲ್ಲಿ ಮತದಾರರ ಮುಂದೆ ಹೋಗುತ್ತಿದ್ದಾರೆ. ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದರೆ, ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಬೇರೆ ಯಾವ ಕ್ಷೇತ್ರದಲ್ಲಿ ಎಷ್ಟರ ಮಟ್ಟಿಗೆ ಲಾಭವಾಗಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಅದರ ಪರಿಣಾಮ ಕಾಂಗ್ರೆಸ್ ಮೇಲೆ ಆಗುತ್ತಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹಗೆ ಮೊದಲಿಗಿಂತಲೂ ಹೆಚ್ಚಿನ ಬಲ ಬರಲಿದೆ ಎಂಬುದು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.

ಹಾಗೆ ನೋಡಿದರೆ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳನ್ನು ತನ್ನ ಬಗಲಿಗೆ ಹಾಕಿಕೊಂಡಿತ್ತು. ಅದರಲ್ಲೂ ಬಿಜೆಪಿಯ ಭದ್ರಕೋಟೆ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಇದು ಕಾಂಗ್ರೆಸ್ ನಾಯಕರಿಗೆ ಹುಮ್ಮಸ್ಸು ಮೂಡಿಸಿತ್ತು. ಅಷ್ಟೇ ಅಲ್ಲದೆ ಕೊಡಗಿನಲ್ಲಿ ಬಿಜೆಪಿ ಭದ್ರಕೋಟೆಯನ್ನು ಛಿದ್ರಮಾಡಿದ್ದು ದೊಡ್ಡ ಸಾಧನೆಯೇ ಆಗಿತ್ತು.
ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಎಂ.ಲಕ್ಷ್ಮಣ್
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿದ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದ ಮೇಲೆ ಹಲವು ಕಾಂಗ್ರೆಸ್ ನಾಯಕರು ಕಣ್ಣಿಡಲಾರಂಭಿಸಿದರು. ತಾವು ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳು ಎಂದು ಬಹಿರಂಗವಾಗಿಯೇ ಹೇಳಿಕೊಂಡು, ಬೋರ್ಡ್ ಹಾಕಿಕೊಂಡು ಓಡಾಡಲಾರಂಭಿಸಿದರು. ಸುಮಾರು ಹನ್ನೆರಡಕ್ಕೂ ಹೆಚ್ಚಿನ ನಾಯಕರು ಆಕಾಂಕ್ಷಿಗಳಾಗಿ ಪೈಪೋಟಿ ಬಿದ್ದಿದ್ದರು. ಆದರೆ ಕಳೆದ ಐದು ವರ್ಷಗಳಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ನಾಯಕರು ಯಾರಾದರೂ ಮಾಧ್ಯಮದವರ ಮುಂದೆ ಅತಿ ಹೆಚ್ಚು ಕಾಣಿಸಿಕೊಂಡಿದ್ದರೆ ಅದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಮಾತ್ರ.

ಎಂ.ಲಕ್ಷ್ಮಣ್ ಕಳೆದ ಐದು ವರ್ಷಗಳ ಹಿಂದೆಯೇ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಹೀಗಾಗಿ ಏನೇ ಘಟನೆಗಳು ನಡೆಯಲಿ ಅದನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿ ಕರೆದು ಮಾತನಾಡುವ ಮೂಲಕ ಪ್ರತಿಬಾರಿಯೂ ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡುತ್ತಲೇ ಬಂದಿದ್ದರು. ಅದರಲ್ಲೂ ಕಳೆದೊಂದು ವರ್ಷದಲ್ಲಿ ಅದೆಷ್ಟು ಬಾರಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಧ್ಯಮಗೋಷ್ಠಿ ಕರೆದು ಆರೋಪಗಳನ್ನು ಮಾಡಿದ್ದಾರೆ ಎಂಬುದೇ ಲೆಕ್ಕಕ್ಕೆ ಸಿಗುವುದಿಲ್ಲ. ಇದೆಲ್ಲವನ್ನು ಗಮನಿಸಿದರೆ ಅವರು 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಎಂತಹವರಿಗೂ ಗೊತ್ತಾಗುತ್ತಿತ್ತು.

ಪುತ್ರನ ಸ್ಪರ್ಧೆಗೆ ಉತ್ಸಾಹ ತೋರದ ಸಿಎಂ
ಈ ನಡುವೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಆಂತರಿಕ ಸರ್ವೆಗಳು ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೆ ಗೆಲುವು ಕಷ್ಟ ಎಂಬ ಮಾಹಿತಿಯನ್ನು ಹೊರ ಹಾಕಿದ್ದವು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಮಗನ ಸ್ಪರ್ಧೆಗೆ ಉತ್ಸಾಹ ತೋರಲಿಲ್ಲ ಎನ್ನಲಾಗುತ್ತಿದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ತವರು ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ. ಜತೆಗೆ ಗೆಲ್ಲಿಸಿಕೊಂಡು ಬರುವುದು ಅವರಿಗೆ ಅನಿವಾರ್ಯವಾಗಿದೆ.
ಇದೆಲ್ಲದರ ನಡುವೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಹಳಷ್ಟು ನಾಯಕರು ಹಿಂದೇಟು ಹಾಕಿದ್ದಾರೆ. ಅದಕ್ಕೆ ಕಾರಣವೂ ಇಲ್ಲದಿಲ್ಲ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾದ ಬಳಿಕ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಂದಷ್ಟು ಬದಲಾವಣೆಗಳಾಗಿರುವುದು ಗೋಚರಿಸಿದೆ. ಇದು ಒಂದು ಹಂತದಲ್ಲಿ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ. ಹಾಲಿ ಸಂಸದ ಪ್ರತಾಪ್ ಸಿಂಹ ಈಗಾಗಲೇ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಬೆಂಬಲ ಕೇಳಿದ್ದಾರೆ. ಇದು ಚುನಾವಣೆ ವೇಳೆ ಲಾಭ ತರುವ ವಿಶ್ವಾಸವನ್ನು ಮೂಡಿಸಿದೆ.
ಪರಮ ವೈರಿಗಳ ನಡುವೆ ಸಮರನಾ?
ಈಗ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಎಂ.ಲಕ್ಷ್ಮಣ್ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ ಎನ್ನಲಾಗಿದ್ದು, ಅದು ನಿಜವೇ ಆದರೆ ಮೊದಲಿನಿಂದಲೂ ಪ್ರತಾಪ್ ಸಿಂಹ ಅವರನ್ನು ವಿರೋಧಿಸುತ್ತಾ ಬಂದಿರುವ ಅವರಿಗೆ ನೇರವಾಗಿ ಸಮರ ಸಾರಲು ಅವಕಾಶ ಸಿಕ್ಕಂತಾಗುತ್ತದೆ. ಹಲವು ಬಾರಿ ಚರ್ಚೆಗೆ ಆಹ್ವಾನಿಸಿದ್ದಲ್ಲದೆ, ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈಗ ಇಬ್ಬರೂ ಒಂದೇ ಕ್ಷೇತ್ರದಲ್ಲಿ ಮತದಾರರ ಮುಂದೆ ಹೋಗುತ್ತಿರುವುದು ಕುತೂಹಲ ಕೆರಳಿಸಿದೆ.
ಸಂಸದ ಪ್ರತಾಪ್ ಸಿಂಹ ಕಳೆದ ಎರಡು ಅವಧಿಯಲ್ಲಿ ಗೆದ್ದು ಮೂರನೇ ಬಾರಿ ಗೆಲುವಿಗಾಗಿ ಕಂಕಣತೊಟ್ಟು ನಿಂತಿದ್ದಾರೆ. ಇವರಿಗೆ ಚುನಾವಣೆಯನ್ನೇ ಎದುರಿಸದ ಎಂ.ಲಕ್ಷ್ಮಣ್ ಅವರು ಪ್ರತಿಸ್ಪರ್ಧಿಯಾಗಲಿದ್ದು ಅವರ ಬೆನ್ನಿಗೆ ಇಡೀ ಸರ್ಕಾರವೇ ನಿಲ್ಲುವ ಸಾಧ್ಯಣತೆಯಿದೆ. ಕಾರಣ ಸಿಎಂ ತವರು ಕ್ಷೇತ್ರವಾಗಿರುವುದರಿಂದ ಪ್ರತಿಷ್ಠೆಯ ಕ್ಷೇತ್ರವಾಗಿ ಬಿಂಬಿತವಾಗಿದೆ. ಆದ್ದರಿಂದ ಎಲ್ಲರ ಚಿತ್ತ ಈಗ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದತ್ತ ನೆಟ್ಟಿರುವುದಂತು ನಿಜ.












Click it and Unblock the Notifications