MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಸಿಎಂ ವಿರುದ್ಧ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಸ್ಪಿ ಉದೇಶ್, ಇಬ್ಬರು ಡಿವೈಎಸ್ಪಿ ಮತ್ತು ಇಬ್ಬರು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ತಂಡ ರಚನೆ ಮಾಡಿ, ತನಿಖೆಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಮೂರು ತಿಂಗಳ ಒಳಗಾಗಿ ತನಿಖಾ ವರದಿ ಕೊಡುವಂತೆ ನ್ಯಾಯಾಲಯ ಕೇಳಿರುವುದರಿಂದ ಚುರುಕಾಗಿ ತನಿಖೆ ನಡೆಯಲಿದೆ.

ಮೈಸೂರು ಡಿವೈಎಸ್ಪಿ ಎಸ್.ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇಬ್ಬರು ಇನ್ಸ್ಪೆಕ್ಟರ್ ಅವರನ್ನು ಒಳಗೊಂಡ ತನಿಖಾ ತಂಡ ರಚನೆ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆಗೆ ಶನಿವಾರ ತುರ್ತು ಸಭೆ ನಡೆಸಿದ ಎಸ್ಪಿ ಉದೇಶ್, ಪ್ರಕರಣ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ದೂರು ಕೊಟ್ಟ ಸ್ನೇಹಮಯಿ ಕೃಷ್ಣ
ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯಲ್ಲಿ ಇರುವಾಗಲೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಆರ್ಟಿಐ ಕಾರ್ಯಕರ್ತ ಸ್ನೇಹಿಮಹಿ ಕೃಷ್ಣ ಇದೀಗ ಜಾರಿ ನಿರ್ದೇಶನಾಲಯಕ್ಕೆ ಕೂಡ ದೂರು ಕೊಟ್ಟಿದ್ದಾರೆ.
ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿರುವ ಅನುಮಾನವಿದ್ದು, ಸಿಎಂ ಸಿದ್ದರಾಮಯ್ಯ ನಿವೇಶನ ವಿಚಾರ ಸೇರಿದಂತೆ ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು 16 ಪುಟಗಳ ಸುದೀರ್ಘ ದೂರನ್ನು ನೀಡಿದ್ದಾರೆ. ಈ ಮೇಲ್ ಮೂಲಕ ತಮ್ಮ ದೂರನ್ನು ಇಡಿ ಜಾರಿ ನಿರ್ದೇಶನಾಲಯಕ್ಕೆ ತಲುಪಿಸಿದ್ದು, ಜಾರಿ ನಿರ್ದೇಶನಾಲಯ ಯಾವ ರೀತಿ ಸ್ಪಂದಿಸುತ್ತದೆ ಎನ್ನುವುದನ್ನು ನೋಡಬೇಕಿದೆ.
ದೂರು ನೀಡಿದ ಬಳಿಕ ಮಾತನಾಡಿದ ಸ್ನೇಹಮಯಿ ಕೃಷ್ಣ, "ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾದ ಬಳಿಕ ಮುಡಾದಲ್ಲಿ ಇಂತಹ ಅಕ್ರಮಗಳು ಮತ್ತಷ್ಟು ನಡೆದಿರಬಹುದು ಎಂಬ ಅನುಮಾನವಿದ್ದು, ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೂ ಸಹ ದೂರು ನೀಡಲಾಗಿದೆ" ಎಂದು ಹೇಳಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಹಲವು ಶಾಸಕರು, ಮಾಜಿ ಶಾಸಕರು, ಸಚಿವರು, ಅಧಿಕಾರಿಗಳಿಗೆ ಟೆನ್ಷನ್ ಶುರುವಾಗಿದೆ ಎಂದು ಹೇಳಲಾಗಿದೆ. ಮುಡಾದಿಂದ ಪ್ರಭಾವಿಗಳು ಸೈಟು ಪಡೆದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎನ್ನುವ ಅನುಮಾನಗಳಿವೆ. ಇದೇ ಈಗ ಹಲವರ ಆತಂಕಕ್ಕೆ ಕಾರಣವಾಗಿದೆ.












Click it and Unblock the Notifications