ಜಿಲ್ಲಾಧಿಕಾರಿಗೆ ಧಮ್ಕಿ, ಸಿದ್ದರಾಮಯ್ಯ ಮೌನವೇಕೆ?
ಮೈಸೂರು, ಜುಲೈ 07 : ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಿದ್ದರಾಮಯ್ಯ ಆಪ್ತ ಮರೀಗೌಡ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಆದರೆ, ಪೊಲೀಸರು ಕ್ರಮ ತೆಗೆದುಕೊಳ್ಳಲು ವಿಳಂಬ ಮಾಡುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
ಕೆ.ಮರೀಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು, 'ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ' ಒತ್ತಾಯಿಸಿದ್ದಾರೆ. [ಮರೀಗೌಡರಿಗೆ ಬಂಧನ ಭೀತಿ]

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮತ್ತು ಸಿದ್ದರಾಮಯ್ಯ ಅವರ ಆಪ್ತ ಕೆ.ಮರೀಗೌಡ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ಮರೀಗೌಡ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ['ಸಿದ್ದರಾಮಯ್ಯ ವಿಶ್ವಾಸದ್ರೋಹಿ, ಅವರಿಗೆ ಕೃತಜ್ಞತೆ ಇಲ್ಲ']
ಸಂಧಾನ ಪ್ರಯತ್ನ : ಮತ್ತೊಂದು ಕಡೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಪುತ್ರ ಸಂಧಾನ ನಡೆಸಲು ಮುಂದಾಗಿದ್ದಾರೆ. ಆದರೆ, ಸಂಧಾನ ಮಾಡಲು ಇದು ಪಂಚಾಯಿತಿ ಅಲ್ಲ ಎಂದು ಸಿ.ಶಿಖಾ ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ವರ್ಗಾವಣೆ ಪ್ರಯತ್ನ : ಸಿ.ಶಿಖಾ ಅವರು ಮುಖ್ಯಮಂತ್ರಿಗಳ ಚೇಲಾಗಳಿಗೆ ಸೊಪ್ಪು ಹಾಕುವುದಿಲ್ಲ ಎಂಬ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡುವ ನಿರ್ಧಾರವನ್ನು ಸಿದ್ದರಾಮಯ್ಯ ಕೈಗೊಂಡಿದ್ದರು. ಆದರೆ, ತರಬೇತಿ ಹಿನ್ನೆಲೆಯಲ್ಲಿ ಅಕ್ಟೋಬರ್ ತನಕ ವರ್ಗಾವಣೆ ಮಾಡಬೇಡಿ ಎಂದು ಶಿಖಾ ಅವರು ಮನವಿ ಮಾಡಿದ್ದರಿಂದ ವರ್ಗಾವಣೆ ನಿರ್ಧಾರವನ್ನು ಕೈಬಿಡಲಾಗಿತ್ತು.
ಮರೀಗೌಡ ಪ್ರಕರಣದ ನಂತರ ಸಿ.ಶಿಖಾ ಅವರನ್ನು ವರ್ಗಾವಣೆ ಮಾಡಲು ಸಿದ್ಧತೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಎಂ ಪರಮಾಪ್ತನೇ ಜಿಲ್ಲಾಧಿಕಾರಿ ಮೇಲೆ ಹಲ್ಲೆ ಮಾಡಲು ಮುಂದಾಗಿರುವುದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ದಕ್ಷ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಕೆ.ಮರೀಗೌಡ ಪ್ರಕರಣ ದಿನದಿಂದ ದಿನಕ್ಕೆ ಹಲವು ತಿರುವು ಪಡೆಯುತ್ತಿದ್ದು, ಮುಂದೇನಾಗುತ್ತೆ? ಎಂಬುವುದನ್ನು ಕಾದು ನೋಡಬೇಕಿದೆ. ಈ ನಡುವೆ ಇಂದು ವಿಚಾರಣೆಗೆ ಹಾಜರಾಗಿ ಎಂದು ಮರೀಗೌಡರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.












Click it and Unblock the Notifications