ಮೇಕೆದಾಟು ಯೋಜನೆ; ಶೀಘ್ರವೇ ದೆಹಲಿಗೆ ಬಸವರಾಜ ಬೊಮ್ಮಾಯಿ ಭೇಟಿ
ಮೈಸೂರು, ಆಗಸ್ಟ್ 9; " ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ತಯಾರಾಗಿದ್ದು, ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನು ಭೇಟಿ ಮಾಡುವುದಾಗಿ" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. "ತಮಿಳುನಾಡಿನಲ್ಲಿ ನೀರಿನ ರಾಜಕಾರಣ ಮೊದಲಿನಿಂದಲೂ ಇದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಮುಂದಿಟ್ಟುಕೊಂಡು ಎಷ್ಟೋ ಪಕ್ಷಗಳು ಅಧಿಕಾರಕ್ಕೆ ಬಂದು ಹೋಗಿವೆ. ತಮಿಳುನಾಡಿನವರು ಏನೇ ಹೇಳಿದರು ನಾವು ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ" ಎಂದರು.
ವಿಡಿಯೋ; ಮೇಕೆದಾಟು ಯೋಜನೆ ಬಗ್ಗೆ ಪ್ರಜ್ವಲ್ ಪ್ರಶ್ನೆ, ಕೇಂದ್ರದ ಉತ್ತರ
"ಕಾವೇರಿ ಕೊಳ್ಳದಲ್ಲಿ ಲಭ್ಯವಾಗುವ ಗರಿಷ್ಠ ಪ್ರಮಾಣದ ನೀರಿನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ತಯಾರಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನು ಭೇಟಿ ಮಾಡುತ್ತೇನೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕಾನೂನಾತ್ಮಕವಾಗಿ ನಮಗೆ ಇರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತೇನೆ" ಎಂದು ತಿಳಿಸಿದರು.
ಮೇಕೆದಾಟು ಯೋಜನೆ; ಕೇಂದ್ರ ಸರ್ಕಾರದ ಧೋರಣೆ ಖಂಡಿಸಿದ ಕುಮಾರಸ್ವಾಮಿ
"ಈ ಸಂಬಂಧ ಕಾನೂನು ತಜ್ಞರ ಜೊತೆಗೂ ಚರ್ಚೆ ನಡೆಸುತ್ತೇನೆ. ನಮ್ಮ ನೀರು ನಮ್ಮ ಹಕ್ಕು ಅದನ್ನು ಪಡೆದುಕೊಳ್ಳುತ್ತೇನೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಖಾತೆ ಹಂಚಿಕೆ ಗೊಂದಲ; ಸಚಿವ ಸಂಪುಟ ರಚನೆ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. "ಸಚಿವರಿಗೆ ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಸಚಿವ ಸಂಪುಟ ರಚನೆಯಾಗಿದ್ದು, ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ ಇರಬಹುದು. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ" ಎಂದರು.
ಮೈಸೂರಿನ ಶಾಸಕ ರಾಮದಾಸ್ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, "ರಾಮದಾಸ್ ನನ್ನ ಆತ್ಮೀಯ ಸ್ನೇಹಿತರು, ಪಕ್ಷದಲ್ಲಿ ಅವರು ಹಿರಿಯರಾಗಿದ್ದು, ಅವರನ್ನು ಕರೆಸಿ ಮಾತನಾಡುತ್ತೇನೆ" ಎಂದು ಹೇಳಿದರು. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಎಸ್. ಎ. ರಾಮದಾಸ್ ಮುಖ್ಯಮಂತ್ರಿಗಳ ಆಗಮನದ ವೇಳೆ ಗೈರಾಗಿದ್ದರು.
ಮೇಕೆದಾಟು ವಿಚಾರವಾಗಿ ಪ್ರತಾಪ ಸಿಂಹಗೆ ತಿರುಗೇಟು ನೀಡಿದ ಕಾಂಗ್ರೆಸ್ ವಕ್ತಾರ
ಕೋವಿಡ್ ಲಾಕ್ಡೌನ್; ಕೊರೊನಾ ಪರಿಸ್ಥಿತಿ ನಿರ್ವಹಣೆ ಹಾಗೂ ಲಾಕ್ ಡೌನ್ ನಿಯಮ ಜಾರಿಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು, "ವೀಕೆಂಡ್ ಕರ್ಫ್ಯೂವನ್ನು ಗಡಿ ಜಿಲ್ಲೆಗಳ ಸ್ಥಿತಿಗತಿ ಮೇಲೆ ನಿರ್ಧರಿಸಿ ಆದೇಶ ಮಾಡಲಾಗಿದೆ. ಈಗ ಮೈಸೂರಿನ ಬಗ್ಗೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ. ಆ ಮೂಲಕ ಮಹಾರಾಷ್ಟ್ರ ಹಾಗೂ ಕೇರಳ ಭಾಗದಿಂದ ಬರುವ ಪ್ರವಾಸಿಗರ ಮೇಲೆ ನಿಗಾವಹಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವ ಮೂಲಕ ಪರಿಸ್ಥಿತಿ ನಿಭಾಯಿಸುವುದಾಗಿ" ತಿಳಿಸಿದರು.
ನಾನು ಒಪ್ಪಿಕೊಂಡಿದ್ದೇನೆ; ಯಡಿಯೂರಪ್ಪಗೆ ನೀಡಿದ ಕ್ಯಾಬಿನೆಟ್ ಸ್ಥಾನಮಾನದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, "ಸವಲತ್ತನ್ನು ಯಡಿಯೂರಪ್ಪ ಅವರು ನಿರಾಕರಿಸಿದ್ದು, ಇದನ್ನು ನಾನು ಒಪ್ಪಿಕೊಂಡಿದ್ದೇನೆ. ಅವರಿಗೆ ನಿಕಟ ಪೂರ್ವ ಸಿಎಂಗೆ ಸಿಗಬೇಕಾದ ಸ್ಥಾನಮಾನ ಎಂದಿನಂತೆ ನೀಡುತ್ತೇವೆ" ಎಂದರು.
ಆನಂದ್ ಸಿಂಗ್ ಭೇಟಿ; ಆನಂದ್ ಸಿಂಗ್ ಹಾಗೂ ತಮ್ಮ ಭೇಟಿ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ, "ಈ ಸಂಬಂಧ ಆನಂದ್ ಸಿಂಗ್ ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅವರಿಗೆ ಮನವರಿಕೆ ಮಾಡಿ ಕೊಟ್ಡಿದ್ದೇನೆ. ಇದಕ್ಕೆ ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ಮಾತಿಗೆ ಆನಂದ್ ಸಿಂಗ್ ಸಮಾಧಾನಗೊಂಡಿದ್ದಾರೆ" ಎಂದು ಹೇಳಿದರು.
ಸೋಮವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದರು. ಸಿಎಂ ಆಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಜೊತೆ ಸಂಪುಟದ ಸಹೋದ್ಯೋಗಿಗಳು, ಶಾಸಕರು ಇದ್ದರು.
ಕೋವಿಡ್ ನಿಯಮಗಳ ಪಾಲನೆ ಇಲ್ಲ; ಚಾಮುಂಡಿ ಬೆಟ್ಟದಲ್ಲಿ ಮುಖ್ಯಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ನಾಡಿನ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥಿಸಿದರು.
ಮುಖ್ಯಮಂತ್ರಿಗಳಿಗೆ ಸಚಿವರಾದ ಎಸ್. ಟಿ. ಸೋಮಶೇಖರ್, ಭೈರತಿ ಬಸವರಾಜ್, ವಿ. ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ಡಾ. ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದರು. ಮುಖ್ಯಮಂತ್ರಿಗಳನ್ನು ಶಾಸಕ ಜಿ. ಟಿ. ದೇವೇಗೌಡ ಬೃಹತ್ ಮಲ್ಲಿಗೆಯ ಹಾರವನ್ನು ಹಾಕುವ ಮೂಲಕ ಬರಮಾಡಿಕೊಂಡರು.
ಮುಖ್ಯಮಂತ್ರಿ ಬಂದು ಹೋಗುವವರೆಗೂ ಭಕ್ತರು ಚಾಮುಂಡೇಶ್ವರಿ ದೇಗುಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ಮುಖ್ಯಮಂತ್ರಿ ಬಂದು ಹೋಗುವವರೆಗೂ ದೂರದ ಊರುಗಳಿಂದ ಬಂದಿದ್ದ ಭಕ್ತರು ಕಾದು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.
Recommended Video
ಸಿಎಂ ಭೇಟಿ ವೇಳೆ ಕೊರೊನಾ ಮಾರ್ಗಸೂಚಿ ಮಂಗಮಾಯ ಆಗಿತ್ತು. ಯಾರೊಬ್ಬರೂ ಸಾಮಾಜಿಕ ಅಂತರ ಪಾಲಿಸಿಲಲಿಲ್ಲ. ಕೆಲವರು ಮಾಸ್ಕ್ ಹಾಕಿದ್ರೆ, ಕೆಲವರು ರಾಜಾರೋಷವಾಗಿ ಓಡಾಡುತ್ತಿದ್ದರು. ಪೊಲೀಸರು ಅಸಹಾಯಕತೆಯಿಂದ ನಿಂತಿದ್ದರು.