ನಗರಗಳಲ್ಲಿ ಮನೆಗಳ ನೀರಿನ ತೆರಿಗೆ ಪಾವತಿಗೆ ಒತ್ತಾಯವಿಲ್ಲ
ಮೈಸೂರು, ಮೇ 7: ನಗರ ಪ್ರದೇಶದಲ್ಲಿ ನೀರಿನ ಕಂದಾಯ ಪಾವತಿಗೆ ಮೂರು ತಿಂಗಳ ಸಮಯ ನೀಡಲಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಬಿ.ಎ ಬಸವರಾಜ್ ಸ್ಪಷ್ಟಪಡಿಸಿದರು.
ಮೈಸೂರು ನಗರ ಪಾಲಿಕೆಯಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ""ಇಡೀ ದೇಶದಲ್ಲಿ ಲಾಕ್ ಡೌನ್ ಇದೆ. ಆದ್ದರಿಂದ ಜನತೆಯನ್ನು ಕಂದಾಯ ಪಾವತಿಸಿ ಎಂದು ಕೇಳುವುದಕ್ಕಾಗಲ್ಲ'' ಎಂದರು.
ಮಾತು ಮುಂದುವರೆಸಿದ ಸಚಿವರು, ರಾಜ್ಯದಲ್ಲಿ ಈಗ ಆರ್ಥಿಕ ಪರಿಸ್ಥಿತಿ ಕೂಡ ಮೊದಲಿನಂತಿಲ್ಲ. ಹಾಗಾಗಿ ಈ ಸಂದರ್ಭದಲ್ಲಿ ಜನರನ್ನು ಹಣ ಪಾವತಿಸುವಂತೆ ಒತ್ತಾಯ ಮಾಡಲಾಗದು. ಅದಕ್ಕಾಗಿ ನೀರಿನ ಬಿಲ್ ಪಾವತಿಗೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.
ಇಂದಿನ ಸಭೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಮುಖವಾಗಿ ನೀರಿನ ಸಮಸ್ಯೆ ಬಗ್ಗೆ ತಿಳಿಸಿದ್ದಾರೆ. ನಾನು ಈ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮೈಸೂರು ವಿಶಾಲವಾದ ನಗರ. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ನಾನು ಮತ್ತೊಮ್ಮೆ ಬರುತ್ತೇನೆ. ಆಗ ಸಂಪೂರ್ಣವಾಗಿ ಮತ್ತಷ್ಟು ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಉಂಟಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಅಕ್ರಮ-ಸಕ್ರಮ ಯೋಜನೆ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಕ್ರಮ-ಸಕ್ರಮ ಯೋಜನೆ ಜಾರಿ ಸಂಬಂಧ ಮುಖ್ಯಮಂತ್ರಿಗಳು ಇದರ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಹೇಗೆ, ಯಾವ ರೀತಿ ಜಾರಿ ಮಾಡಬೇಕು ಎಂಬುದರ ಬಗ್ಗೆ ಸಿಎಂ ಕೆಲವೇ ದಿನಗಳಲ್ಲಿ ತಿಳಿಸುತ್ತಾರೆ. ನಾವು ಸಹ ಮುಖ್ಯಮಂತ್ರಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಸಚಿವ ಬಿ.ಎ ಬಸವರಾಜ ಹೇಳಿದರು.